ಯಲ್ಲಾಪುರ: ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ನೇರವಾದ ಆರೋಪವಿದ್ದರೂ ರಾಜೀನಾಮೆ ಪಡೆಯದೇ ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಇಡೀ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಆರೋಪಿಸಿದರು.
ಯಲ್ಲಾಪುರ: ತಾಲೂಕಿನ ಹುಲ್ಲೋರಮನೆಯ ಗಜಾನನ- ಮಾರುತಿ ದೇವಾಲಯದ ಆವರಣದಲ್ಲಿ ಜ. ೪ರಂದು ಮಧ್ಯಾಹ್ನ ೨.೩೦ಕ್ಕೆ ಜಿಲ್ಲಾ ಮಟ್ಟದ ಭಗವದ್ಗೀತಾ ಅಭಿಯಾನದ ಸಮರ್ಪಣಾ ಸಮಾರಂಭ ಸ್ವರ್ಣವಲ್ಲೀ ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ಭಗವದ್ಗೀತಾ ಅಭಿಯಾನ ಸಮಿತಿ ತಾಲೂಕಾಧ್ಯಕ್ಷ ಜಿ.ಎನ್. ಭಟ್ಟ ತಟ್ಟೀಗದ್ದೆ ತಿಳಿಸಿದರು.ಜ. ೧ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮರ್ಪಣಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸುವ ಸ್ವಾಮೀಜಿಯವರನ್ನು ಮಾಗೋಡು ಕ್ರಾಸ್ನಿಂದ ಮೆರವಣಿಗೆಯನ್ನು ದೇವಾಲಯದವರೆಗೆ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಗುವುದು. ಈ ಸಂದರ್ಭದಲ್ಲಿ ಪಾಲ್ಗೊಳ್ಳುವ ಸಾವಿರಾರು ಜನರು ಏಕಕಂಠದಿಂದ ಭಗವದ್ಗೀತೆಯನ್ನು ಪಠಿಸಲಿದ್ದಾರೆ ಎಂದರು.ಸಾನ್ನಿಧ್ಯ ವಹಿಸುವ ಸೋಂದಾ ಸ್ವರ್ಣವಲ್ಲಿಯ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರೊಂದಿಗೆ ಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿಯವರು, ಶಿರಳಗಿಯ ಬ್ರಹ್ಮಾನಂದ ಭಾರತೀ ಸ್ವಾಮೀಜಿಯವರು ಮತ್ತು ನೆಲೆಮಾವು ಮಠದ ಮಾಧವಾನಂದ ಭಾರತೀ ಸ್ವಾಮೀಜಿ ಕೂಡಾ ಸಾನ್ನಿಧ್ಯ ವಹಿಸಲಿದ್ದಾರೆ.
ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ ಹೆಬ್ಬಾರ, ಭಗವದ್ಗೀತಾ ಅಭಿಯಾನ ಸಮಿತಿಯ ಜಿಲ್ಲಾಧ್ಯಕ್ಷ ಮುರಳೀಧರ ಪ್ರಭು, ಸ್ವರ್ಣವಲ್ಲೀ ಮಠದ ಅಧ್ಯಕ್ಷ ವಿಘ್ನೇಶ್ವರ ಹೆಗಡೆ ಬೊಮ್ಮನಳ್ಳಿ, ಟಿಎಂಎಸ್ ಅಧ್ಯಕ್ಷ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ, ಹುಲ್ಲೋರಮನೆ ಗಜಾನನ- ಮಾರುತಿ ದೇವಾಲಯದ ಪ್ರಧಾನ ಅರ್ಚಕ ನಾರಾಯಣ ಭಟ್ಟ ಜೋಗಿನಜಡ್ಡಿ ಆಗಮಿಸುವರು.ಭಗವದ್ಗೀತಾ ಸಮಿತಿಯ ರಾಜ್ಯ ಪ್ರಮುಖ ಡಾ.ಶಂಕರ ಭಟ್ಟ ಬಾಲೀಗದ್ದೆ, ಕೇಂದ್ರ ಸಮಿತಿ ಸದಸ್ಯ ಶಂಕರ ಭಟ್ಟ ತಾರೀಮಕ್ಕಿ, ಜಿಲ್ಲಾ ಸಂಚಾಲಕ ಕೆ.ಜಿ. ಬೋಡೆ ಸುದ್ದಿಗೋಷ್ಟಿಯಲ್ಲಿದ್ದರು.