ಕನ್ನಡಪ್ರಭ ವಾರ್ತೆ, ಭದ್ರಾವತಿ
ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಆ ಶಾಲೆಯಲ್ಲಿ ಓದಿದ ಹಿರಿಯ ವಿದ್ಯಾರ್ಥಿಗಳ ಕೊಡುಗೆಯೂ ಪ್ರಮುಖವಾಗಿದೆ. ಓದಿದ ಶಾಲೆ ಅಭಿವೃದ್ಧಿಗೆ ಶ್ರಮಿಸುವುದು ಸಹ ಸೇವೆಯೇ ಆಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.ತಾಲೂಕಿನ ಯರೇಹಳ್ಳಿಯಲ್ಲಿ ಶನಿವಾರ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 80 ವರ್ಷ ಪೂರೈಸಿರುವ ಹಿನ್ನೆಲೆ ಆಯೋಜಿಸಲಾಗಿದ್ದ ಶಾಲಾ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಶಾಲೆಯ ಹಳೇ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಮುಂಬರುವ ವರ್ಷದಲ್ಲಿ ಇಡೀ ರಾಜ್ಯದಲ್ಲಿ 1 ರಿಂದ 7ನೇ ತರಗತಿವರೆಗಿನ ಯಾವ ಮಕ್ಕಳು ಸಹ ಕೆಳಗೆ ನೆಲದ ಮೇಲೆ ಕೂರದಂತೆ ಸಕಲ ವಿದ್ಯಾರ್ಥಿಗಳಿಗೂ ಆಸನ ವ್ಯವಸ್ಥೆ ಒದಗಿಸಲು ಚಿಂತನೆ ನಡೆಸಲಾಗಿದೆ. 1 ವರ್ಷ ಅವಧಿಯಲ್ಲಿ ಸಂಪೂರ್ಣ ಅನುಷ್ಠಾನಗೊಳಿಸಲಾಗುವುದು. ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಜ್ಞಾನವೇ ದೇಶದ ದೊಡ್ಡ ಆಸ್ತಿ. ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಪ್ರೌಢಶಾಲೆ ಆರಂಭಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ತೊರೆದು, ಒಟ್ಟಾಗಿ ಕೆಲಸ ನಿರ್ವಹಿಸುತ್ತೇವೆ. ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವ ಆಗಿರುವುದರಿಂದ ಮಲೆನಾಡಿನ ಸರ್ಕಾರಿ ಶಾಲೆಗಳಲ್ಲಿನ ಸಮಸ್ಯೆಗಳು ಖಂಡಿತವಾಗಿ ಬಗೆಹರಿಯುವ ವಿಶ್ವಾಸವಿದೆ ಎಂದರು.ಶಾಸಕ ಬಿ.ಕೆ. ಸಂಗಮೇಶ್ವರ್ ಮಾತನಾಡಿ, ಯರೇಹಳ್ಳಿ ಸರ್ಕಾರಿ ಶಾಲೆ ಊಟದ ಹಾಲ್ ವಿಸ್ತರಣೆಗೆ ಅನುದಾನ ನೀಡಲಾಗುವುದು ಎಂದರು.
ಜಿಪಂ ಮಾಜಿ ಸದಸ್ಯ ಎಸ್. ಕುಮಾರ್, ತಹಸೀಲ್ದಾರ್ ಕೆ.ಆರ್. ನಾಗರಾಜು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ, ಬಿಇಒ ನಾಗೇಂದ್ರಪ್ಪ, ಕ್ಷೇತ್ರ ಸಮನ್ವಯ ಅಧಿಕಾರಿ ವಿ.ಎಚ್. ಪಂಚಾಕ್ಷರಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ್, ಅಮೃತ ಮಹೋತ್ಸವ ಸಂಭ್ರಮಾಚರಣೆ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಗ್ರಾಪಂ ಸದಸ್ಯರು ಹಾಗೂ ಗ್ರಾಮದ ಮುಖಂಡರು, ಇನ್ನಿತರರು ಉಪಸ್ಥಿತರಿದ್ದರು.- - -
-ಡಿ23ಬಿಡಿವಿಟಿ1:ಸಮಾವೇಶವನ್ನು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಉದ್ಘಾಟಿಸಿದರು.