ಕನ್ನಡಪ್ರಭ ವಾರ್ತೆ ಬೆಂಗಳೂರು
ಅನುಮತಿಯಿಲ್ಲದೆ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವುದಾಗಿ ಘೋಷಿಸಿದ್ದು ಹಾಗೂ ಪೊಲೀಸರು ಆಯೋಜಕರ ರೀತಿ ವರ್ತಿಸಿದ್ದೂ ದುರಂತಕ್ಕೆ ಕಾರಣವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ವರದಿಯಲ್ಲಿ ಏನಿದೆ?:ವಿಚಾರಣಾ ಆಯೋಗದ ವರದಿಯಲ್ಲಿ ಕಾಲ್ತುಳಿತಕ್ಕೆ ಕಾರಣ, ಅದಕ್ಕೆ ಕಾರಣಕರ್ತರ ಕುರಿತಂತೆ ವಿವರಗಳನ್ನು ನೀಡಲಾಗಿದೆ. ಒಟ್ಟು ಏಳು ಅಂಶಗಳ ಆಧಾರದಲ್ಲಿ ವರದಿ ಸಿದ್ಧಪಡಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯ, ಕೆಎಸ್ಸಿಎ, ಆರ್ಸಿಬಿ ಮತ್ತು ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ ಬೇಜವಾಬ್ದಾರಿಯಿಂದಲೇ ದುರ್ಘಟನೆ ಸಂಭವಿಸಿದೆ ಎಂದು ತಿಳಿಸಲಾಗಿದೆ.
ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿ ರಾಜ್ಯ ಸರ್ಕಾರ 2009ರಲ್ಲಿಯೇ ನಿಖರ ಆದೇಶ ಹೊರಡಿಸಿದೆ. ಅದರಂತೆ ಯಾವುದೇ ದೊಡ್ಡಮಟ್ಟದ ಕಾರ್ಯಕ್ರಮ ಆಯೋಜನೆಗೆ ಏಳು ದಿನಗಳ ಮುಂಚಿತವಾಗಿ ಸ್ಥಳೀಯ ಪೊಲೀಸರು ಸೇರಿದಂತೆ ಇನ್ನಿತರ ಪ್ರಾಧಿಕಾರದೊಂದಿಗೆ ಅನುಮತಿ ಪಡೆಯಬೇಕು. ಈ ವೇಳೆ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ನೀಡಬೇಕು, ಜನ ಸೇರುವ ಪ್ರಮಾಣವನ್ನೂ ತಿಳಿಸಬೇಕು ಎಂದಿದೆ. ಆದರೆ, ಕೆಎಸ್ಸಿಎ, ಆರ್ಸಿಬಿ ಮತ್ತು ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ ಸಂಸ್ಥೆಗಳು ಯಾವುದೇ ಪೂರ್ವಾನುಮತಿ ಪಡೆಯದೆ ಜು.4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭ್ರಮಾಚರಣೆ ನಡೆಯಲಿದೆ ಎಂದು ಘೋಷಿಸಿದರು.
ಆಯೋಜಕರಾಗಿ ವರ್ತಿಸಿದ ಪೊಲೀಸರು:
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಅಮಾನತಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಬಿ. ದಯಾನಂದ್ ಸೇರಿ ಇತರ ಐದು ಮಂದಿ ಪೊಲೀಸರ ಹೆಸರನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜತೆಗೆ ಅವರುಗಳು ಸಂಭ್ರಮಾಚರಣೆ ವೇಳೆ ದುರ್ಘಟನೆ ಸಂಭವಿಸಬಹುದು ಎಂಬುದನ್ನು ಅಂದಾಜಿಸದೇ, ತಾವು ಅನುಮತಿ ನೀಡದಿದ್ದರೂ ಕಾರ್ಯಕ್ರಮ ಆಯೋಜನೆಗೊಳ್ಳುವುದನ್ನು ತಡೆಯಲು ಸಾಧ್ಯವಾಗದ ಕುರಿತು ತಿಳಿಸಲಾಗಿದೆ. ಜತೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
ವಿಜಯೋತ್ಸವ ಕುರಿತಂತೆ ಆರ್ಸಿಬಿ ಮಾಡಿದ ಟ್ವೀಟ್ನ್ನು ವಿರಾಟ್ ಕೊಹ್ಲಿ ಅವರು ಸಹ ಶೇರ್ ಮಾಡಿದ್ದು ಸಹ ಹೆಚ್ಚು ಜನರು ಬರಲು ಕಾರಣವಾಯಿತು ಎಂದು ವರದಿಯಲ್ಲಿ ಹೇಳಲಾಗಿದೆ.
ದುರ್ಘಟನೆಗೆ ಸಂಬಂಧಿಸಿ ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್, ಮಾಜಿ ಕಾರ್ಯದರ್ಶಿ ಶಂಕರ್, ಮಾಜಿ ಖಜಾಂಚಿ ಜೈರಾಮ್, ಆರ್ಸಿಬಿ ಉಪಾಧ್ಯಕ್ಷ ರಾಜೇಶ್ ಮೆನನ್, ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ನ ವ್ಯವಸ್ಥಾಪಕ ನಿರ್ದೇಶಕ ಡಾ. ಟಿ.ವೆಂಕಟರ್ ವರ್ಧನ್, ಉಪಾಧ್ಯಕ್ಷ ಸುನೀಲ್ ಮಾಥುರ್, ಎಡಿಜಿಪಿ ಬಿ. ದಯಾನಂದ್, ಐಜಿ ವಿಕಾಸ್ ಕುಮಾರ್ ವಿಕಾಸ್, ಡಿಸಿಪಿ ಶೇಖರ್ ಎಚ್.ತೆಕ್ಕಣ್ಣನವರ್, ಎಸಿಪಿ ಸಿ. ಬಾಲಕೃಷ್ಣ ಹಾಗೂ ಇನ್ಸ್ಪೆಕ್ಟರ್ ಗಿರೀಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.