ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಕಳೆದ ಹಲವಾರು ತಿಂಗಳುಗಳಿಂದ ನಗರದಾದ್ಯಂತ ಹಾಡುಹಗಲೇ ಕಳ್ಳತನ ಪ್ರಕರಣಗಳು ನಿರೀಕ್ಷೆಗೂ ಮೀರಿ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಗಮನಹರಿಸುತ್ತಿಲ್ಲ, ಇತ್ತೀಚಿಗಷ್ಟೇ 6 ಜನ ಚಡ್ಡಿಗ್ಯಾಂಗ್ ಕಳ್ಳರು ತಿಪ್ಪೇಸ್ವಾಮಿ, ಜಾಫರ್ ಶರೀಫ್ ಲೇಔಟ್ ವ್ಯಾಪ್ತಿಯಲ್ಲಿ ರಾಜರೋಷವಾಗಿ ಗಂಟೆಗಟ್ಟಲೆ ಓಡಾಡಿದರೂ ಸಹ ಪೊಲೀಸರಿಗೆ ಸುಳಿವೆ ಇಲ್ಲ.ಒಟ್ಟಿನಲ್ಲಿ ಪೊಲೀಸ್ ಇಲಾಖೆಯ ಕಾರ್ಯ ಜನತೆಗೆ ಸಮದಾನ ತಂದಿಲ್ಲ. ನಗರದ ಯಾವ ಭಾಗದಲ್ಲೂ ಸಿಸಿ ಕ್ಯಾಮೆರಾ ಅಳವಡಿಕೆ ಇಲ್ಲ, ವಿಶೇಷವಾಗಿ ಸಂಚಾರಿ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ, ಬಳ್ಳಾರಿ ಪಾವಗಡ ರಸ್ತೆಯಲ್ಲಿ ಸಾರ್ವಜನಿಕರು ವಾಹನ ಓಡಾಡುವುದೇ ಕಷ್ಟವಾಗಿದೆ. ಪೊಲೀಸ್ ಇಲಾಖೆ ಮಾತ್ರ ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿರುವುದು ನೋವಿನ ಸಂಗತಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಆರೋಪಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೊಟ್ಟಮೊದಲ ಬಾರಿಗೆ ರಾಜ್ಯದಲ್ಲಿ ಎಲ್ಲಾ ಕ್ಷೇತ್ರದಲ್ಲೂ ಭ್ರಷ್ಟಾಚಾರ ತಾಂಡವಾಡುತ್ತಿದೆ, ಸಚಿವರು ಅಧಿಕಾರಿಗಳು, ಪೈಪೋಟಿ ನಡೆಸಿ ಭ್ರಷ್ಟಾಚಾರದಲ್ಲಿ ನಿರತರಾಗಿದ್ಧಾರೆ. ಲಂಚಕ್ಕೆ ಹೆಚ್ಚು ಪ್ರಾಧ್ಯಾನ್ಯತೆ ನೀಡಲಾಗುತ್ತಿದೆ. ವಿಶೇಷವಾಗಿ ರಾಜ್ಯದ ಪರಿಶಿಷ್ಟ ಪಂಗಡದ ಕೋಟ್ಯಾಂತರ ರು. ಹಣವನ್ನು ದುರ್ಬಳಕೆ ಮಾಡಲಾಗಿದೆ. ಪರಿಶಿಷ್ಟ ಜಾತಿಯ ಕೋಟ್ಯಂತರ ರು. ಹಣವನ್ನು ಸಹ ಖರ್ಚು ಮಾಡಿಲ್ಲ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲೂ ಪಾರದರ್ಶಕತೆ ಇಲ್ಲ, ಕೇವಲ ವೈಪಲ್ಯಗಳ ಮೂಲಕ ಸರ್ಕಾರ ಅಸ್ಥಿತ್ವದಲ್ಲಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಸಾರ್ವಜನಿಕರು ಸೂಕ್ತನಿರ್ಧಾರ ಕೈಗೊಳ್ಳುವರು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಮಂಡಿ ರಾಮದಾಸ್, ಸಿ.ಬಿ.ಆದಿಭಾಸ್ಕರ ಶೆಟ್ಟಿ, ವೆಂಕಟೇಶ್ ಯಾದವ್, ಸೋಮಶೇಖರ ಮಂಡಿಮಠ, ಜಿ.ಪಿ.ಜಯಪಾಲಯ್ಯ, ಮಂಡಲಾಧ್ಯಕ್ಷ ಬಿ.ಎಂ.ಸುರೇಶ್ ಮುಂತಾದವರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.