ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರ ಜನವಿರೋಧಿ: ಬಳ್ಳಾರಿಯಲ್ಲಿ ಬಿಜೆಪಿ ಆಕ್ರೋಶ

KannadaprabhaNewsNetwork |  
Published : May 31, 2025, 01:11 AM IST
ಕೇಂದ್ರದ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ  ಕಾರ್ಯಕರ್ತರು ಬಳ್ಳಾರಿಯ ಬಿಮ್ಸ್‌ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದರು.  | Kannada Prabha

ಸಾರಾಂಶ

ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬಳ್ಳಾರಿಯ ಬಿಮ್ಸ್‌ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಕೇಂದ್ರ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಬಳ್ಳಾರಿ: ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಬಿಮ್ಸ್‌ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಕೇಂದ್ರ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜನೌಷಧಿ ಕೇಂದ್ರಗಳಲ್ಲಿ ಉತ್ತಮ ಗುಣಮಟ್ಟದ ಔಷಧಿಗಳು ಹಾಗೂ ಇತರ ವೈದ್ಯಕೀಯ ಉಪಕರಣಗಳು ದೊರೆಯುತ್ತಿದ್ದು, ಖಾಸಗಿಯವರ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ಈ ಕೇಂದ್ರಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿದೆ. ಬಡವರು ಹಾಗೂ ತಳ ಸಮುದಾಯಗಳ ಪರವಾದ ಸರ್ಕಾರ ಎಂದು ಬಿಂಬಿಸಿಕೊಳ್ಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಡವರಿಗೆ ಹೆಚ್ಚು ಅನುಕೂಲವಾಗಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿರುವುದು ವಿಪರ್ಯಾಸ ಸಂಗತಿಯಾಗಿದೆ. ಆರ್ಥಿಕವಾಗಿ ಹಿಂದುಳಿದ ಪರವಾಗಿ ನಿಲ್ಲಬೇಕಾದ ಸರ್ಕಾರದ ಧೋರಣೆ ಅತ್ಯಂತ ಜನವಿರೋಧಿಯಾಗಿದ್ದು, ಆರ್ಥಿಕ ಹಿಂದುಳಿದ ಸಮುದಾಯಗಳಿಗೆ ನೋವುಂಟು ಮಾಡಿದೆ. ಜನೌಷಧಿ ಕೇಂದ್ರಗಳಿಗೆ ಹೊಸ ಅರ್ಜಿಗಳನ್ನು ಸ್ವೀಕರಿಸುವುದನ್ನು ನಿಲ್ಲಿಸುವುದಲ್ಲದೆ, ಅಸ್ತಿತ್ವದಲ್ಲಿರುವ ಕೇಂದ್ರಗಳಿಗೆ ಪರವಾನಗಿ ನವೀಕರಿಸಲು ರಾಜ್ಯ ಸರ್ಕಾರ ನಿರಾಕರಿಸುವುದು ಸರ್ಕಾರದ ಜನವಿರೋಧಿ ನಿಲುವಿಗೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದ್ದು, ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. ಬಡಜನರಿಗೆ ಅನುಕೂಲ ಒದಗಿಸುವ ಕೇಂದ್ರಗಳನ್ನು ಮುಂದುವರಿಸಬೇಕು. ಜನರ ಆರೋಗ್ಯಕ್ಕೆ ಧಕ್ಕೆಯಾಗದಂತೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ ಕುಮಾರ್ ಮೋಕಾ ಹಾಗೂ ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ಮಾತನಾಡಿ, ಬಡವರಿಗೆ ಹೆಚ್ಚು ಅನುಕೂಲವಾಗಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿರುವುದು ಅತ್ಯಂತ ಖಂಡನೀಯ. ಬಿಮ್ಸ್ ಸೇರಿದಂತೆ ಜಿಲ್ಲಾಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳಿಗೆ ಸಮರ್ಪಕವಾಗಿ ಔಷಧಿ ನೀಡಲು ರಾಜ್ಯ ಸರ್ಕಾರದಿಂದಾಗುತ್ತಿಲ್ಲ. ಬಿಮ್ಸ್‌ ಆಸ್ಪತ್ರೆಯ ರೋಗಿಗಳು ಹೊರಗಡೆ ಔಷಧಿಗಳನ್ನು ಖರೀದಿಸುವಂತಾಗಿದೆ. ಹೀಗಿರುವಾಗ ಕೇಂದ್ರ ಸರ್ಕಾರ ಆರಂಭಿಸಿರುವ ಜನೌಷಧಿ ಕೇಂದ್ರದಿಂದ ಬಡಜನರಿಗೆ ಸಾಕಷ್ಟು ಅನುಕೂಲವಾಗುತ್ತಿತ್ತು. ಇದನ್ನುಅರ್ಥ ಮಾಡಿಕೊಳ್ಳದ ರಾಜ್ಯದ ಕಾಂಗ್ರೆಸ್ ಸರ್ಕಾರ ಬಡಜನರ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಕೂಡಲೇ ರಾಜ್ಯ ಸರ್ಕಾರ ತನ್ನ ಆದೇಶವನ್ನು ಹಿಂದಕ್ಕೆ ಪಡೆದು, ಜನೌಷಧಿ ಕೇಂದ್ರಗಳು ಎಂದಿನಂತೆ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಪಕ್ಷದ ಮುಖಂಡರಾದ ಎಸ್. ಗುರುಲಿಂಗನಗೌಡ, ಎಚ್‌. ಹನುಮಂತಪ್ಪ, ಕೆ.ಎ. ರಾಮಲಿಂಗಪ್ಪ, ಶ್ರೀನಿವಾಸ ಮೋತ್ಕರ್, ಸುರೇಖಾ ಮಲ್ಲನಗೌಡ ಹಾಗೂ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ