ಬಳ್ಳಾರಿಯಲ್ಲಿ ಸಂಭ್ರಮದ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನೋತ್ಸವಕನ್ನಡಪ್ರಭ ವಾರ್ತೆ ಬಳ್ಳಾರಿ
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಬಹುಶಿಸ್ತೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಗೌರಿ ಮಾಣಿಕ್ ಮಾನಸ್ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ವಿಶೇಷ ಉಪನ್ಯಾಸ ನೀಡಿದರು.ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್. ಸಂವಿಧಾನ ಪೀಠಿಕೆ ವಾಚಿಸಿದರು.ಗಣ್ಯರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಹೊಂದಿ ಕಳೆದ ಸಾಲಿನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಬಳಿಕ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 60 ದಿನಗಳ ಹೊಲಿಗೆಯಂತ್ರ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಹೊಲಿಗೆ ಯಂತ್ರ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.ಈ ಸಂದರ್ಭ ಮಹಾನಗರ ಪಾಲಿಕೆಯ ಮಹಾಪೌರ ಮುಲ್ಲಂಗಿ ನಂದೀಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಡಾ. ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ಬಿ.ಕೆ.ಅನಂತ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ., ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಬಿ. ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು, ಮತ್ತಿತರರು ಉಪಸ್ಥಿತರಿದ್ದರು.
ಅದ್ಧೂರಿ ಸ್ತಬ್ಧಚಿತ್ರ ಮೆರವಣಿಗೆ:ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯು ವಿವಿಧ ಸಾಂಸ್ಕೃತಿಕ ಕಲಾ ತಂಡಗಳನ್ನೊಳಗೊಂಡು ನಗರದಲ್ಲಿ ಅದ್ಧೂರಿಯಾಗಿ ನಡೆಯಿತು.ಸಾರಿಗೆ ಇಲಾಖೆಯಿಂದ ರೂಪಿಸಿದ್ದ ವಿಧಾನಸೌಧ ಸ್ತಬ್ಧಚಿತ್ರ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ವಿವಿಧ ಸರ್ಕಾರದ ಕಾರ್ಯಕ್ರಮಗಳು ಮತ್ತು ವಿವಿಧ ಯೋಜನೆಗಳ ಮಾಹಿತಿ ಕುರಿತ ಸ್ತಬ್ಧಚಿತ್ರಗಳು ಗಮನ ಸೆಳೆದವು.ಮೆರವಣಿಗೆಗೆ ಮುನ್ನ ನಗರದ ಮೊದಲನೇ ರೈಲ್ವೇ ಗೇಟ್ ಬಳಿಯ ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ಭವನ ಆವರಣದ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿದರು.ಮೆರವಣಿಗೆಯು ನಗರದ ಡಾ. ರಾಜ್ ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಬ್ರೂಸ್ ಪೇಟೆ ಪೋಲಿಸ್ ಠಾಣೆ, ಎಚ್.ಆರ್. ಗವಿಯಪ್ಪ ವೃತ್ತದ ಮೂಲಕ ರೈಲ್ವೇ ಸ್ಟೇಷನ್ ರಸ್ತೆ ಮೂಲಕ ಮರಳಿ ಮುನಿಸಿಪಲ್ ಕಾಲೇಜು ಮೈದಾನದ ವೇದಿಕೆ ಸಭಾಂಗಣಕ್ಕೆ ತಲುಪಿ ಸಂಪನ್ನಗೊಂಡಿತು.ಆಕರ್ಷಕ ಬೈಕ್ ರ್ಯಾಲಿ:
ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ನಗರದಲ್ಲಿ ಆಕರ್ಷಕ ಬೈಕ್ ರ್ಯಾಲಿ ನಡೆಯಿತು.ನೀಲಿ ಬಾವುಟಗಳನ್ನು ಹಿಡಿದು ಶಾಸಕರಾದ ಬಿ.ನಾಗೇಂದ್ರ, ನಾರಾ ಭರತ್ ರೆಡ್ಡಿ ಮತ್ತು ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಮೊದಲಾದವರು ಸೇರಿದಂತೆ ನಗರದ ಶಾಸಕರ ಕಚೇರಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಭವನದವರೆಗೆ ಬೈಕ್ ರ್ಯಾಲಿ ನಡೆಯಿತು.