ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಅಲ್ಪಹಳ್ಳಿಯಲ್ಲಿ ಚಿಣ್ಯದಿಂದ ಅಲ್ಪಹಳ್ಳಿ, ಕನಗೋನಹಳ್ಳಿ ಮಾರ್ಗವಾಗಿ ಕರಿಕ್ಯಾತನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 1.5 ಕೋಟಿ ರು. ವೆಚ್ಚದ ಡಾಂಬರು ರಸ್ತೆ ನಿರ್ಮಾಣ ಕಾಮಗಾರಿಗೆ ಶನಿವಾರ ರಾತ್ರಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಜನಪರ ಆಡಳಿತ ಮತ್ತು ಅಭಿವೃದ್ಧಿ ಕೆಲಸ ಕಾರ್ಯಗಳ ದೃಷ್ಟಿಯಿಂದ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು 2028ರ ವಿಧಾನಸಭಾ ಚುನಾವಣೆಯಲ್ಲಿ ಯುವಕರು, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ಒಗ್ಗಟ್ಟು ಪ್ರದರ್ಶಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಗ್ರಾಮೀಣ ಪ್ರದೇಶದ ಎಲ್ಲ ವರ್ಗಗಳ ಜನರ ಅನುಕೂಲಕ್ಕಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ಬಳಿಕ ದೇಶದ ಹಲವು ರಾಜ್ಯಗಳಲ್ಲಿಯೂ ಗ್ಯಾರಂಟಿ ಯೋಜನೆ ಜಾರಿಗೊಳಿಸಲಾಯಿತು. ಆದರೆ, ನಮ್ಮ ರಾಜ್ಯದಲ್ಲಿ ಹೊರತುಪಡಿಸಿದರೆ ಬೇರ್ಯಾವ ರಾಜ್ಯಗಳಲ್ಲಿಯೂ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದರು.ರಾಜ್ಯ ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳಿಗಷ್ಟೇ ಸೀಮಿತವಾಗದೆ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕಾರ್ಯಗಳಿಗೂ ವಿಶೇಷ ಆದ್ಯತೆ ನೀಡುತ್ತಿದೆ. ಬಹುಮುಖ್ಯವಾಗಿ ಮಹಿಳೆಯರು ಇದನ್ನು ಅರ್ಥೈಸಿಕೊಳ್ಳಬೇಕು ಎಂದರು.
ಜಿಲ್ಲೆಗೆ ಮೆಡಿಕಲ್ ಕಾಲೇಜು, ಕೆಎಸ್ಆರ್ಟಿಸಿ ವಿಭಾಗೀಯ ಕಚೇರಿ, ಕೃಷಿ ವಿಶ್ವವಿದ್ಯಾಲಯ ತರುವ ಜೊತೆಗೆ ತಾಲೂಕಿನಲ್ಲಿಯೂ ಕೂಡ ಕುಡಿಯುವ ನೀರು, ರಸ್ತೆ, ಸೇತುವೆ ಸೇರಿದಂತೆ ವಿದ್ಯುತ್, ಶಿಕ್ಷಣ ಮತ್ತು ಆರೋಗ್ಯ ಇಲಾಖೆಯಲ್ಲಿ ಶಾಶ್ವತವಾಗಿ ಉಳಿಯುವಂತಹ ನೂರಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎಂದರು.
ರಾಜ್ಯ ಸರ್ಕಾರದಲ್ಲಿ ನಾಲ್ಕನೇ ಬಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಗ್ರಾಮಕ್ಕೆ ಆಗಮಿಸಿದ ಚಲುವರಾಯಸ್ವಾಮಿ ಅವರನ್ನು ಡೊಳ್ಳು ಕುಣಿತದೊಂದಿಗೆ ತೆರೆದ ವಾಹನದಲ್ಲಿ ಅದ್ಧೂರಿ ಮೆರವಣಿಗೆ ಮೂಲಕ ಕರೆತರಲಾಯಿತು. ಗ್ರಾಮದ ಮಹಿಳೆಯರು ಬೆಲ್ಲದಾರತಿ ಮಾಡಿ ಸ್ವಾಗತ ಕೋರಿದರು. ಗ್ರಾಮದ ಯುವಕರು ಜೆಸಿಬಿ ಯಂತ್ರಗಳ ಮೂಲಕ ಪುಷ್ಪಾರ್ಚನೆ ಮಾಡಿ ಕ್ರೇನ್ ಯಂತ್ರದ ಮೂಲಕ ಬೃಹತ್ ಗಾತ್ರದ ಮೂಸಂಬಿ ಹಣ್ಣಿನ ಹಾರ ಹಾಕಿ ಜಯಘೋಷದೊಂದಿಗೆ ಅದ್ಧೂರಿ ಸ್ವಾಗತ ಕೋರಿದರು.