ಶಿವಮೊಗ್ಗ: ಜಿಲ್ಲೆಯಲ್ಲಿ ಹೆಚ್ಚಿನ ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಬಾಲ ನ್ಯಾಯ ಮಂಡಳಿಯ ಪ್ರಧಾನ ನ್ಯಾಯಾಧೀಶರು ಹಾಗೂ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ದೀಪಾ ಹೇಳಿದರು.
ಪೋಕ್ಸೋ ಪ್ರಕರಣಗಳ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ರಾಜ್ಯ ಮಹಿಳಾ ನಿಲಯವು ಅನೇಕ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದರು.
ಸ್ರೀಯರ ಆರೋಗ್ಯ ತಪಾಸಣೆಗೆ ಮಹಿಳಾ ಸಿಬ್ಬಂದಿ ನಿಯೋಜಿಸಿ:ಮಾನಸಿಕ ಮತ್ತು ಬೌದ್ಧಿಕ ವಿಕಾರಗಳಿಗೆ ಒಳಗಾಗಿರುವರ ಆರೋಗ್ಯ ಮತ್ತು ದೈಹಿಕ ತಪಾಸಣೆ ಕಾಲಕಾಲಕ್ಕೆ ಆಗಬೇಕು. ಇದಕ್ಕೆ ಆರೋಗ್ಯ ಇಲಾಖೆಯಿಂದ ವೈದ್ಯರನ್ನು ನಿಯೋಜಿಸಬೇಕು. ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆಗೆ ಅನುಕೂಲವಾಗುವಂತೆ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಡಿಎಚ್ಒ ಹಾಗೂ ಮೆಗ್ಗಾನ್ ಆಸ್ಪತ್ರೆಯ ಅಧೀಕ್ಷಕರಿಗೆ ಸೂಚಿಸಿದರು.
ಇಂತಹ ತುರ್ತು ಸಂದರ್ಭಗಳಲ್ಲಿ ನಗರದ ಮೆಗ್ಗಾನ್ ಆಸ್ಪತ್ರೆಗೆ ಬಾಧಿತರನ್ನು ಕರೆದುಕೊಂಡು ಹೋದಾಗ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ವಿಳಂಬವಾಗುತ್ತಿದೆ. ಅಲ್ಲದೇ ಮಾನಸಿಕ ವಿಕಾರಗಳಿಗೆ ಒಳಗಾಗಿರುವ ಪ್ರಕರಣಗಳಿದ್ದಾಗ ಮಾನವೀಯ ನೆಲೆಯಲ್ಲಿ ವಿಶೇಷ ಪ್ರಕರಣವೆಂದು ಭಾವಿಸಿ, ವಿಳಂಬಕ್ಕೆ ಅವಕಾಶವಿಲ್ಲದಂತೆ ಕೂಡಲೇ ತಪಾಸಣೆ ನಡೆಸಿ, ಅಗತ್ಯ ಔಷಧ ನೀಡಿ ಕಳುಹಿಸಿಕೊಡಬೇಕು ಎಂದು ಸೂಚಿಸಿದರು.
ಕೆಲವು ಪ್ರಕರಣಗಳಲ್ಲಿ ದಾಖಲಾಗುವ ಅಪ್ರಾಪ್ತ ಮಕ್ಕಳು ಸರದಿ ಸಾಲಿನಲ್ಲಿರುವಾಗ ಸಂಸ್ಥೆಯ ರಕ್ಷಕರಿಂದ ತಪ್ಪಿಸಿಕೊಳ್ಳುವ ಸಂಭವನೀಯತೆಯೂ ಹೆಚ್ಚಾಗಿರುತ್ತದೆ. ಅಲ್ಲದೇ ಅಪ್ರಾಪ್ತ ಮಕ್ಕಳ ಗೌಪ್ಯತೆಯನ್ನು ಕಾಪಾಡುವಲ್ಲಿ ಬಾಲನ್ಯಾಯ ಕಾಯ್ದೆಯ ಉಲ್ಲಂಘನೆ ಆಗುತ್ತಿರುವುದನ್ನು ಮಂಡಳಿ ಗಂಭೀರವಾಗಿ ಪರಿಗಣಿಸಿದೆ. ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಕ್ಕಳ ಚಿಕಿತ್ಸೆಗಾಗಿ ಗೌಪ್ಯತೆಯ ದೃಷ್ಟಿಯಿಂದ ಪ್ರತ್ಯೇಕ ವ್ಯವಸ್ಥೆ ಒದಗಿಸಲು ಮುಂದಾಗುವಂತೆ ಸೂಚಿಸಿದರು.