ಕನ್ನಡಪ್ರಭ ವಾರ್ತೆ ಮದ್ದೂರು
ಪುರಸಭೆ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ನ ಕೋಕಿಲ ಅರುಣ್, ಉಪಾಧ್ಯಕ್ಷರಾಗಿ ಟಿ.ಆರ್.ಪ್ರಸನ್ನಕುಮಾರ್ ತಲಾ 15 ಮತ ಪಡೆದು ಆಯ್ಕೆಯಾದರು.
23 ಸದಸ್ಯರ ಬಲದ ಪುರಸಭೆಯಲ್ಲಿ ಜೆಡಿಎಸ್ 12, ಕಾಂಗ್ರೆಸ್ 4, ಬಿಜೆಪಿ 1 ಹಾಗೂ 6 ಮಂದಿ ಪಕ್ಷೇತರರು ಹಾಗೂ ಓರ್ವ ಎಂಪಿ, ಎಂಎಲ್ಎ ಸೇರಿ ಒಟ್ಟು 25 ಜನರಿಗೆ ಮತದಾನದ ಹಕ್ಕು ಹೊಂದಿದ್ದರು. ಜೆಡಿಎಸ್ನ 12 ಮಂದಿ ಸದಸ್ಯರ ಪೈಕಿ 6 ಮಂದಿ ಸದಸ್ಯರು ಕಾಂಗ್ರೆಸ್ಗೆ ಬೆಂಬಲ ನೀಡುವ ಮೂಲಕ ಜೆಡಿಎಸ್-ಬಿಜೆಪಿ ನಾಯಕರಿಗೆ ಬಿಗ್ ಶಾಕ್ ನೀಡಿದ್ದಾರೆ.ಮೊದಲ ಅವಧಿಯಲ್ಲಿ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಎರಡನೇ ಅವಧಿಯಲ್ಲಿ ಕೇವಲ 4 ಸ್ಥಾನ ಹೊಂದಿದ್ದ ಕಾಂಗ್ರೆಸ್ ಶಾಸಕ ಕೆ.ಎಂ.ಉದಯ್ ಅವರ ಚಾಣಕ್ಷ ನಡೆಯಿಂದ ಪುರಸಭೆಯಲ್ಲಿ ಒಟ್ಟು 15 ಮತ ಪಡೆದ ಕೋಕಿಲಾ ಅರುಣ್ ಹಾಗೂ ಪ್ರಸನ್ನಕುಮಾರ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಚುನಾವಣಾಧಿಕಾರಿಯಾಗಿ ಪ್ರಭಾರ ತಹಸೀಲ್ದಾರ್ ಸೋಮಶೇಖರ್ ಕಾರ್ಯ ನಿರ್ವಹಿಸಿದರು. ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಯಶಸ್ವಿಯಾದ ಆಪರೇಷನ್ ಹಸ್ತ
ಪುರಸಭೆ ಅಧಿಕಾರ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಲು, ಜೆಡಿಎಸ್ಗೆ ಮುಖಭಂಗ ಮಾಡಲು ಶಾಸಕ ಕೆ.ಎಂ.ಉದಯ್ ರೂಪಿಸಿದ ರಣತಂತ್ರ ಯಶಸ್ವಿಯಾಗಿದೆ.
12 ಜನ ಜೆಡಿಎಸ್ ಸದಸ್ಯರ ಪೈಕಿ 6 ಮಂದಿ ಜೆಡಿಎಸ್ಗೆ ಕೈಕೊಟ್ಟಿದ್ದಾರೆ. ಬಹುಮತ ಇದ್ದರು ಅಧಿಕಾರ ಹಿಡಿಯಲಾಗದೆ ಜೆಡಿಎಸ್ ಮುಖಭಂಗ ಅನುಭವಿಸಿದೆ. ಪಟ್ಟಣ ಪುರಸಭೆಯಲ್ಲಿ ಅಧಿಕಾರ ಹಿಡಿಯುವ ಮೂಲಕ ಶಾಸಕ ಕೆ.ಎಂ.ಉದಯ್ ತಮ್ಮ ಪ್ರಾಬಲ್ಯ ಸಾಬೀತು ಪಡಿಸಿದ್ದಾರೆ.