ವಿಧಾನಸಭೆ ಆಯ್ತು, ಪರಿಷತಲ್ಲೂಉತ್ತರ ಸಿಗದ ಪ್ರಶ್ನೆಗಳ ಹಾವಳಿ!

KannadaprabhaNewsNetwork |  
Published : Mar 25, 2026, 01:45 AM IST
ಸದನ | Kannada Prabha

ಸಾರಾಂಶ

ಇತ್ತೀಚೆಗೆ ವಿಧಾನ ಸಭೆಯಲ್ಲಿ ಅಧಿಕಾರಿಗಳು ಶಾಸಕರ ಪ್ರಶ್ನೆಗೆ ಉತ್ತರ ನೀಡದೆ ಬಾಕಿ ಉಳಿಸಿಕೊಂಡಿದ್ದಕ್ಕೆ ಸ್ಪೀಕರ್‌ ಯು.ಟಿ.ಖಾದರ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸಭಾತ್ಯಾಗ ಮಾಡಿದ್ದರು. ಇದೇ ವಿಚಾರ ವಿಧಾನ ಪರಿಷತ್‌ನಲ್ಲೂ ಪುನರಾವರ್ತನೆ ಆಗಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಕಿಡಿ ಕಾರಿದ್ದಾರೆ.

ಕನ್ನಡಪ್ರಭ ವಾರ್ತೆ ವಿಧಾನ ಪರಿಷತ್‌

ಇತ್ತೀಚೆಗೆ ವಿಧಾನ ಸಭೆಯಲ್ಲಿ ಅಧಿಕಾರಿಗಳು ಶಾಸಕರ ಪ್ರಶ್ನೆಗೆ ಉತ್ತರ ನೀಡದೆ ಬಾಕಿ ಉಳಿಸಿಕೊಂಡಿದ್ದಕ್ಕೆ ಸ್ಪೀಕರ್‌ ಯು.ಟಿ.ಖಾದರ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸಭಾತ್ಯಾಗ ಮಾಡಿದ್ದರು. ಇದೇ ವಿಚಾರ ವಿಧಾನ ಪರಿಷತ್‌ನಲ್ಲೂ ಪುನರಾವರ್ತನೆ ಆಗಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಕಿಡಿ ಕಾರಿದ್ದಾರೆ.

ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಬುಧವಾರದೊಳಗೆ ಉತ್ತರ ನೀಡದಿದ್ದರೆ ಅಂಥ ಅಧಿಕಾರಿಗಳ ವಿರುದ್ಧ ತಮ್ಮದೇ ಆದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ತಾವು ಕೊಡುವ ಆದೇಶವನ್ನು ಸರ್ಕಾರ ಪಾಲಿಸಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಕಟುವಾಗಿ ಹೇಳಿದರು.

ಪ್ರಶ್ನೋತ್ತರ ಕಲಾಪದ ನಂತರ ವಿಷಯ ಪ್ರಸ್ತಾಪಿಸಿದ ಜೆಡಿಎಸ್‌ನ ಬೋಜೇಗೌಡ ಅವರು ಸದಸ್ಯರು ಕೇಳುವ ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರ ನೀಡುತ್ತಿಲ್ಲ. ನಿತ್ಯ ಸಾಕಷ್ಟು ಪ್ರಶ್ನೆಗಳಿಗೆ ಉತ್ತರ ಸಿಗದೆ ಬಾಕಿ ಉಳಿಸಿಕೊಳ್ಳಲಾಗುತ್ತಿದೆ. ಸದನವನ್ನು ಅಧಿಕಾರಿಗಳು ಹಗುರವಾಗಿ ತೆಗೆದುಕೊಂಡಿದ್ದಾರೆ. ಅಧಿವೇಶನ ಮುಗಿಯುತ್ತಾ ಬರುತ್ತಿದ್ದರೂ ಉತ್ತರ ನೀಡಲು 10-15 ದಿನ ಕಾಲಾವಕಾಶ ಕೇಳುತ್ತಿದ್ದಾರೆ. ಸಭಾಪತಿಗಳು ಸರ್ಕಾರಕ್ಕೆ ಹತ್ತಾರು ಬಾರಿ ಹೇಳಿದರೂ ಉತ್ತರ ಕೊಡಿಸುವ ಕೆಲಸ ಮಾಡುತ್ತಿಲ್ಲ. ಸದಸ್ಯರ ರಕ್ಷಕರಾಗಿರುವ ಸಭಾಪತಿಗಳು ಈ ವಿಷಯದಲ್ಲಿ ಅಸಹಾಯಕರಾಗಬಾರದು ಎಂದರು.

ಸದಸ್ಯರ ಮಾತಿಗೆ ಸ್ಪಂದಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು, ಕಲಾಪ ಮುಗಿದ ನಂತರ ಸಭಾನಾಯಕ, ಪ್ರತಿಪಕ್ಷದ ನಾಯಕ, ಎರಡೂ ಕಡೆಯ ಮುಖ್ಯ ಸಚೇತಕರು ಹಾಗೂ ಜೆಡಿಎಸ್‌ ನಾಯಕರು ತಮ್ಮ ಕಚೇರಿಗೆ ಬಂದು ಬಾಕಿ ಉತ್ತರಗಳ ಸಂಖ್ಯೆ ಸೇರಿ ಎಲ್ಲ ವಿವರವನ್ನು ತಮಗೆ ತಿಳಿಸಬೇಕು. ಸದಸ್ಯರಿಂದ ಅಸಮರ್ಥ ಸಭಾಪತಿ ಎಂದು ಹೇಳಿಸಿಕೊಳ್ಳಲು ಇಷ್ಟವಿಲ್ಲ. ಉತ್ತರ ನೀಡದ ಅಧಿಕಾರಿಗಳ ವಿರುದ್ಧ ತಮ್ಮದೇ ಆದ ರೀತಿಯಲ್ಲಿ ಕ್ರಮ ಜರುಗಿಸಲಾಗುವುದು. ತಾವು ಕೊಡುವ ನಿರ್ದೇಶನವನ್ನು ಸರ್ಕಾರ ಪಾಲಿಸಬೇಕು ಎಂದು ಹೇಳಿದರು.

ಸದನಕ್ಕೆ ಅಧಿಕಾರಿಗಳನ್ನು ಕರೆಸಿ-ಆಗ್ರಹ:

ಕಾಂಗ್ರೆಸ್‌ನ ಪುಟ್ಟಣ್ಣ ಮಾತನಾಡಿ, ಉತ್ತರ ನೀಡದ ಅಧಿಕಾರಿಗಳನ್ನು ಸದನಕ್ಕೆ ಕರೆಸಿ ಕಟಕಟೆಯಲ್ಲಿ ನಿಲ್ಲಿಸಬೇಕು. ಅಂತಹ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸಭಾಪತಿಗಳು ತಮಗಿರುವ ಅಧಿಕಾರ ಚಲಾಯಿಸಬೇಕು. ಅಸಹಾಯಕತೆ ವ್ಯಕ್ತಪಡಿಸಬಾರದು. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಾಗ ಮಾತ್ರ ಉಳಿದವರಿಗೆ ಸರಿಯಾದ ಸಂದೇಶ ಹೋಗುತ್ತದೆ ಎಂದರು.

ಕಾಂಗ್ರೆಸ್‌ನ ಎಸ್‌.ರವಿ ಮಾತನಾಡಿ, ಸದಸ್ಯರ ಹಕ್ಕುಗಳನ್ನು ರಕ್ಷಿಸಬೇಕಾದ ಸಭಾಪತಿಗಳು ಹತ್ತು ಬಾರಿ ಸೂಚನೆ ನೀಡಿದರೂ ಉತ್ತರ ನೀಡದೇ ಇದ್ದಾಗ ಒಂದು ಹೆಜ್ಜೆ ಮುಂದೆ ಹೋಗಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಕಳೆದ ಬೆಳಗಾವಿ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರ ಬರಲಿಲ್ಲ. ಈಗ ಕೇಳಿದ ಪ್ರಶ್ನೆಗಳಿಗೂ ಉತ್ತರ ಬರುವುದಿಲ್ಲ. ಹೀಗಾಗಿ ಸಭಾಪತಿಗಳು ಕಠಿಣವಾದ ಕ್ರಮ ಜರುಗಿಸಬೇಕು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವರ ಅಪಹಾಸ್ಯಕ್ಕೆ ಕ್ಷಮೆ ಕೇಳುವೆ: ರಣವೀರ್‌
ಎಲ್ಲ ಗ್ರಾಮ ಪಂಚಾಯಿತಿಗಳನ್ನು ಕ್ಷಯರೋಗ ಮುಕ್ತಗೊಳಿಸಲು ಶ್ರಮಿಸಿ: ಜಿಪಂ ಸಿಇಒ ಮೋನಾ ರೋತ್