ಚನ್ನಪಟ್ಟಣ: ರಾಮನಗರ-ಚನ್ನಪಟ್ಟಣವನ್ನು ಅವಳಿ ನಗರಗಳನ್ನಾಗಿಸಿ ಅಭಿವೃದ್ಧಿಪಡಿಸುವುದು ನನ್ನ ಕನಸಾಗಿದೆ. ಶಿಕ್ಷಣ, ವೈದ್ಯಕೀಯ ಕ್ಷೇತ್ರದಲ್ಲೂ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಅಭಿಲಾಷೆ ಹೊಂದಿದ್ದೇನೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ.ಮಂಜುನಾಥ್ ತಿಳಿಸಿದರು.
ಸಮರ್ಥ ನಾಯಕಬೇಕು:ದೇಶವನ್ನು ಮುನ್ನಡೆಸಲು, ಅಭಿವೃದ್ಧಿಗೊಳಿಸಲು ನಮಗೆ ಸಮರ್ಥ ನಾಯಕನ ಅಗತ್ಯವಿದೆ. ಆ ಸಮರ್ಥ ನಾಯಕ ಪ್ರಧಾನಿ ನರೇಂದ್ರ ಮೋದಿಯಾಗಿದ್ದಾರೆ. ಅವರಿಂದ ದೇಶದ ವಿಕಾಸ ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಎಲ್ಲರೂ ಮೋದಿಯವರ ಕೈ ಬಲಪಡಿಸಬೇಕಿದೆ. ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ನಮಗೆ ತಾತ್ಕಾಲಿಕ ಸವಲತ್ತುಗಳಿಗಿಂತ ದೂರದೃಷ್ಟಿಯ ಅಭಿವೃದ್ಧಿ ಬೇಕಿದೆ. ಅದು ಬಿಜೆಪಿಯಿಂದ ಮಾತ್ರ ಸಾಧ್ಯ. ಹೋದ ಕಡೆಯಲೆಲ್ಲಾ ಜನ ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ. ಎಲ್ಲಡೆ ಉತ್ತಮ ಸ್ಪಂದನೆ ಸಿಗುತ್ತಿದೆ. ಈ ಚುನಾವಣೆಯಲ್ಲಿ ಗುರಿ ಮುಟ್ಟುವ ವಿಶ್ವಾಸವಿದೆ. ಅದಕ್ಕೆ ನಿಮ್ಮೆಲ್ಲರ ಬೆಂಬಲ ಅಗತ್ಯ ಎಂದರು.
ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್ ಮಾತನಾಡಿ, ನಿಮಗೆ ನ್ಯಾಯ ಹಾಗೂ ಧರ್ಮದ ಕುರಿತು ಅರಿವಿದೆ. ವಕೀಲರು ಎಲ್ಲ ವಿಚಾರವನ್ನು ಸಾಕಷ್ಟು ತಿಳಿದುಕೊಂಡಿದ್ದೀರಿ. ಈ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಂಭಾವಿತ ಅಭ್ಯರ್ಥಿ ಡಾ.ಮಂಜುನಾಥ್ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.ಈ ವೇಳೆ ವಕೀಲರ ಸಂಘದ ಅಧ್ಯಕ್ಷ ಗಿರೀಶ್, ವಕೀಲ ಹನುಮಂತು, ಸಂಘದ ಪದಾಧಿಕಾರಿಗಳು ಹಾಗೂ ವಕೀಲರಿದ್ದರು.ಪೊಟೋ೨೨ಸಿಪಿಟ೬: ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ವಕೀಲರ ಬೆಂಬಲ ಕೋರಿದರು. ವಿಧಾನಪರಿಷತ್ ಸದಸ್ಯ ಯೋಗೇಶ್ವರ್, ಬಿಜೆಪಿ, ಜೆಡಿಎಸ್ ಮುಖಂಡರು ಹಾಜರಿದ್ದರು.