ಕನ್ನಡಪ್ರಭ ವಾರ್ತೆ ಮಂಡ್ಯಮದ್ದೂರು ತಾಲೂಕಿನ ಹೂತಗೆರೆ ಗ್ರಾಮದಲ್ಲಿ 50 ಲಕ್ಷ ರು ವೆಚ್ಚದಲ್ಲಿ ಮೊದಲ ಸರ್ಕಾರಿ ಗೋಶಾಲೆ ನಿರ್ಮಾಣವಾಗಿದೆ. ಇದನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ। ಕುಮಾರ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಾಣಿದಯಾ ಸಂಘ ಸಮಿತಿ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೋಶಾಲೆ ಕಾಮಗಾರಿ ಅಂತಿಮ ಹಂತದಲ್ಲಿದೆ. ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳಿ ಎಂದರು.
ಖಾಸಗಿಯಾಗಿ ಕಾರ್ಯನಿರ್ವಹಿಸುವ ಗೋಶಾಲೆಗಳಿಗೆ ಪ್ರತಿ ಗೋವಿಗೆ ಪ್ರತಿದಿನಕ್ಕೆ 17.30 ರು /- ರಂತೆ ಸಹಾಯಧನ ನೀಡಲು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಎಸ್ಪಿ ಎನ್.ಯತೀಶ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ:ಸುರೇಶ್, ನಗರಸಭೆ ಆಯುಕ್ತ ಮಂಜುಮಾಥ್ , ವಿವಿಧ ಗೋಶಾಲೆಯ ಮುಖ್ಯಸ್ಥರು ಉಪಸ್ಥಿತರಿದ್ದರು.
ಅವಶ್ಯಕವಿರುವ ಕಡೆ ಸೂಚನಾ ಫಲಕ ಅಳವಡಿಸಿ: ಡಾ ಕುಮಾರಮಂಡ್ಯ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಯಲು ಅಪಘಾತ ವಲಯಗಳಲ್ಲಿ ಸಂಚಾರಿ ಸೂಚನಾ ಫಲಕಗಳನ್ನು ಅಳವಡಿಸಿ ಎಂದು ಜಿಲ್ಲಾಧಿಕಾರಿ ಡಾ:ಕುಮಾರ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ರಸ್ತೆ ಸುರಕ್ಷತಾ ಸಮಿತಿಯಲ್ಲಿ ಇರುವ 15 ಲಕ್ಷ ರು ಅನುದಾನದಲ್ಲಿ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಟ್ರಾಫಿಕ್ ಸಿಗ್ನಲ್ ಸರಿಪಡಿಸುವ ಕೆಲಸಗಳು, ಬ್ಲ್ಯಾಕ್ ಸ್ಪಾಟ್ ಗಳ ಬಳಿ ಸೂಚನಾ ಫಲಕಗಳು, ಹಂಪ್ ಗಳು ಸೇರಿದಂತೆ ಅವಶ್ಯಕ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಪೊಲೀಸ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿರುವ ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸಿ ಅಪಘಾತ ತಡೆಗಟ್ಟಬೇಕಿದೆ. ಅದಕ್ಕೆ ತಗಲುವ ವೆಚ್ಚದ ವಿವರವನ್ನು ನಿಗದಿತ ನಮೂನೆಯಲ್ಲಿ ಸಿದ್ಧಪಡಿಸಿ ಅನುದಾನ ಕೋರಿ ಪ್ರಸ್ತಾವನೆಯನ್ನು ಕಳುಹಿಸಿಕೊಡುವಂತೆ ತಿಳಿಸಿದರು.