ರಾಜ್ಯದ ಪ್ರಥಮ ದ.ಕ. ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ಉದ್ಘಾಟನೆ

KannadaprabhaNewsNetwork |  
Published : Jan 11, 2024, 01:31 AM IST
ದ.ಕ. ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ಉದ್ಘಾಟನೆ ನೆರವೇರಿತು. | Kannada Prabha

ಸಾರಾಂಶ

ರಾಜ್ಯದ ಪ್ರಥಮ ದ.ಕ. ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘದ ಉದ್ಘಾಟನಾ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಬೀದಿಬದಿ ವ್ಯಾಪಾರಿಗಳ ಆರ್ಥಿಕ ಹಿತರಕ್ಷಣೆ ಮತ್ತು ಸ್ವಾವಲಂಬಿ ಬದುಕಿಗಾಗಿ ರಾಜ್ಯದಲ್ಲೇ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘದ ಉದ್ಘಾಟನೆ ಕಾರ್ಯಕ್ರಮ ನಗರದ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ಬುಧವಾರ ನೆರವೇರಿತು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬೀದಿಬದಿ ವ್ಯಾಪಾರಿಗಳು ಸ್ವಾವಲಂಬಿಗಳಾಗಳು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಂಗಳೂರು ಮಹಾ ನಗರ ಪಾಲಿಕೆಯು ಬೀದಿಬದಿ ವ್ಯಾಪಾರಿಗಳಿಗಾಗಿ ನಗರದ ಹೃದಯ ಭಾಗದಲ್ಲಿ ಬೃಹತ್ ಬೀದಿ ವ್ಯಾಪಾರ ವಲಯ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಮಾತ್ರವಲ್ಲದೆ, ನಗರದ ಎಲ್ಲ 60ವಾರ್ಡ್‌ಗಳಲ್ಲಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಪ್ರತಿ ವಾರ್ಡ್‌ಗಳಲ್ಲಿ ನಗರ ಪಾಲಿಕೆ ವ್ಯಾಪಾರ ವಲಯ ನಿರ್ಮಿಸಿ ಕೊಡಲಿದೆ ಎಂದು ಭರವಸೆ ನೀಡಿದರು.

ಮುಖ್ಯ ಅತಿಥಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಮಾತನಾಡಿ, ನಾನು ಸ್ವತಃ ಬೀದಿ ವ್ಯಾಪಾರಿಯಾಗಿ ಅವರ ಹೊಟ್ಟೆಪಾಡಿನ ಕಷ್ಟಗಳು ನನಗೆ ಚೆನ್ನಾಗಿ ತಿಳಿದಿದೆ. ನಾನು ಇಂದು ಪ್ರಧಾನಿ, ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿರಬಹುದು, ಆದರೆ ನನ್ನ ಕಷ್ಟದ ದಿನಗಳ ಬಗ್ಗೆ ಇನ್ನೂ ನೆನಪಿದೆ. ಬೀದಿ ವ್ಯಾಪಾರಿಗಳು ಸ್ವಾಭಿಮಾನವನ್ನು ಎಂದೂ ಬಿಟ್ಟು ಕೊಡುವವರಲ್ಲ ಎಂದು ಹೇಳಿದರು.

ಸಂಘದ ಅಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮಾತನಾಡಿ, ಬೀದಿಬದಿ ವ್ಯಾಪಾರಿಗಳ ರಕ್ತ ಹೀರುತ್ತಿರುವ ಬಡ್ಡಿ ದಂಧೆಕೋರರಿಂದ ಮುಕ್ತಿಗೊಳಿಸಲು ಮತ್ತು ಬೀದಿ ವ್ಯಾಪಾರಿಗಳನ್ನು ಗುರಿಯಾಗಿಸಿ ಪಂಗನಾಮ ಹಾಕುತ್ತಿದ್ದ ಬ್ಲೇಡ್ ಕಂಪೆನಿಗಳಿಂದ ಬೀದಿ ವ್ಯಾಪಾರಿಗಳನ್ನು ರಕ್ಷಿಸಿ ಆರ್ಥಿಕ ಸ್ವಾವಲಂಬಿಗಳಾಗಿ ಮಾಡುವ ನಿಟ್ಟಿನಲ್ಲಿ ಸಹಕಾರ ಸಂಘ ರಚಿಸಲಾಗಿದೆ ಎಂದು ಹೇಳಿದರು.

ಪಾಲಿಕೆಯ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಅವರು ಸಹಕಾರ ಸಂಘದ ಸದಸ್ಯರಿಗೆ ಷೇರು ಪ್ರಮಾಣ ಪತ್ರ ವಿತರಿಸಿದರು. ಕಾರ್ಮಿಕ ಮುಖಂಡ ಸುನಿಲ್ ಕುಮಾರ್ ಬಜಾಲ್, ಭಗವತಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಬಿ.ಎಂ. ಮಾಧವ, ಪರಿವರ್ತನ ಗ್ರಾಮೀಣ ಸೊಸೈಟಿಯ ನಿರ್ದೇಶಕ ಡಿ. ಕೃಷ್ಣಾನಂದ, ಚಿಂತಕಿ ಡಾ. ರೀಟಾ ನೋರೋನ್ಹ, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸಾಮರಸ್ಯ ಮಂಗಳೂರಿನ ಅಧ್ಯಕ್ಷೆ ಮಂಜುಳಾ ನಾಯಕ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಸಾಲಿಯಾನ್, ಸಂಘದ ಉಪಾಧ್ಯಕ್ಷ ಹರೀಶ್ ಪೂಜಾರಿ ಮಾತನಾಡಿದರು.

ಸಿಐಟಿಯು ಅಧ್ಯಕ್ಷ, ನಾಗುರಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಯುವ ವಕೀಲ ಚರಣ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಬಾವ ಪದರಂಗಿ, ಗ್ಲೋಬಲ್ ಮಾರ್ಕೆಟ್ ವರ್ತಕರ ಸಂಘದ ಅಧ್ಯಕ್ಷ ಮೊಹಮ್ಮದ್ ಫೈರೋಜ್, ಕಾರ್ಮಿಕ ಮುಖಂಡ ಸುಕುಮಾರ್ ತೊಕ್ಕೊಟ್ಟು, ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ ಕವಿರಾಜ್ ಉಡುಪಿ ಮತ್ತಿತರರು ಇದ್ದರು.

ಸಂಘದ ನಿರ್ದೇಶಕ ಪ್ರವೀಣ್ ಕುಮಾರ್ ಸ್ವಾಗತಿಸಿ ನಿರೂಪಿಸಿದರೆ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೇಯಾ ವಂದಿಸಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ