ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಮೂಲಕತೃ ಮುರಿಗೆಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳ ಲೀಲಾವಿಶ್ರಾಂತಿ ಸನ್ನಿಧಾನದಲ್ಲಿ ಗುರುವಾರ ಏರ್ಪಡಿಸಿದ್ದ ವೈರಾಗ್ಯನಿಧಿ ಅಕ್ಕಮಹಾದೇವಿ ಜಯಂತ್ಯುತ್ಸವದಲ್ಲಿ ಭಾಗವಹಿಸಿ ವಿಷಯಾವಲೋಕನ ಮಾಡಿ, ಅಕ್ಕಮಹಾದೇವಿ ಶ್ರೇಷ್ಠ ಅನುಭಾವಿ. ಕನ್ನಡದ ಮೊಟ್ಟಮೊದಲ ಕವಯತ್ರಿ. ಅಷ್ಟೇ ಅಲ್ಲ ಸ್ತ್ರೀ ಕುಲಕ್ಕೆ ಗೌರವ ತಂದುಕೊಡುವ ಕೆಲಸ ಆಕೆಯಿಂದ ನಡೆಯಿತು ಎಂದರು.
ಹನ್ನೆರಡನೇ ಶತಮಾನದ ಆ ಕಾಲದಲ್ಲಿ ಹೆಣ್ಣಿಗೆ ಯಾವ ಸ್ಥಾನಮಾನ ಇತ್ತು ಎನ್ನುವುದ ಊಹಿಸಿಕೊಂಡರೆ ಮೈ ರೋಮಾಂಚನವಾಗುತ್ತದೆ. ಅಂತಹ ಕಠಿಣ ವ್ಯವಸ್ಥೆಯಲ್ಲಿ ಸ್ತ್ರೀಕುಲದ ಅಸ್ಮಿತೆಯನ್ನು ಉಳಿಸಲು ಆದರ್ಶಕ್ಕಾಗಿ ಒಂದು ವ್ಯವಸ್ಥೆಯನ್ನೇ ಧಿಕ್ಕರಿಸಿ ಬಂದಳು. ಸಾಮಾಜಿಕ ಮತ್ತು ರಾಜಪ್ರಭುತ್ವ ಎರಡನ್ನೂ ವಿರೋಧಿಸಿದ ಅಕ್ಕನ ಇಡೀ ಬದುಕೇ ಹೋರಾಟದ ಹಾದಿಯಾಗಿತ್ತು. ಈ ಹೋರಾಟ ಕೇವಲ ತನಗಾಗಿ ಅಲ್ಲ. ಇಡೀ ಹೆಣ್ಣುಸಂಕುಲಕ್ಕಾಗಿಯೇ ಹೋರಾಟ ಮೀಸಲಾಗಿತ್ತು ಎಂದರು.12ನೇ ಶತಮಾನದಲ್ಲಿ ಅಕ್ಕಮಹಾದೇವಿ ಮದುವೆಯಾದರೂ ಲೌಕಿಕ ಪ್ರಪಂಚದ ಗೊಡವೆ ಬೇಡ ಎಂದು ಧಿಕ್ಕರಿಸಿ ತನ್ನ ಪತಿ ಚೆನ್ನಮಲ್ಲಿಕಾರ್ಜುನ ಎನ್ನುವ ಪಾರಮಾರ್ಥಿಕ ಗಂಡನನ್ನು ಹುಡುಕುತ್ತ ಕಲ್ಯಾಣದ ಅಣ್ಣ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ಪ್ರವೇಶಿಸುತ್ತಾಳೆ. ಅಲ್ಲಿನ ಶರಣತಿಂಥಿಣಿಯೊಳಗೆ ಉತ್ತರವನ್ನು ಯಾವ ರೀತಿ ಕೊಟ್ಟಿರಬಹುದು. ಸನ್ನಿವೇಶ ನೆನಪಿಸಿಕೊಂಡರೆ ಭಯವಾಗುತ್ತದೆ. ಆ ಧೈರ್ಯ ಬರಲು ಅಕ್ಕನಂಥವರಿಗೆ ಮಾತ್ರ ಸಾಧ್ಯ ಎಂದರು.
ಸಮ್ಮುಖ ವಹಿಸಿದ್ದ ಬಸವ ಮುರುಘೇಂದ್ರ ಸ್ವಾಮೀಜಿ ಮಾತನಾಡಿ, ಜಗತ್ತಿನ ಮೊಟ್ಟಮೊದಲ ಸಂಸತ್ ಅನುಭವ ಮಂಟಪ. ಅಲ್ಲಿಗೆ ಅತ್ಯಂತ ಚಿಕ್ಕವಯಸ್ಸಿನ ಅಕ್ಕಮಹಾದೇವಿ ಬರಲು ಕಾರಣ ಆಕೆಗೆ ದಿವ್ಯಜ್ಞಾನ ಪ್ರಾಪ್ತವಾಗಿತ್ತು. ಆಕೆಯ ಅನೇಕ ವಚನಗಳು ಜೀವನ ಮೌಲ್ಯಗಳನ್ನು ಕಟ್ಟಿಕೊಡುವ ದಾರಿದೀಪಗಳಾಗಿವೆ ಎಂದರು.
ರಾವಂದೂರು ಮುರುಘಾಮಠದ ಮೋಕ್ಷಪತಿ ಸ್ವಾಮೀಜಿ, ಕಲ್ಕೆರೆಯ ಪೂರ್ಣಾನಂದರು, ಹೊಳಲ್ಕೆರೆಯ ತಿಪ್ಪೇರುದ್ರಸ್ವಾಮಿ, ನಾಗೇನಹಳ್ಳಿಯ ಗೋವಿಂದ ಸ್ವಾಮೀಜಿ, ಬಾಲ್ಯವಿವಾಹ ವಿರೋಧಿ ಸಮಿತಿಯ ಅಧ್ಯಕ್ಷೆ ಡಿ.ಎಸ್.ಹಳ್ಳಿ ಕವಿತಾ ಹನುಮಂತರೆಡ್ಡಿ, ರೈತಸಂಘದ ಮುಖಂಡರಾದ ಶಾಂತಮ್ಮ, ಅನ್ನಪೂರ್ಣ ಸಜ್ಜನ್, ಡಾ.ದೊಡ್ಡಮಲ್ಲಯ್ಯ, ಜಿ.ಟಿ ನಂದೀಶ್, ಟಿ.ಪಿ ಜ್ಞಾನಮೂರ್ತಿ, ಬಸವರಾಜ ಕಟ್ಟಿ, ನೀಲಮ್ಮ, ಕವಿ ಗಂಗಾಧರಪ್ಪ, ಕಣಿವೆಮಾರಮ್ಮ ಸಂಘದ ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಸಮಾಜಗಳ, ಸಂಘ-ಸಂಸ್ಥೆಗಳ ಅನೇಕ ಪದಾಧಿಕಾರಿಗಳು, ಮಹಿಳಾಪರ ಸಂಘಟನೆಗಳ ಪ್ರತಿನಿಧಿಗಳು ಇದ್ದರು. ಜಮುರಾ ಕಲಾವಿದ ಉಮೇಶ್ ಪತ್ತಾರ್ ಅಕ್ಕಮಹಾದೇವಿಯವರ ವಚನ ಪ್ರಾರ್ಥನೆ ಮಾಡಿದರು. ಅಧ್ಯಾಪಕಿ ಡಾ.ಸ್ನೇಹಲತಾ ಸ್ವಾಗತಿಸಿದರು. ಅಧ್ಯಾಪಕಿ ಪೂಜಾ ಕಾರ್ಯಕ್ರಮ ನಿರೂಪಿಸಿದರು.