ಕಸಬಾ-ಕೈಲಾಂಚ ಹೋಬಳಿ ಕೆರೆ ತುಂಬಿಸುವುದೇ ಗುರಿ

KannadaprabhaNewsNetwork |  
Published : Sep 19, 2026, 01:15 AM IST
18ಕೆಆರ್ ಎಂಎನ್ 1.ಜೆಪಿಜಿರಾಮನಗರ ತಾಲೂಕು ಕೈಲಾಂಚ ಹೋಬಳಿ ವಡ್ಡರಹಳ್ಳಿ ಗ್ರಾಮದಲ್ಲಿ ಮೈದುಂಬಿದ ಹೊಸಕೆರೆಗೆ ಶಾಸಕ ಇಕ್ಬಾಲ್ ಹುಸೇನ್ ಬಾಗಿನ ಅರ್ಪಿಸಿದರು. | Kannada Prabha

ಸಾರಾಂಶ

ರಾಮನಗರ: ಅರ್ಕಾವತಿ ನದಿಯಿಂದ ಏತ ನೀರಾವರಿ ಯೋಜನೆಗಳ ಮೂಲಕ ತಾಲೂಕಿನ ಕಸಬಾ ಮತ್ತು ಕೈಲಾಂಚ ಹೋಬಳಿ ಭಾಗದ ಎಲ್ಲ ಕೆರೆಗಳನ್ನು ತುಂಬಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು

ರಾಮನಗರ: ಅರ್ಕಾವತಿ ನದಿಯಿಂದ ಏತ ನೀರಾವರಿ ಯೋಜನೆಗಳ ಮೂಲಕ ತಾಲೂಕಿನ ಕಸಬಾ ಮತ್ತು ಕೈಲಾಂಚ ಹೋಬಳಿ ಭಾಗದ ಎಲ್ಲ ಕೆರೆಗಳನ್ನು ತುಂಬಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ತಾಲೂಕಿನ ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗ್ರಾಮದಲ್ಲಿ ಮೈದುಂಬಿರುವ ಹೊಸಕೆರೆಗೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆನೆಗುದಿಗೆ ಬಿದ್ದಿರುವ ಹಾಗೂ ಹೊಸ ಏತ ನೀರಾವರಿ ಯೋಜನೆಗಳನ್ನು ಕಾರ್ಯಗತಗೊಳಿಸಿ ಎಲ್ಲ ಕೆರೆಗಳಲ್ಲಿ ನೀರು ತುಂಬಿಸುವ ಮೂಲಕ ರೈತರ ಬದುಕನ್ನು ಹಸನುಗೊಳಿಸಲಾಗುವುದು ಎಂದು ಹೇಳಿದರು.

ಡಿ.ಕೆ.ಸುರೇಶ್ ಸಂಸದರಾಗಿದ್ದ ಅವಧಿಯಲ್ಲಿ ವಡ್ಡರಹಳ್ಳ-ಗುನ್ನೂರು ಭಾಗದ ರೈತರಿಗೆ ನೆರವಾಗಲು 10 ಕೋಟಿ ರು. ವೆಚ್ಚದಲ್ಲಿ ಅರ್ಕಾವತಿ ನದಿಯಿಂದ ವಡ್ಡರಹಳ್ಳಿ ಏತ ನೀರಾವರಿ ಯೋಜನೆ ಮೂಲಕ ಹೊಸಕೆರೆಗೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದರು. ಈಗ ಚೆಕ್ ಡ್ಯಾಂ ಕಮ್ ಬ್ರಿಡ್ಜ್ ನಿರ್ಮಾಣಗೊಂಡಿದೆ. ಸುಮಾರು 45 ಎಕರೆ ವಿಸ್ತೀರ್ಣ ಹೊಂದಿರುವ ಕೆರೆಯ ನೀರಿನಿಂದ ಅಂದಾಜು 590 ಎಕರೆ ಅಚ್ಚುಕಟ್ಟು ಪ್ರದೇಶಗಳಿಗೆ ಅನುಕೂಲವಾಗುತ್ತದೆ. ಇದರಿಂದ ರೈತರು ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಈಗಾಗಲೇ ಮೊಟ್ಟೆದೊಡ್ಡಿ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದ್ದು, 500-600 ಎಕರೆ ಕೃಷಿ ಪ್ರದೇಶಕ್ಕೆ ನೀರು ಹಾಯಿಸಲಾಗುತ್ತಿದೆ. ಇದನ್ನು ಲಕ್ಕಪ್ಪನಹಳ್ಳಿವರೆಗೆ ಅಂದರೆ 1 ಸಾವಿರ ಎಕರೆಯಷ್ಟು ಕೃಷಿ ಪ್ರದೇಶಕ್ಕೂ ನೀರಾವರಿ ವ್ಯವಸ್ಥೆಯನ್ನು ವಿಸ್ತರಿಸುವ ಕಾರ್ಯ ಪೂರ್ಣಗೊಳ್ಳಲಿದೆ ಎಂದರು.

ಕಾಳೇಗೌಡನದೊಡ್ಡಿ ಏತ ನೀರಾವರಿ ಯೋಜನೆ 28 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಅದರ ಕಾಮಗಾರಿ ಅಂತಿಮ ಹಂತ ತಲುಪಿದೆ. 124 ಕೋಟಿ ರು. ವೆಚ್ಚದಲ್ಲಿ ಗಾಣಾಳು ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದ್ದೇವೆ. ಇದೀಗ ಕೆ.ಪಿ.ದೊಡ್ಡಿಯಲ್ಲಿಯೂ ಏತ ನೀರಾವರಿ ಯೋಜನೆಗೆ ಬೇಡಿಕೆ ಬಂದಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಸುಮಾರು 16 ಕೋಟಿ ವೆಚ್ಚದಲ್ಲಿ ಆ ಯೋಜನೆಯನ್ನೂ ಕಾರ್ಯಗತಗೊಳಿಸಿದರೆ ಸುಮಾರು 1 ಸಾವಿರ ಎಕರೆ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಿದಂತಾಗುತ್ತದೆ. ವಿಶೇಷ ಅಧಿವೇಶನದಲ್ಲಿ ಸಚಿವರ ಮನವೊಲಿಸಿ ಕೆ.ಪಿ.ದೊಡ್ಡಿ ಏತನೀರಾವರಿ ಯೋಜನೆಗೆ ಅನುಮೋದನೆ ಪಡೆಯುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಎನ್.ಆರ್.ವಂಕಟೇಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ‌.ರಾಜು, ತಾಲೂಕು ಅಧ್ಯಕ್ಷ ವಿ.ಎಚ್.ರಾಜು, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ಹುಲಿಕೆರೆ ಗುನ್ನೂರು ಗ್ರಾಪಂ ಮಾಜಿ ಅಧ್ಯಕ್ಷ ಗಿರೀಶ್, ನಗರಸಭೆ ಸದಸ್ಯ ಬೈರೇಗೌಡ, ಸಾಗುವಳಿ ಸಮಿತಿ ಸದಸ್ಯ ರವಿ, ಮುಖಂಡರಾದ ಗುರುಪ್ರಸಾದ್ ,ಚನ್ನಮಾನಹಳ್ಳಿ ಶ್ರೀನಿವಾಸ್, ವಡ್ಡರಹಳ್ಳಿ ಗಿರಿ, ವೆಂಕಟೇಶ್, ಕೈಲಾಂಚ ಗಿರೀಶ್, ಕೆಂಪರಾಮು, ದಾಸೇಗೌಡ, ಚೇತನ್, ನಾಗೇಶ್, ಚಿಕ್ಕೇಗೌಡ, ಸಣ್ಣ ನೀರಾವರಿ ಇಲಾಖೆ ಎಇಇ ಕೊಟ್ರೇಶ್, ಇಂಜಿನಿಯರ್ ನೂತನ್, ಪಿಡಿಒ ಕುಮಾರ್ ಮತ್ತಿತರರು ಹಾಜರಿದ್ದರು.

18ಕೆಆರ್ ಎಂಎನ್ 1.ಜೆಪಿಜಿ

ರಾಮನಗರ ತಾಲೂಕು ಕೈಲಾಂಚ ಹೋಬಳಿ ವಡ್ಡರಹಳ್ಳಿ ಗ್ರಾಮದಲ್ಲಿ ಮೈದುಂಬಿದ ಹೊಸಕೆರೆಗೆ ಶಾಸಕ ಇಕ್ಬಾಲ್ ಹುಸೇನ್ ಬಾಗಿನ ಅರ್ಪಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಎನ್.ಆರ್.ವಂಕಟೇಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ‌.ರಾಜು, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚೇತನ್ ಕುಮಾರ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಡಾಳು ಸ್ವರ್ಣಗೌರಮ್ಮ ದೇವಿ ದರ್ಶನಕ್ಕೆ ಭಕ್ತರ ದಂಡು
ಜನಮನ ಸೆಳೆದ ಕಲ್ಯಾಣ ಕರ್ನಾಟಕ ಉತ್ಸವ