ಕನ್ನಡಪ್ರಭ ವಾರ್ತೆ ಮಂಗಳೂರು
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶವ್ಯಾಪಿಯಾಗಿ ನಗರ ಪ್ರದೇಶದಲ್ಲಿ ನೆಲೆಸಿರುವ ವಸತಿ ರಹಿತರು, ಕಡುಬಡವರು, ಮಧ್ಯಮ ವರ್ಗದ ಬಡ ಕುಟುಂಬಗಳಿಗೆ ಯೋಗ್ಯ ವಸತಿ ಒದಗಿಸುವ ಉದ್ದೇಶದಿಂದ ಕಳೆದ ಸೆಪ್ಟಂಬರ್ ೧ ರಿಂದ ಪಿಎಂಎವೈ-ಯು ೨.೦ ಯೋಜನೆ ಅನುಷ್ಠಾನಕ್ಕೆ ತಂದಿದೆ. ಈ ಪಿಎಂಎವೈ-ಯು ೨.೦ ಯೋಜನೆ ಜಾರಿ ಮಾರ್ಗಸೂಚಿ, ನಿಯಮಾವಳಿ ಪ್ರಕಾರ ಇಲ್ಲಿವರೆಗೆ ಕೇಂದ್ರಾಡಳಿತ ಪ್ರದೇಶ ಒಳಗೊಂಡಂತೆ ೨೯ ರಾಜ್ಯಗಳು ಕೇಂದ್ರದ ಜತೆಗೆ ಒಪ್ಪಂದ ಮಾಡಿಕೊಂಡಿದೆ. ಆದರೆ ಸಿದ್ದರಾಮಯ್ಯ ಸರ್ಕಾರ ಮಾತ್ರ ಇಲ್ಲಿವರೆಗೂ ನಗರ ಪ್ರದೇಶದ ಬಡವರಿಗೆ ವಸತಿ ಒದಗಿಸುವ ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಕ್ಕೆ ಒಪ್ಪಂದ ಮಾಡಿಕೊಂಡಿಲ್ಲ ಎಂದು ಕೇಂದ್ರ ವಸತಿ ಸಚಿವ ತೋಖಾನ್ ಸಾಹು ತಿಳಿಸಿದ್ದಾರೆ.
ಪಿಎಂಎವೈ-ಯು ೨.೦ ಯೋಜನೆ ಏಮನಿದು?ಪ್ರಧಾನಮಂತ್ರಿ ಆವಾಸ್ ಯೋಜನೆ- ನಗರ ೨.೦ ಯೋಜನೆಯ ಮೂಲಕ ಕೇಂದ್ರ ಸರ್ಕಾರ ಮುಂದಿನ ೫ ವರ್ಷಗಳಲ್ಲಿ ನಗರ ಪ್ರದೇಶದಲ್ಲಿ ಒಂದು ಕೋಟಿ ಮನೆಗಳನ್ನು ನಿರ್ಮಿಸುವ ಗುರಿ ಹೊಂದಿದೆ. ನಗರದ ಬಡ ಮತ್ತು ಮಧ್ಯಮ ವರ್ಗದ ಬಡ ಕುಟುಂಬಗಳಿಗೆ ಮನೆಯನ್ನು ನಿರ್ಮಿಸಲು, ಖರೀದಿಸಲು ಆರ್ಥಿಕ ನೆರವು ನೀಡಲಾಗುತ್ತದೆ.
ಮನೆ ಇಲ್ಲದ ಆರ್ಥಿಕವಾಗಿ ದುರ್ಬಲ ವಿಭಾಗ (ವಾರ್ಷಿಕ ಆದಾಯ ೩ ಲಕ್ಷ ರು.) ಕಡಿಮೆ ಆದಾಯದ ಗುಂಪು ೩ ಲಕ್ಷ ರು.ನಿಂದ ೬ ಲಕ್ಷ ರು. ವರೆಗೆ ವಾರ್ಷಿಕ ಆದಾಯ) ಅಥವಾ ಮಧ್ಯಮ ಆದಾಯ ಗುಂಪು (ವಾರ್ಷಿಕ ಆದಾಯ ೬ ಲಕ್ಷ ರು.ನಿಂದ ೯ ಲಕ್ಷ ರು.) ವಿಭಾಗಗಳಿಗೆ ಸೇರಿದ ಕುಟುಂಬಗಳು ಮನೆ ಖರೀದಿಸಲು ಅಥವಾ ನಿರ್ಮಿಸಲು ಅರ್ಹರಾಗಿರುತ್ತಾರೆ. ವಿಧವೆಯರು, ಒಂಟಿ ಮಹಿಳೆಯರು, ದಿವ್ಯಾಂಗರು, ಹಿರಿಯ ನಾಗರಿಕರು, ಟ್ರಾನ್ಸ್ಜೆಂಡರ್ಗಳು, ಎಸ್ಸಿ ಎಸ್ಟಿ, ಅಲ್ಪಸಂಖ್ಯಾತರು ಮತ್ತು ಸಮಾಜದಲ್ಲಿ ಹಿಂದುಳಿದ ಮತ್ತು ದುರ್ಬಲ ವರ್ಗಗಳಿಗೆ ಆದ್ಯತೆ ನೀಡಲಾಗುತ್ತದೆ. ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಗುರುತಿಸಲಾದ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ವಿವಿಧ ಕುಶಲಕರ್ಮಿಗಳು, ಸ್ವಚ್ಛತಾ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು, ಕೊಳಗೇರಿ ನಿವಾಸಿಗಳಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.