ಕನ್ನಡಪ್ರಭ ವಾರ್ತೆ ಕುಶಾಲನಗರ
ಮೈಸೂರು ಮೂಲಕ ಕುಶಾಲನಗರ ಮಾರ್ಗವಾಗಿ ತಲಕಾವೇರಿಗೆ ತೆರಳಿದ ತಂಡವನ್ನು ಕುಶಾಲನಗರ ಗಡಿಭಾಗದ ಕೊಪ್ಪದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಮುಖರು ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು.
ತಲಕಾವೇರಿಯಿಂದ ಪೂಂಪ್ ಹಾರ್ ತನಕ ಸಾಗಲಿರುವ ಯಾತ್ರೆಗೆ ಇಂದು (20ರಂದು) ತಲಕಾವೇರಿ ಕ್ಷೇತ್ರದಲ್ಲಿ ಚಾಲನೆ ದೊರೆಯಲಿದೆ.ಬೆಳಗ್ಗೆ 9 ಗಂಟೆಗೆ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ಪವಿತ್ರ ತೀರ್ಥವನ್ನು ಕಲಶಗಳಲ್ಲಿ ಸಂಗ್ರಹಿಸಿ ಒಯ್ಯಲಾಗುವುದು. ನಂತರ ಯಾತ್ರೆಗೆ ಅರಮೇರಿ ಮಠಾಧೀಶರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರು 14ನೇ ವರ್ಷದ ಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಯಾತ್ರಾ ಅವಧಿಯಲ್ಲಿ ನದಿಯ ತಟಗಳಲ್ಲಿ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳು ನಡೆಯುವುದರೊಂದಿಗೆ ನದಿ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯಲಿದೆ ಎಂದು ರಮಾನಂದ ಸ್ವಾಮೀಜಿ ತಿಳಿಸಿದ್ದಾರೆ.
ಯಾತ್ರಾ ತಂಡ ಜಿಲ್ಲೆಯಲ್ಲಿ ಭಾಗಮಂಡಲ ಕುಶಾಲನಗರ ಮೂಲಕ ಕಣಿವೆ ಮಾರ್ಗವಾಗಿ ಸಂಚರಿಸಲಿದ್ದು ಇಂದು ಭಾಗಮಂಡಲದ ಸಂಗಮದಲ್ಲಿ ವಿಶೇಷ ಆರತಿ ಕಾರ್ಯಕ್ರಮ ನಡೆಯಲಿದೆ.ಕುಶಾಲನಗರದಲ್ಲಿ ಸಂಜೆ ನಾಲ್ಕು ಗಂಟೆಗೆ ಕಾವೇರಿ ಆರತಿ ಕ್ಷೇತ್ರದಲ್ಲಿ ಯಾತ್ರಾ ತಂಡ 165ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ. ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯುವುದು.
ಮರುದಿನ ಕಣಿವೆಯಲ್ಲಿ ಶ್ರೀ ರಾಮಲಿಂಗೇಶ್ವರ ದೇವಾಲಯ ಬಳಿ ಮಹಾ ಆರತಿ ಕಾರ್ಯಕ್ರಮ ಜರುಗಲಿದೆ. ತದನಂತರ ಕೊಣನೂರು ಮಾರ್ಗವಾಗಿ ರಾಮನಾಥಪುರದತ್ತ ಕಾವೇರಿ ನದಿ ಜಾಗೃತಿ ಯಾತ್ರೆ ತಂಡ ಸಾಗಲಿದೆ.ಕುಶಾಲನಗರಕ್ಕೆ ಯಾತ್ರಾ ತಂಡ ಆಗಮಿಸಿದ ವೇಳೆ ಸ್ಥಳೀಯ ಕಾವೇರಿ ಮಹಾ ಆರತಿ ಬಳಗದ ಪ್ರಮುಖರಾದ ವನಿತಾ ಚಂದ್ರಮೋಹನ್ ಮತ್ತಿತರರು ಸಾಧು ಸಂತರಿಗೆ ಪವಿತ್ರ ಕಾವೇರಿ ತೀರ್ಥ ನೀಡುವುದರೊಂದಿಗೆ ಬರಮಾಡಿಕೊಂಡರು.
ಈ ಸಂದರ್ಭ ಸಾಧು ಸಂತರ ತಂಡದ ಸದಸ್ಯರು ಗಡಿಭಾಗದಲ್ಲಿರುವ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದರು.