ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ಕಾಂಗ್ರೆಸ್‌ ಸರ್ಕಾರವೇ ಹೊಣೆ: ಹರಿಪ್ರಕಾಶ ಕೋಣೆಮನೆ

KannadaprabhaNewsNetwork | Published : Jan 2, 2025 12:31 AM

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು. ಸಚಿನ್ ಪಾಂಚಾಳ ಕುಟುಂಬಕ್ಕೆ ಒಂದು ಕೋಟಿ ರು. ಪರಿಹಾರ ನೀಡಬೇಕು.

ಯಲ್ಲಾಪುರ: ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ನೇರವಾದ ಆರೋಪವಿದ್ದರೂ ರಾಜೀನಾಮೆ ಪಡೆಯದೇ ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಇಡೀ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು. ಸಚಿನ್ ಪಾಂಚಾಳ ಕುಟುಂಬಕ್ಕೆ ಒಂದು ಕೋಟಿ ರು. ಪರಿಹಾರ ನೀಡಬೇಕು. ಅವರ ಕುಟುಂಬಸ್ಥರಿಗೆ ಉದ್ಯೋಗ ನೀಡಬೇಕು ಎಂಬ ಮೂರು ಬೇಡಿಕೆಗಳು ಜ. ೩ರ ಸಂಜೆಯೊಳಗೆ ಈಡೇರದಿದ್ದರೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.ರಾಜ್ಯದ ಕಾಂಗ್ರೆಸ್ ಸರ್ಕಾರ ಸರಣಿ ಕೊಲೆಗಡುಕ, ಕಿಕ್‌ಬ್ಯಾಕ್ ಸರ್ಕಾರ. ವಾಲ್ಮಿಕಿ ನಿಗಮದ ಅಧಿಕಾರಿಯೊಬ್ಬರು ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಲಂಚಕ್ಕಾಗಿ ಒತ್ತಡ ಹೇರಿ ಆತ್ಮಹತ್ಯೆ ಮಾಡಿಕೊಳ್ಳುವಂಥ ಸ್ಥಿತಿಗೆ ಸರ್ಕಾರದ ಸಚಿವರು, ಅವರ ಆಪ್ತರು ಜನರನ್ನು ತಂದು ನಿಲ್ಲಿಸಿದ್ದಾರೆ ಎಂದು ದೂರಿದರು.ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ೧೨೫೨ ಬಾಣಂತಿಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಮೃತಪಟ್ಟಿದ್ದಾರೆ. ಕಳಪೆ ಗುಣಮಟ್ಟದ ಔಷಧ, ಆಸ್ಪತ್ರೆಗಳಲ್ಲಿನ ಅವ್ಯವಸ್ಥೆಯ ಹೊಣೆ ಹೊತ್ತು ಆರೋಗ್ಯ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಮಾಧ್ಯಮ ಸಂಚಾಲಕ ಕೆ.ಟಿ. ಹೆಗಡೆ, ಇಡಗುಂದಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಿ.ಆರ್. ಭಾಗ್ವತ, ಜಿಲ್ಲಾ ಪ್ರಮುಖರಾದ ಉಮೇಶ ಭಾಗ್ವತ, ಗೋಪಾಲಕೃಷ್ಣ ಗಾಂವ್ಕರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.4ರಂದು ಜಿಲ್ಲಾ ಮಟ್ಟದ ಭಗವದ್ಗೀತಾ ಅಭಿಯಾನದ ಸಮರ್ಪಣಾ ಸಮಾರಂಭ

ಯಲ್ಲಾಪುರ: ತಾಲೂಕಿನ ಹುಲ್ಲೋರಮನೆಯ ಗಜಾನನ- ಮಾರುತಿ ದೇವಾಲಯದ ಆವರಣದಲ್ಲಿ ಜ. ೪ರಂದು ಮಧ್ಯಾಹ್ನ ೨.೩೦ಕ್ಕೆ ಜಿಲ್ಲಾ ಮಟ್ಟದ ಭಗವದ್ಗೀತಾ ಅಭಿಯಾನದ ಸಮರ್ಪಣಾ ಸಮಾರಂಭ ಸ್ವರ್ಣವಲ್ಲೀ ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ಭಗವದ್ಗೀತಾ ಅಭಿಯಾನ ಸಮಿತಿ ತಾಲೂಕಾಧ್ಯಕ್ಷ ಜಿ.ಎನ್. ಭಟ್ಟ ತಟ್ಟೀಗದ್ದೆ ತಿಳಿಸಿದರು.ಜ. ೧ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮರ್ಪಣಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸುವ ಸ್ವಾಮೀಜಿಯವರನ್ನು ಮಾಗೋಡು ಕ್ರಾಸ್‌ನಿಂದ ಮೆರವಣಿಗೆಯನ್ನು ದೇವಾಲಯದವರೆಗೆ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಗುವುದು. ಈ ಸಂದರ್ಭದಲ್ಲಿ ಪಾಲ್ಗೊಳ್ಳುವ ಸಾವಿರಾರು ಜನರು ಏಕಕಂಠದಿಂದ ಭಗವದ್ಗೀತೆಯನ್ನು ಪಠಿಸಲಿದ್ದಾರೆ ಎಂದರು.ಸಾನ್ನಿಧ್ಯ ವಹಿಸುವ ಸೋಂದಾ ಸ್ವರ್ಣವಲ್ಲಿಯ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರೊಂದಿಗೆ ಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿಯವರು, ಶಿರಳಗಿಯ ಬ್ರಹ್ಮಾನಂದ ಭಾರತೀ ಸ್ವಾಮೀಜಿಯವರು ಮತ್ತು ನೆಲೆಮಾವು ಮಠದ ಮಾಧವಾನಂದ ಭಾರತೀ ಸ್ವಾಮೀಜಿ ಕೂಡಾ ಸಾನ್ನಿಧ್ಯ ವಹಿಸಲಿದ್ದಾರೆ.

ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ ಹೆಬ್ಬಾರ, ಭಗವದ್ಗೀತಾ ಅಭಿಯಾನ ಸಮಿತಿಯ ಜಿಲ್ಲಾಧ್ಯಕ್ಷ ಮುರಳೀಧರ ಪ್ರಭು, ಸ್ವರ್ಣವಲ್ಲೀ ಮಠದ ಅಧ್ಯಕ್ಷ ವಿಘ್ನೇಶ್ವರ ಹೆಗಡೆ ಬೊಮ್ಮನಳ್ಳಿ, ಟಿಎಂಎಸ್ ಅಧ್ಯಕ್ಷ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ, ಹುಲ್ಲೋರಮನೆ ಗಜಾನನ- ಮಾರುತಿ ದೇವಾಲಯದ ಪ್ರಧಾನ ಅರ್ಚಕ ನಾರಾಯಣ ಭಟ್ಟ ಜೋಗಿನಜಡ್ಡಿ ಆಗಮಿಸುವರು.ಭಗವದ್ಗೀತಾ ಸಮಿತಿಯ ರಾಜ್ಯ ಪ್ರಮುಖ ಡಾ.ಶಂಕರ ಭಟ್ಟ ಬಾಲೀಗದ್ದೆ, ಕೇಂದ್ರ ಸಮಿತಿ ಸದಸ್ಯ ಶಂಕರ ಭಟ್ಟ ತಾರೀಮಕ್ಕಿ, ಜಿಲ್ಲಾ ಸಂಚಾಲಕ ಕೆ.ಜಿ. ಬೋಡೆ ಸುದ್ದಿಗೋಷ್ಟಿಯಲ್ಲಿದ್ದರು.