ಕನ್ನಡಪ್ರಭ ವಾರ್ತೆ ಕೋಲಾರರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಕನ್ನಡಿಗರ ಹಿತಕ್ಕಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಈಡುಗಾಯಿ ಒಡೆಯುವ ಚಳವಳಿ ಪ್ರಯುಕ್ತ ನಗರದ ಕೋಲಾರಮ್ಮ ದೇವಾಲಯದಲ್ಲಿ ಈಡುಗಾಯಿ ಒಡೆಯಲಾಯಿತು.ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಮುಖಂಡರು ಕೋಲಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಈಡುಗಾಯಿ ಹೊಡೆದು ಚಳವಳಿ ಪ್ರಾರಂಭಿಸಿದರು. 2 ಕೋಟಿ ಈಡುಗಾಯಿ:
ಕೋಲಾರಮ್ಮ ದೇವಾಲಯದಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರಿಂದ ಸಮಗ್ರ ಕನ್ನಡಿಗರ ಹಿತಕ್ಕಾಗಿ ಈಡುಗಾಯಿ ಹೊಡೆದು ಚಳವಳಿಗೆ ಚಾಲನೆ ನೀಡಿದೆ, ಈಡುಗಾಯಿ ಚಳುವಳಿಯ ಮುಖ್ಯ ಉದ್ದೇಶ ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ, ಕನ್ನಡ ನಾಡಿನ ಅಭಿವೃದ್ಧಿ, ಮಹಾದಾಯಿ ಯೋಜನೆ, ಕಳಸಾ ಬಂಡೂರಿ, ಮೇಕೆದಾಟು ಯೋಜನೆ, ಉದ್ಯೋಗ, ಗ್ರೇಟರ್ ಬೆಂಗಳೂರು, ಸಮಗ್ರ ಕರ್ನಾಟಕದ ಅಭಿವೃದ್ಧಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಇಡೀ ರಾಜ್ಯ ಈಡುಗಾಯಿ ಚಳುವಳಿ ಮೂಲಕ ಒತ್ತಾಯ ಮಾಡಲಾಗುವುದು ಎಂದು ತಿಳಿಸಿದರು.ಜಿಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೂಟದ ಆಧ್ಯಕ್ಷ ಅ.ಕೃ.ಸೋಮಶೇಖರ್, ಗೌರವಾಧ್ಯಕ್ಷ ಪಿ.ನಾರಾಯಣಪ್ಪ, ಶಾಶ್ವತ ನೀರಾವರಿ ಹೋರಾಟ ಸಮಿತಿ ವಿ.ಕೆ.ರಾಜೇಶ್, ಕರವೇ ಪ್ರವೀಣ್ ಶೆಟ್ಟಿ ಬಳಗದ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್, ಭುವನೇಶ್ವರಿ ಸಂಘದ ಜಿಲ್ಲಾಧ್ಯಕ್ಷ ಕೆ.ಆರ್.ತ್ಯಾಗರಾಜ್, ಕನ್ನಡ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಪಿಎಂಸಿ ಪುಟ್ಟರಾಜು, ಮತ್ತಿತರ ಕನ್ನಡಪರ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.