ಸಿ.ಸಿದ್ದರಾಜು, ಮಾದಹಳ್ಳಿ
ಗಗನದಿಂದ ಹಾಲಿನ ನೊರೆಯಂತೆ ದುಮ್ಮಿಕ್ಕಿ ಹರಿಯುತ್ತಿರುವ ವಿಶ್ವ ಪ್ರಸಿದ್ಧ ಗಗನಚುಕ್ಕಿ ಜಲಪಾತಕ್ಕೆ ನೈಸರ್ಗಿಕ ಸೌಂದರ್ಯದ ಜೀವಕಳೆ ಬಂದಿದ್ದು, ಜಲ ಸಿರಿಯ ವೈಭವ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿದೆ.
ಕಳೆದ ವಾರವಷ್ಟೇ ನೀರಿಲ್ಲದೇ ಕಲ್ಲು ಬಂಡಗಳಿಂದ ಭಣಗುಡುತ್ತಿದ್ದ ಗಗನ ಚುಕ್ಕಿ ಜಲಪಾತ ಪ್ರವಾಸಿಗರಿಲ್ಲದೆ ಸೊರಗಿತ್ತು. ಇತ್ತೀಚಿಗೆ ಕೇರಳದಲ್ಲಿ ವ್ಯಾಪಕ ಮಳೆಯಾಗಿ ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ನದಿಗೆ ಸುಮಾರು ೩೦ ಸಾವಿರ ಕ್ಯುಸೆಕ್ ನೀರು ಬಿಡುತ್ತಿರುವುದರಿಂದ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತ ಮೈದುಂಬಿಕೊಂಡಿವೆ. ಜಲಪಾತದಲ್ಲಿನ ಜಲವೈಭವವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ದಿನದಿನಕ್ಕೆ ಹೆಚ್ಚಾಗುತ್ತಿದೆ.ನೂರಾರು ಅಡಿಗಳ ಎತ್ತರದಿಂದ ಧುಮ್ಮಿಕ್ಕುವ ಗಗನಚುಕ್ಕಿ ಜಲಪಾತ ಹಾಗೂ ಕಲ್ಲು ಬಂಡೆಗಳ ನಡುವೆ ಮೈ ದುಂಬಿ ಹರಿಯುವ ಕೊಳ್ಳೇಗಾಲದ ಭರಚುಕ್ಕಿ ಜಲಪಾತಗಳು ತನ್ನ ಸೌಂದರ್ಯದ ಮೂಲಕ ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಈ ಎರಡೂ ಜಲಧಾರೆಗಳು ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಯ ಗಡಿಯಂಚಿನನಲ್ಲಿದ್ದು, ಕೊಡಗಿನ ತಲಕಾವೇರಿಯಲ್ಲಿ ಉಗಮವಾಗುವ ಕಾವೇರಿ ನದಿಯು ಬೆಟ್ಟ-ಗುಡ್ಡ, ಕಾಡು-ಮೇಡುಗಳ ಮೂಲಕ ಸಾಗಿ ಶಿವನಸಮುದ್ರ ತಲುಪುತ್ತಿದ್ದಂತೆಯೇ ಧುಮುಕಿ ಗಗನಚುಕ್ಕಿ ಬಳಿಕ ಭರಚುಕ್ಕಿಯಾಗಿ ರೂಪಾಂತರಗೊಂಡು ಹರಿಯುತ್ತದೆ.
ಕಾವೇರಿ ನ್ಯಾಯಮಂಡಳಿ ತೀರ್ಪಿನ ಪ್ರಕಾರ ಪ್ರತಿದಿನ ೧೦ ಸಾವಿರ ಕ್ಯುಸೆಕ್ ನೀರನ್ನು ತಮಳುನಾಡಿಗೆ ಬಿಡಬೇಕೆಂಬ ಆದೇಶದ ವಿರುದ್ಧ ರಾಜ್ಯಾದ್ಯಂತ ಹೋರಾಟದ ಕಿಚ್ಚನ್ನು ಹೆಚ್ಚಿಸಿತ್ತು. ಕೆಆರ್ಎಸ್ ಅಣೆಕಟ್ಟೆಯಲ್ಲಿಯೇ ನೀರಿಲ್ಲದ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಬಾರದೆಂಬ ಕೂಗು ಎಲ್ಲೆಡೆಯೂ ಕೇಳಿ ಬರುತ್ತಿತ್ತು.
- ರಾಜು, ಮಳವಳ್ಳಿ