ರಾಣಿಬೆನ್ನೂರು: ಸ್ವಚ್ಛತಾ ಕಾರ್ಯಗಳು ಯಾಂತ್ರೀಕರಣಗೊಳ್ಳುತ್ತಿರುವುದರಿಂದ ಭವಿಷ್ಯದಲ್ಲಿ ನಗರಗಳು ಮತ್ತು ಪಟ್ಟಣಗಳಲ್ಲಿ ಪೌರಕಾರ್ಮಿಕರ ಅವಶ್ಯಕತೆ ಕಡಿಮೆಯಾಗಬಹುದು. ಆದ್ದರಿಂದ ಈಗಿನಿಂದಲೇ ಬೇರೊಂದು ಉದ್ಯೋಗವನ್ನು ಹುಡುಕಿಕೊಂಡು ನಿಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ ಹೇಳಿದರು.
ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಮಹತ್ವದ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಸದುಪಯೋಗವನ್ನು ಪಡೆಯಬೇಕು. ನಗರದ ಸ್ವಚ್ಛತೆಯನ್ನು ಕಾಪಾಡುವ ಮೂಲಕ ನಾಗರಿಕರ ಆರೋಗ್ಯವನ್ನು ರಕ್ಷಿಸುತ್ತಿರುವ ನೀವು, ನಿಮ್ಮದೇ ಆರೋಗ್ಯದ ಮೇಲೂ ವಿಶೇಷ ಗಮನ ಹರಿಸಬೇಕು. ಇದನ್ನು ಮನಗಂಡು ಈ ಯೋಜನೆ ಜಾರಿಗೆ ತರಲಾಗಿದೆ. ಸುಮಾರು 25 ಸಾವಿರ ಪೌರ ಕಾರ್ಮಿಕರನ್ನು ಕಾಯಂ ಸೇವೆಗೆ ಒಳಪಡಿಸುವ ಯೋಜನೆಯೂ ಸರ್ಕಾರದ ಮುಂದೆ ಇದ್ದು, ಹಂತ ಹಂತವಾಗಿ ಕಾಯಂಗೊಳಿಸಲಾಗುವುದು ಎಂದರು.
ಈ ಸಾಲಿನ ಬಜೆಟ್ನಲ್ಲಿ 750 ಕುಟುಂಬಗಳಿಗೆ ಆರೋಗ್ಯ ವಿಮೆ ಸೌಲಭ್ಯ ಒದಗಿಸುವ ಯೋಜನೆ ರೂಪಿಸಲಾಗಿದೆ. ಮನೆ ನಿರ್ಮಾಣಕ್ಕೆ ಸಹಾಯಧನ ಸೇರಿದಂತೆ ಹಲವು ಕಲ್ಯಾಣ ಯೋಜನೆಗಳನ್ನು ಸರ್ಕಾರ ಜಾರಿಗೆ ತರುತ್ತಿದೆ. ಆರೋಗ್ಯ ರಕ್ಷಣೆಗೆ ಸರ್ಕಾರದಿಂದ ತಲಾ ₹5 ಲಕ್ಷದವರೆಗೆ ವೆಚ್ಚ ಮಾಡಲಾಗುತ್ತಿದೆ. ನಿಮ್ಮ ಮಕ್ಕಳು ಇದೇ ವೃತ್ತಿಗೆ ಬಾರದಂತೆ ಉತ್ತಮ ಶಿಕ್ಷಣ ನೀಡಿ, ಅವರನ್ನು ಅಧಿಕಾರಿಗಳು, ವೈದ್ಯರು, ಎಂಜಿನಿಯರ್ಗಳಾಗಿ ಬೆಳೆಸಬೇಕು ಅಥವಾ ಸ್ವಂತ ಉದ್ಯೋಗಕ್ಕೆ ಪ್ರೋತ್ಸಾಹಿಸಬೇಕು. ಇದಕ್ಕೆ ಸರ್ಕಾರ ಅಗತ್ಯ ಸಹಾಯ ಒದಗಿಸುತ್ತದೆ ಎಂದರು.ನಿಗಮದ ಕಾರ್ಯದರ್ಶಿ ಹಾಗೂ ವ್ಯವಸ್ಥಾಪಕ ಟಿ. ಕುಮಾರ ಮಾತನಾಡಿ, ಆರೋಗ್ಯ ವಿಮೆ ಮತ್ತು ಅಪಘಾತ ವಿಮೆ ಗರಿಷ್ಠ ₹5 ಲಕ್ಷ ಮಿತಿಯೊಳಗೆ ಲಭ್ಯವಿದ್ದು, ಸರ್ಕಾರ ನಿಗದಿಪಡಿಸಿದ ದರದಂತೆ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಸಿಗುತ್ತದೆ. ಸ್ಮಾರ್ಟ್ ಕಾರ್ಡ್ ಬಳಸಿ ರಾಣಿಬೆನ್ನೂರು ಸೇರಿದಂತೆ ಬೆಂಗಳೂರು, ದೆಹಲಿ, ಮುಂಬೈ ಮೊದಲಾದ ನಗರಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕ್ಯಾಶ್ಲೆಸ್ ಚಿಕಿತ್ಸೆ ಪಡೆಯಬಹುದು ಎಂದರು.
ವ್ಯವಸ್ಥಾಪಕ ನಿರ್ದೇಶಕ ಬಿ.ಟಿ. ಮಂಜುನಾಥ ಮಾತನಾಡಿ, ಪೌರಕಾರ್ಮಿಕರಿಗೆ ಸರ್ಕಾರ ನೀಡುವ ವಿವಿಧ ಸೌಲಭ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ನಿಮ್ಮ ಹಿತಕ್ಕಾಗಿ ನಿಗಮದ ಅಧ್ಯಕ್ಷರು ಶ್ರಮಪಟ್ಟು ಸರ್ಕಾರದಿಂದ ಅನೇಕ ಸೌಲಭ್ಯಗಳನ್ನು ದೊರಕಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.