ಡಿಸೆಂಬರ್ 21ರಿಂದ ಬಹು ನಿರೀಕ್ಷಿತ ‘ಕರಾವಳಿ ಉತ್ಸವ’

KannadaprabhaNewsNetwork | Published : Dec 10, 2024 12:30 AM

ಸಾರಾಂಶ

ಬಹುನಿರೀಕ್ಷಿತ ಕರಾವಳಿ ಉತ್ಸವ ಡಿ.21ರಿಂದ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.

28,29ರಂದು ಬೀಚ್‌ ಉತ್ಸವ, ಜ.4,5ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಆಹಾರ ಮೇಳ, ನದಿ ಉತ್ಸವ

ಕನ್ನಡಪ್ರಭ ವಾರ್ತೆ ಮಂಗಳೂರು

ಬಹುನಿರೀಕ್ಷಿತ ಕರಾವಳಿ ಉತ್ಸವ ಡಿ.21ರಿಂದ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.ಡಿ.21ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಂಸ್ಕೃತಿಕ ವೈಭವವನ್ನು ಪ್ರದರ್ಶಿಸಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಸಂಸ್ಕೃತಿ, ಭಾಷೆ, ವೈವಿಧ್ಯಮಯ ಆಚರಣೆಗಳನ್ನು ಪ್ರದರ್ಶಿಸಬೇಕು. ವಿವಿಧ ಅಕಾಡೆಮಿಗಳೊಂದಿಗೆ ಸೇರಿ ಕಾರ್ಯಕ್ರಮ ನಡೆಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.ಡಿ.28, 29ರಂದು ಪಣಂಬೂರು/ ತಣ್ಣೀರುಬಾವಿ ಬೀಚ್‍ನಲ್ಲಿ ಬೀಚ್ ಉತ್ಸವ ನಡೆಯಲಿದೆ. ಜ.4, 5ರಂದು ಕದ್ರಿ ಪಾರ್ಕ್‍ನಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿ, ಯುವ ಸಮೂಹದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ‘ಯುವ ಉತ್ಸವ’ ನಡೆಯಲಿದೆ. ಜ.17,18ರಂದು ಆಕರ್ಷಕ ಗಾಳಿಪಟ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ. ವೈವಿಧ್ಯಮಯ ತಿಂಡಿ- ತಿನಿಸುಗಳ ಆಹಾರ ಮೇಳವನ್ನು ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.ಪ್ರಕೃತಿ ಮತ್ತು ನದಿ ನೀರು ಸೌಂದರ್ಯವನ್ನು ಆಸ್ವಾದಿಸಲು ನದಿ ಉತ್ಸವ ಕಾರ್ಯಕ್ರಮವನ್ನು ಹರೇಕಳದಲ್ಲಿ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಸಲ ಕರಾವಳಿ ಉತ್ಸವದಲ್ಲಿ ಹಿಂದಿಗಿಂತಲೂ ವಿಭಿನ್ನವಾಗಿ ಜನಾಕರ್ಷಣೆಯ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ವೃತ್ತಿಪರ ಕಲಾಸಾಧಕರನ್ನು ಒಳಗೊಂಡ ಕಾರ್ಯಕ್ರಮದ ರೂಪುರೇಷೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ., ಡಿಸಿಪಿ ಸಿದ್ದಾರ್ಥ್ ಗೋಯಲ್, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ರಾಜೇಂದ್ರ, ಅಪರ ಜಿಲ್ಲಾಧಿಕಾರಿ ಡಾ.ಜಿ. ಸಂತೋಷ್‌ ಕುಮಾರ್, ಮೂಡ ಆಯುಕ್ತ ನೂರ್ ಜಹಾನ್ ಮತ್ತಿತರರು ಇದ್ದರು.

Share this article