ಕನ್ನಡಪ್ರಭ ವಾರ್ತೆ ಮಡಿಕೇರಿ
ಇತ್ತೀಚೆಗೆ ಭಾಗಮಂಡಲಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳನ್ನು ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಭೇಟಿಯಾದ ಎನ್.ಬಾಲಚಂದ್ರನ್ ನಾಯರ್ ಅವರು ಕರಿಕೆ ಗ್ರಾಮವು ಕರ್ನಾಟಕ- ಕೇರಳ ರಾಜ್ಯಗಳ ಗಡಿಯಲ್ಲಿದ್ದು, ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಕೋರಿದರು.
ಕರಿಕೆ ಗ್ರಾಮ ಜಿಲ್ಲಾ ಕೇಂದ್ರವಾದ ಮಡಿಕೇರಿಯಿಂದ 70ಕಿ.ಮೀ ಮತ್ತು ಹೋಬಳಿ ಕೇಂದ್ರವಾದ ಭಾಗಮಂಡಲದಿಂದ 30 ಕಿ.ಮೀ ದೂರದಲ್ಲಿದೆ. ಸಾರಿಗೆ ಸಂಚಾರ ವ್ಯವಸ್ಥೆಯು ದುಸ್ತರವಾಗಿದೆ. ಗ್ರಾಮದ ಜನಸಂಖ್ಯೆಯ ಶೇಕಡಾ 70 ಭಾಗದಷ್ಟು ಜನರು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ. ಶೇಕಡಾ 95 ರಷ್ಟು ಮಂದಿ ಕೃಷಿ ಕೂಲಿ ಕಾರ್ಮಿಕರು ಹಾಗೂ ಅತೀ ಸಣ್ಣ ರೈತರಾಗಿದ್ದಾರೆ.ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ಕರಿಕೆ ಗ್ರಾಮವನ್ನು ಪರಿಗಣಿಸಿದರೆ ಗ್ರಾಮವು ಹಲವು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗುತ್ತದೆ. ಆದುದರಿಂದ ಕರಿಕೆಯನ್ನು ವಿಶೇಷವೆಂದು ಪರಿಗಣಿಸಿ ಸರ್ಕಾರದ ಮೂಲಕ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಕರ್ನಾಟಕ ಕೇರಳ ಗಡಿ ಭಾಗವಾದ ಕರಿಕೆ ಗ್ರಾಮದ ಚೆಂಬೇರಿಯಲ್ಲಿ ಬಸ್ ನಿಲ್ದಾಣಕ್ಕೆ ಕಾಯ್ದಿರಿಸಿದ 0.69 ಏಕ್ರೆ ಜಾಗದಲ್ಲಿ ಬಸ್ ನಿಲ್ದಾಣ ಮತ್ತು ವಾಣಿಜ್ಯ ಸಂಕೀರ್ಣ ಕಟ್ಟಡ ಮಂಜೂರು ಮಾಡಿಕೊಡಬೇಕು. ಕರಿಕೆ ಭಾಗಮಂಡಲ ಅಂತರರಾಜ್ಯ ಹೆದ್ದಾರಿಯ 20ಕಿ.ಮೀ. ರಸ್ತೆಯನ್ನು ಅಗಲೀಕರಣ ಮತ್ತು ಮರು ಡಾಮರೀಕರಣ ಮಾಡಿ ಅಭಿವೃದ್ಧಿಪಡಿಸಬೇಕು. ಕರಿಕೆ ಗ್ರಾಮದ ಸರ್ಕಾರಿ ಆರೋಗ್ಯ ಉಪಕೇಂದ್ರಕ್ಕೆ ಹೊಸ ಕಟ್ಟಡ ಮಂಜೂರು ಮಾಡಿ ಖಾಯಂ ವೈದ್ಯರನ್ನು ನೇಮಿಸಿ ಕೊಡಬೇಕು. ಕರಿಕೆ ಗ್ರಾಮಕ್ಕೆ ಹೊಸ ಪ್ರವಾಸಿ ಮಂದಿರವನ್ನು ಮಂಜೂರು ಮಾಡಿಕೊಡಬೇಕು. ಕರ್ನಾಟಕ ಕೇರಳ ಗಡಿ ಭಾಗವಾದ ಕರಿಕೆ ಗ್ರಾಮದ ಅಂತರರಾಜ್ಯ ಹೆದ್ದಾರಿಯ ಗಡಿಯಾದ ಚೆಂಬೇರಿಯಲ್ಲಿ ಸ್ವಾಗತ ದ್ವಾರವನ್ನು ಮಂಜೂರು ಮಾಡಿಕೊಡಬೇಕು. ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 28 ಪಂಚಾಯಿತಿ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಿಕೊಡಬೇಕು. ಕರಿಂಬಳಪು ಎಸ್.ಸಿ. ಕಾಲೋನಿಗೆ ಹೋಗುವ ರಸ್ತೆಯಲ್ಲಿ ಸೇತುವೆ ನಿರ್ಮಾಣ ಮಾಡಬೇಕು. ಹಳೇ ಮನೆಯಿಂದ ಆಲತ್ತಿಕಡವಿಗೆ ಹೊಸ ಸಂಪರ್ಕ ರಸ್ತೆ ಮತ್ತು ಸೇತುವೆ ನಿರ್ಮಿಸಬೇಕು. ಅರ್ತುಕುಟ್ಟಿ ರಸ್ತೆಯಲ್ಲಿ ದೇರ್ಮಕೊಚ್ಚಿ ಎಂಬಲ್ಲಿ ಸೇತುವೆ ನಿರ್ಮಾಣ ಮಾಡಬೇಕು.