ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಅಧಿವೇಶನದಲ್ಲಿ ಮಹಾತ್ಮಾ ಗಾಂಧಿಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಕರ್ನಾಟಕಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣಿಸಿದರು.ಪೀರನವಾಡಿಯ ಗಾಂಧಿ ಭವನಕ್ಕೆ ಮಂಗಳವಾರ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾದಾಗ ಗಂಗಾಧರ ದೇಶಪಾಂಡೆ ಹಾಗೂ ಜವಾಹರ್ ಲಾಲ್ ನೆಹರೂ ಅವರು ಮಾತ್ರ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆಗ ದೇಶಪಾಂಡೆ ಅವರು ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆಸಲು ಆಹ್ವಾನ ನೀಡಿದರು. ಆ ಅಧಿವೇಶನಕ್ಕೆ ಬರುವ ಜನರಿಗೆ ಕುಡಿಯುವ ನೀರು ಕಲ್ಪಿಸಲು ಬಾವಿ ತೋಡಲಾಗಿತ್ತು ಎಂದರು.100 ವರ್ಷಗಳ ನಂತರ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅಂದು ಗಾಂಧಿ ಇಂದು ಖರ್ಗೆ ಅವರು ಅಧ್ಯಕ್ಷರಾಗಿದ್ದಾರೆ. ಈ ಮಧ್ಯೆ ಅನೇಕ ಮಹಾನ್ ನಾಯಕರು ಆ ಸ್ಥಾನ ಅಲಂಕರಿಸಿದ್ದಾರೆ. ನಿಜಲಿಂಗಪ್ಪನವರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಕೂಡ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. ಈ ಬಾರಿಯ ಅಧಿವೇಶನವನ್ನು ಗುಜರಾತಿನ ಸಾಬರಮತಿ ಆಶ್ರಮದಲ್ಲಿ ನಡೆಸುವ ಬಗ್ಗೆ ಚರ್ಚೆ ನಡೆಯಿತು. ನಂತರ ನಾನು ಎಐಸಿಸಿಗೆ ಬೆಳಗಾವಿಯಲ್ಲೇ ನಡೆಸುವ ಪ್ರಸ್ತಾವನೆ ಸಲ್ಲಿಸಿದೆ. ಅವರು ಒಪ್ಪಿದರು ಎಂದು ಹೇಳಿದರು.ಗಾಂಧಿ ಭಾರತ ಕಾರ್ಯಕ್ರಮದ ಭಾಗವಾಗಿ ಅ. 2 ರಂದು ರಾಜ್ಯ ಸರ್ಕಾರದ ವತಿಯಿಂದ ಬೆಂಗಳೂರಿನ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ಹೆಜ್ಜೆ ಹಾಕಿದೆವು. ನಂತರ ಪಕ್ಷದ ವತಿಯಿಂದ ಗಾಂಧಿ ವೃತ್ತದಿಂದ ಭಾರತ ಜೋಡೋ ಭವನದವರೆಗೂ ಹೆಜ್ಜೆ ಹಾಕಲಾಗಿತ್ತು. ಈಗ ಮುಂದುವರಿದ ಭಾಗವಾಗಿ ಡಿ.26 ರಂದು ಬೆಳಗಾವಿಯಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ ಎಂದರು.ಈ ಮಧ್ಯೆ ಸುವರ್ಣಸೌಧದ ಬಳಿ ಗಾಂಧಿ ಪ್ರತಿಮೆ ಉದ್ಘಾಟಿಸಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲ ಪಕ್ಷದ ಶಾಸಕರು ಹಾಗೂ ಪರಿಷತ್ ನಾಯಕರಿಗೂ ಆಹ್ವಾನ ನೀಡಲಾಗುವುದು. ಸ್ಪೀಕರ್ ಹಾಗೂ ಸಭಾಪತಿಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮ ನಡೆಯಲಿರುವ ಜಾಗಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಇತರೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.
ಬೆಳಗಾವಿ ವಲಯದ ಎಲ್ಲಾ ನಾಯಕರ ಜತೆ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ಮಾಡಲಿದ್ದು, ಕಾರ್ಯಕ್ರಮದ ಪೂರ್ವಸಿದ್ಧತೆ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಹೇಳಿದರು.ಸಿದ್ದರಾಮಯ್ಯ ಅನ್ಯಾಯ ಮಾಡಿಲ್ಲ:ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಸಿದ್ದರಾಮಯ್ಯ ನಮ್ಮ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ ಎಂಬ ಪಂಚಮಸಾಲಿ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಅನ್ಯಾಯ ಮಾಡಿಲ್ಲ. ಈ ವಿಚಾರವಾಗಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು.ಮಾಣಿಪ್ಪಾಡಿ ಅವರ ಆರೋಪ ಪ್ರಕರಣ ಸಿಬಿಐ ತನಿಖೆಗೆ ವಹಿಸುವಂತೆ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿ, ಮುಂದೆ ಈ ವಿಚಾರವಾಗಿ ಚರ್ಚೆ ಮಾಡೋಣ ಎಂದರು. ಖರ್ಗೆ ಅವರು ವಕ್ಫ್ ಆಸ್ತಿ ಕಬಳಿಕೆ ಮಾಡಿದ್ದಾರೆ ಎಂಬ ಮಾಣಿಪ್ಪಾಡಿ ಅವರ ಆರೋಪದ ಕುರಿತು, ಈ ವಿಚಾರವಾಗಿ ದಾಖಲೆ ಸಮೇತ ಸದನದಲ್ಲಿ ಚರ್ಚೆ ಮಾಡೋಣ ಎಂದರು.