ಶಿಗ್ಗಾಂವಿ-ಸವಣೂರು ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ-ಶಾಸಕ ಮಾನೆ

KannadaprabhaNewsNetwork | Published : Nov 8, 2024 12:37 AM

ಸಾರಾಂಶ

ಶಿಗ್ಗಾಂವಿ-ಸವಣೂರು ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ. ಬೆಲೆ ಏರಿಕೆ ಬಿಸಿಯಿಂದ ಕಂಗೆಟ್ಟಿದ್ದ ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ನೆರವು ನೀಡುತ್ತಿರುವ ಕಾಂಗ್ರೆಸ್‌ಗೆ ಆಶೀರ್ವದಿಸಲಿದ್ದಾರೆ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ವಿಶ್ವಾಸ ವ್ಯಕ್ತಪಡಿಸಿದರು.

ಶಿಗ್ಗಾಂವಿ: ಶಿಗ್ಗಾಂವಿ-ಸವಣೂರು ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ. ಬೆಲೆ ಏರಿಕೆ ಬಿಸಿಯಿಂದ ಕಂಗೆಟ್ಟಿದ್ದ ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ನೆರವು ನೀಡುತ್ತಿರುವ ಕಾಂಗ್ರೆಸ್‌ಗೆ ಆಶೀರ್ವದಿಸಲಿದ್ದಾರೆ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ವಿಶ್ವಾಸ ವ್ಯಕ್ತಪಡಿಸಿದರು.ತಾಲೂಕಿನ ತಿಮ್ಮಾಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಶಿಗ್ಗಾಂವಿ-ಸವಣೂರು ವಿಧಾನಸಭೆ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹ್ಮದ ಖಾನ ಪಠಾಣ ಪರ ಮತಯಾಚನೆ ಕೈಗೊಂಡು ಅವರು ಮಾತನಾಡಿದರು. ಬಿಜೆಪಿ ಚುನಾವಣೆ ಸಮಯದಲ್ಲಿ ಮಾತ್ರ ಜಾತಿ, ಧರ್ಮಗಳನ್ನು ಎಳೆದು ತರುತ್ತದೆ. ಬರೀ ಭಾವನೆಗಳನ್ನು ಕೆದಕಿ ರಾಜಕೀಯವಾಗಿ ಲಾಭ ಮಾಡಿಕೊಳ್ಳುವ ಕುತಂತ್ರ ಹೂಡುತ್ತದೆ. ಈ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡುತ್ತಿದೆ. ಧರ್ಮ, ಜಾತಿ ಮತ್ತು ಹಣದ ಮೇಲೆ ಆಯ್ಕೆಯಾಗುವ ಪ್ರತಿನಿಧಿಗಳಿಂದ ಕ್ಷೇತ್ರಕ್ಕೆ ಯಾವುದೇ ಉಪಯೋಗ ಆಗುವುದಿಲ್ಲ. ಸಾಧನೆ, ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಮತಯಾಚನೆ ನಡೆಸುತ್ತಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದ ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಅನುಕೂಲವಾಗಿದೆ. ನೇರವಾಗಿ ಫಲಾನುಭವಿಗಳ ಖಾತೆಗೆ ದೊಡ್ಡ ಪ್ರಮಾಣದ ಆರ್ಥಿಕ ನೆರವು ನೀಡುತ್ತಿರುವ ಏಕೈಕ ರಾಜ್ಯ ಎನ್ನುವ ಹಿರಿಮೆಗೆ ಕರ್ನಾಟಕ ಪಾತ್ರವಾಗಿದೆ ಎಂದು ಹೇಳಿದರು.ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಮೂಲಕ ಬಿಜೆಪಿ ಬಡವರನ್ನು ಅಣಕಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಸದಾಕಾಲವೂ ಜನರ ಜತೆ ಬೆರೆತು ಕಷ್ಟ-ಸುಖಗಳಲ್ಲಿ ಭಾಗಿಯಾಗುವ ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹ್ಮದ ಖಾನ ಪಠಾಣ ಅವರಿಗೆ ಈ ಬಾರಿ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ, ಮುಖಂಡರಾದ ಚಂದ್ರಶೇಖರ ಮಾನೋಜಿ, ಶಿವಾಜಿ ಶಿಂಧೆ, ನಾಗೇಶ ಮೋತೆ, ಎಸ್.ವೈ.ಆರೇರ, ಎಂ.ಎನ್.ವೆಂಕೋಜಿ, ನಾಗೇಶರಾವ್ ಇದ್ದರು.

Share this article