ಬೆಂಗಳೂರು : ಜನಸಂಖ್ಯೆ ಹೆಚ್ಚಾದಷ್ಟೂ ಪರಿಸರ ನಾಶವಾಗುತ್ತದೆ. ಆದ್ದರಿಂದ ಜನಸಂಖ್ಯೆ ನಿಯಂತ್ರಣ ಅಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.
ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದ ಜನಸಂಖ್ಯೆಯಲ್ಲಿ ಚೀನಾ ಮೊದಲ ಸ್ಥಾನ ಪಡೆದಿತ್ತು. ಇದೀಗ ನಾವು ಚೀನಾವನ್ನು ಹಿಂದಿಕ್ಕಿ ಪ್ರಥಮ ಸ್ಥಾನದಲ್ಲಿದ್ದೇವೆ. ಬೆಂಗಳೂರಿನಲ್ಲೇ 1.44 ಕೋಟಿ ಜನಸಂಖ್ಯೆ ಇದೆ. ಜನಸಂಖ್ಯೆ ಹೆಚ್ಚಾದಂತೆಲ್ಲಾ ಪೃಕೃತಿ, ಪರಿಸರ ನಾಶವಾಗುತ್ತದೆ. ಆದ್ದರಿಂದ ಜನಸಂಖ್ಯೆ ನಿಯಂತ್ರಣದ ಜೊತೆಗೆ ಪರಿಸರದ ಕುರಿತು ಜ್ಞಾನ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ ಆಗುತ್ತದೆ. ಕರ್ನಾಟಕದಲ್ಲಿನ ಪಶ್ಚಿಮ ಘಟ್ಟ, ವೈವಿಧ್ಯಮಯ ಕಾಡು, ನದಿಗಳು, ಜೀವ ಸಂಪತ್ತನ್ನು ನಾವು ಕಾಪಾಡಬೇಕು. ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ. ‘ಪ್ರಕೃತಿ ಮನುಷ್ಯನ ಆಸೆಗಳನ್ನು ಈಡೇರಿಸುತ್ತದೆ. ಆದರೆ ದುರಾಸೆಗಳನ್ನಲ್ಲ’ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದಾರೆ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ:
ಉನ್ನತ ಶಿಕ್ಷಣದಲ್ಲಿ ಪರಿಸರವು ಪಠ್ಯಕ್ರಮವಾಗುವುದು ಅತ್ಯಂತ ಅವಶ್ಯಕವಾಗಿದೆ. ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ಭೂಮಿಗೆ ರಾಸಾಯನಿಕ ಗೊಬ್ಬರ ಅತಿಯಾಗಿ ಬಳಸಿದ್ದರಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗಿದೆ. ಇದನ್ನು ಹೀಗೇ ಬಿಟ್ಟರೆ ಕರ್ನಾಟಕ ಮುಂದೆ ಮರುಭೂಮಿಯಾಗಲಿದೆ. ಅದಕ್ಕಾಗಿ ನಾವು ಈಗಲೇ ಎಚ್ಚರಿಕೆ ವಹಿಸಲೇಬೇಕು. ಒಂದು ಬಾರಿ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದರು.
ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ ‘ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ’ ಎಂದಿದೆ. ಇದು ಕಷ್ಟದ ಕೆಲಸವಾದರೂ ನಾವು ಮಾಡಲೇಬೇಕು. ಪರಿಸರ ಶುದ್ಧವಾಗಿದ್ದರೆ ಜನ ಆರೋಗ್ಯವಾಗಿರುತ್ತಾರೆ. ಸಾರ್ವಜನಿಕ ಸಾರಿಗೆ ಉಪಯೋಗಿಸೋಣ. ಹತ್ತಿರದ ಸ್ಥಳಗಳಿಗೆ ನಡೆದು ಹೋಗೋಣ ಅಥವಾ ಸೈಕಲ್ ಬಳಸೋಣ. ಹನಿ ಹನಿ ನೀರನ್ನೂ ಸಂಗ್ರಹಿಸಿ ಬಳಸಿಕೊಳ್ಳೋಣ ಎಂದು ಹೇಳಿದರು.
ಪಾರ್ಕ್ ನಿರ್ಮಾಣಕ್ಕೆ ಸಹಕಾರ:
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ನಗರದಲ್ಲಿ ಅರಣ್ಯ ಇಲಾಖೆಗೆ ಸೇರಿರುವ ಭೂಮಿಗಳನ್ನು ಕಬ್ಬನ್ ಪಾರ್ಕ್, ಲಾಲ್ ಬಾಗ್ ರೀತಿ ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆ ಮುಂದಾದರೆ ಪಾಲಿಕೆಯಿಂದ ಅಗತ್ಯ ಧನಸಹಾಯ ನೀಡಲಾಗುವುದು. ಪ್ರತಿ ಶಾಲೆಯಲ್ಲಿ 25 ವಿದ್ಯಾರ್ಥಿಗಳನ್ನು ಒಳಗೊಂಡ ‘ಕ್ಲೈಮೇಟ್ ಆ್ಯಕ್ಷನ್ ಕ್ಲಬ್ʼ ರಚಿಸಲು ಸೂಚನೆ ನೀಡಲಾಗಿದೆ. ನಗರದಲ್ಲಿ 1.20 ಕೋಟಿ ವಾಹನಗಳಿವೆ. ಇದರಿಂದ ಪರಿಸರ ಮಾಲಿನ್ಯ ಹೆಚ್ಚಾಗಿದ್ದು ನಿಯಂತ್ರಣ ಮಾಡಬೇಕು ಎಂದು ತಿಳಿಸಿದರು.
ಪರಿಸರದ ಅಭಿವೃದ್ಧಿಗೆ ಶ್ರಮಿಸಿದ ಹಲವು ಸಾಧಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಸಚಿವರಾದ ಈಶ್ವರ್ ಖಂಡ್ರೆ, ಡಾ.ಸುಧಾಕರ್, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು.ಬಿಜೆಪಿಗರ ಬೀದಿ ಪ್ರಹಸನ:
‘ಚಿನ್ನಸ್ವಾಮಿ ಕ್ರೀಡಾಂಗಣ ಬಳಿಯ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಎಲ್ಲಾ ಕ್ರಮ ಕೈಗೊಂಡಿದ್ದೇವೆ. ಆದರೂ ಬಿಜೆಪಿ ನಾಯಕರು ಬೀದಿ ಪ್ರಹಸನ ಮಾಡಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿ ಬಿಡುಗಡೆ ಮಾಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಲ್ತುಳಿತ ಅವಘಡದ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ. ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ. ಇಷ್ಟಾದರೂ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗರ ನಡೆ ರಾಜಕೀಯ ಪ್ರೇರಿತ ಎಂದು ದೂರಿದ್ದಾರೆ.ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದಲ್ಲ. ಅಪಘಾತ, ಹತ್ಯೆ, ದೌರ್ಜನ್ಯಗಳು ನಡೆದ ತಕ್ಷಣ ಸತ್ತ ಜೀವಗಳನ್ನು ಹುಡುಕಿಕೊಂಡು ಹೋಗುವ ರಣಹದ್ದುಗಳಂತೆ ಎರಗಿ ಬೀಳುವುದು ಅವರ ರಕ್ತದಲ್ಲಿಯೇ ಇದೆ. ತಮ್ಮ ಊಟದೆಲೆಯ ಮೇಲೆ ಆನೆ ಸತ್ತುಬಿದ್ದಿದ್ದರೂ ಎದುರಿಗಿದ್ದವರ ಎಲೆ ಮೇಲೆ ಸತ್ತು ಬಿದ್ದ ನೊಣದ ಕಡೆ ಬೊಟ್ಟು ಮಾಡುವುದು ಬಿಜೆಪಿಯ ಹಳೆಯ ಚಾಳಿ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿನ ದುರಂತಗಳಲ್ಲಿ ಅವರು ಯಾಕೆ ರಾಜೀನಾಮೆ ನೀಡಿಲ್ಲ. ಇವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ? ಎಂದು ಪ್ರಶ್ನಿಸಿದರು.
ಮೋದಿ ಯಾಕೆ ರಾಜೀನಾಮೆ ನೀಡಿಲ್ಲ? : 2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಹತ್ಯಾಕಾಂಡದಲ್ಲಿ 2,000 ಅಮಾಯಕರು ಸತ್ತರು. ಘಟನೆಯ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸೂಚನೆ ನೀಡಿದರೂ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ರಾಜೀನಾಮೆ ನೀಡಿಲ್ಲ, ಇಲ್ಲಿಯವರೆಗೆ ಕನಿಷ್ಠ ವಿಷಾದವನ್ನೂ ಸೂಚಿಸಿಲ್ಲ. ನಮ್ಮ ರಾಜೀನಾಮೆ ಕೇಳುವವರು ಮೊದಲು ಇದಕ್ಕೆ ಉತ್ತರಿಸಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಪಹಲ್ಗಾಮ್ ಹತ್ಯಾಕಾಂಡದಲ್ಲಿ 26 ಭಾರತೀಯರು ಪ್ರಾಣ ಕಳೆದುಕೊಂಡರು. ಈ ಘಟನೆಯ ಹೊಣೆ ಹೊತ್ತು ಪ್ರಧಾನಿ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷ ಒತ್ತಾಯಿಸಿಲ್ಲ. ಈ ಘಟನೆಯ ಚರ್ಚೆಗೆ ಕನಿಷ್ಠ ಸಂಸತ್ ವಿಶೇಷ ಅಧಿವೇಶನ ಕರೆಯಲೂ ಪ್ರಧಾನಿಯವರು ಒಪ್ಪಿಕೊಂಡಿಲ್ಲ. ಇಲ್ಲಿಯವರೆಗೆ 26 ಅಮಾಯಕರ ಸಾವಿಗೆ ಕಾರಣರಾದ ನಾಲ್ಕು ಮಂದಿ ದುರುಳರು ಯಾರು ಎನ್ನುವುದನ್ನು ಪತ್ತೆ ಹಚ್ಚಲಾಗಿಲ್ಲ. ಇದು ಕೇಂದ್ರ ಸರ್ಕಾರದ ವೈಫಲ್ಯ ಅಲ್ಲವೇ? ಈ ವೈಫಲ್ಯದ ಹೊಣೆಯನ್ನು ಯಾರು ಹೊರಬೇಕು? ಪಂಡಿತ ಜವಾಹರಲಾಲ್ ನೆಹರೂ ಅವರಾ? ರಾಹುಲ್ ಗಾಂಧಿಯವರಾ? ಇಲ್ಲವೇ ಪ್ರಧಾನಿ ನರೇಂದ್ರ ಮೋದಿಯವರೇ? ಎಂದು ಪ್ರಶ್ನಿಸಿದ್ದಾರೆ.ಈಶಾನ್ಯ ಭಾಗದ ಮಣಿಪುರ ಹಿಂಸೆಯ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ನೂರಾರು ಮಂದಿ ಸಾವಿಗೀಡಾಗಿದ್ದರೂ ಆ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಬಿರೇನ್ ಸಿಂಗ್ 20 ತಿಂಗಳ ಕಾಲ ಕುರ್ಚಿಗೆ ಅಂಟಿ ಕೂತಿದ್ದರು. ಕೊನೆಗೂ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ನಂತರ ರಾಜೀನಾಮೆ ನೀಡಿದ್ದರು. ಈಗಲೂ ಅಲ್ಲಿ ಹಿಂಸಾಚಾರ ಮುಂದುವರಿದಿದೆ. ಇದರ ಹೊಣೆಯನ್ನು ಕೇಂದ್ರ ಗೃಹಸಚಿವರು ಹೊರುವುದು ಬೇಡವೇ? ಎಂದು ಕೇಳಿದ್ದಾರೆ.
ಗುಜರಾತ್ನ ಮೊರ್ಬಿ ಸೇತುವೆ ಕುಸಿದು ಬಿದ್ದು 140 ಮಂದಿ ಮೃತಪಟ್ಟಿದ್ದರು. ಜನವರಿ ತಿಂಗಳಲ್ಲಿ ಮಹಾಕುಂಭಮೇಳದಲ್ಲಿ 30 ಯಾತ್ರಿಕರು ಪ್ರಾಣ ಕಳೆದುಕೊಂಡರು. ಆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿರುವವರು ಬಿಜೆಪಿಗೆ ಸೇರಿದವರಲ್ಲವೇ? ಹೀಗಿರುವಾಗ ನಮ್ಮ ರಾಜೀನಾಮೆ ಕೇಳಲು ರಾಜ್ಯದ ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.