ಮಳೆ - ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ

KannadaprabhaNewsNetwork |  
Published : Jun 20, 2024, 01:01 AM IST
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿಪತ್ತು ನಿರ್ವಹಣಾ ಮತ್ತು ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. | Kannada Prabha

ಸಾರಾಂಶ

ಕುಡಿಯುವ ನೀರು, ಬೆಳೆ ಪರಿಹಾರ ಸಮಸ್ಯೆ ನಿವಾರಣೆ, ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಯಾದಗಿರಿ

ಕಚೇರಿಗೆ ಬರುವ ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು. ಕುಡಿಯುವ ನೀರು, ಬೆಳೆ ಪರಿಹಾರ ಸಮಸ್ಯೆ ನಿವಾರಣೆ, ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿಪತ್ತು ನಿರ್ವಹಣಾ ಮತ್ತು ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಬಿತ್ತನೆ ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿ ಲಾಭ ಪಡೆಯುವ ಅಂಗಡಿ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರೇ ಮೊಬೈಲ್‌ ಆ್ಯಪ್‌ ಮೂಲಕ ತಮ್ಮ ಬೆಳೆ ಸಮೀಕ್ಷೆ ಮಾಡಬೇಕಾಗಿದ್ದು, ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಮಳೆಯಿಂದಾಗಿ ಹಾನಿಗೊಳಗಾದ ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭವಾಗದೇ ಇರುವ ಹಾಗೂ ಪ್ರಾರಂಭವಾದರೂ ಇದುವರೆಗೆ ಪ್ರಗತಿಯಾಗದೇ ಇರುವ ಮನೆಗಳ ವರದಿ ನೀಡಬೇಕು. ಅಲ್ಲದೇ, ನಿರಂತರ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಭೂ ಪರಿವರ್ತನೆ, ನ್ಯಾಯಾಲಯ ಪ್ರಕರಣಗಳನ್ನು ಕಾಲ ಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ಸಮಸ್ಯೆ ಕಂಡು ಬಂದಾಗ ಸಂಬಂಧಿಸಿದ ಅಧಿಕಾರಿ ಗೈರಾಗಿದ್ದರೆ ಅದಕ್ಕೆ ಅವರೇ ನೇರ ಹೊಣೆ. ಕುಡಿವ ನೀರು ಪೋಲಾಗದಂತೆ ಎಚ್ಚರಿಕೆವಹಿಸಿ, ನೀರಿನ ಸಮಸ್ಯೆಗೆ ತ್ವರಿತಗತಿಯಲ್ಲಿ ಸ್ಪಂದಿಸಬೇಕು ಎಂದು ತಿಳಿಸಿದರು.

ಎಲ್ಲಾ ಅಧಿಕಾರಿಗಳು ತಮಗೆ ನಿಯೋಜಿಸಿದ ಗ್ರಾಮಗಳಲ್ಲಿಯೇ ಇರಬೇಕು. ಪ್ರವಾಹದ ಕುರಿತು ಕ್ಷಣ ಕ್ಷಣದ ಮಾಹಿತಿಯನ್ನು ವಾಟ್ಸಾಪ್ ಗ್ರೂಪ್‌ನಲ್ಲಿ ರವಾನಿಸಬೇಕು ಎಂದರು.

ಪ್ರವಾಹ ಸಂಭವಿಸಬಹುದಾದ ಎಲ್ಲಾ ಗ್ರಾಮಗಳಲ್ಲಿನ ಜಾನುವಾರುಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಹಾಗೂ ಅವಶ್ಯವಿದ್ದಲ್ಲಿ ಗೋಶಾಲೆಗಳನ್ನು ತೆರೆಯುವುದರ ಕುರಿತು ಪಶು ಸಂಗೋಪನಾ ಮತ್ತು ಪಶು ಸೇವಾ ವೈದ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಪ್ರವಾಹಕ್ಕೆ ಒಳಗಾಗುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು, ಪ್ರವಾಹ ಪೀಡಿತ ಸಂತ್ರಸ್ತರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲು ವಾಹನ, ಬಸ್ಸುಗಳ ವ್ಯವಸ್ಥೆ ಸಿದ್ದವಾಗಿ ಇಟ್ಟುಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಪ್ರವಾಹ ಸಂಭವಿಸಬಹುದಾದ ಗ್ರಾಮಗಳಲ್ಲಿನ ಸೇತುವೆ, ಬ್ರಿಡ್ಜ್‌ ಹಾಗೂ ಅರಣ್ಯ ಪ್ರದೇಶ ಹತ್ತಿರವಿರುವ ಗ್ರಾಮಗಳಲ್ಲಿ ಪೊಲೀಸ್ ಸಿಬ್ಬಂದಿ ಜೊತೆಗೆ ತಮ್ಮ ಇಲಾಖೆ ಸಿಬ್ಬಂದಿ ನಿಯೋಜಿಸಿ ಮುಂಜಾಗ್ರತೆ ವಹಿಸಲು ತಿಳಿಸಿದರು.

ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಿಗೆ ಸುಸಜ್ಜಿತ ಬೋಟ್ ಹಾಗೂ ರಕ್ಷಣಾ ಸಾಮಗ್ರಿಗಳೊಂದಿಗೆ ಸಿಬ್ಬಂದಿ ನಿಯೋಜಿಸತಕ್ಕದ್ದು, ರಕ್ಷಣೆಗೆ ಸಂಬಂಧಪಟ್ಟಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಜಿಲ್ಲೆಯಲ್ಲಿ ನುರಿತ ಈಜುಗಾರರನ್ನು ಸಿದ್ಧವಾಗಿಟ್ಟುಕೊಳ್ಳಬೇಕೆಂದರು.

ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಜಂಟಿ ಕೃಷಿ ನಿರ್ದೇಶಕ ಕೆ.ಎಚ್. ರವಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ರಾಜು ದೇಶಮುಖ ಸೇರಿದಂತೆ ಎಲ್ಲಾ ತಾಲೂಕಿನ ತಹಸೀಲ್ದಾರರು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ
ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೋಲಿಯೋ ಹಾಕಿಸಿ