ರಾಮನಗರ: ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಬಿಡದಿ ಟೌನ್ ಶಿಪ್)ಯೋಜನೆ ಪರ ಮತ್ತು ವಿರೋಧಿಸಿ ರೈತರು ಪ್ರತ್ಯೇಕವಾಗಿ ನಡೆಸುತ್ತಿರುವ ಚಳವಳಿ ತೀವ್ರ ಸ್ವರೂಪ ಪಡೆದಿದ್ದು, ಬೈರಮಂಗಲ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.
ಪರ - ವಿರೋಧದ ಚಳವವಳಿ ತಾರಕಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಬೈರಮಂಗಲ ಗ್ರಾಮದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತಿಗಾಗಿ ನಿಯೋಜನೆ ಮಾಡಲಾಗಿದೆ. ಎರಡೂ ಪ್ರತಿಭಟನೆಗಳ ಸ್ಥಳಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ರೈತ ಮುಖಂಡನಿಗೆ ರೈತರಿಂದಲೇ ಘೇರಾವ್:ಯೋಜನೆ ವಿರುದ್ಧವಾಗಿರುವ ರೈತರ ಹೋರಾಟಕ್ಕೆ ಬೆಂಬಲ ನೀಡಿ ವಾಪಸ್ ತೆರಳುತ್ತಿದ್ದ ರೈತಸಂಘ ರಾಜ್ಯ ಘಟಕ ಸಂಚಾಲಕ ಮೀಸೆ ಮಂಜಣ್ಣ ಅವರಿದ್ದ ಕಾರನ್ನು ಯೋಜನೆ ಪರವಾಗಿರುವ ರೈತರು ಅಡ್ಡಗಟ್ಟಿ ತರಾಟೆ ತೆಗೆದುಕೊಂಡರು.
ಕಾರಿನಲ್ಲಿದ್ದ ರೈತ ಮುಖಂಡರೊಂದಿಗೆ ವಾಗ್ವಾದ ನಡೆಸಿದ ಯೋಜನೆ ಪರವಿರುವ ರೈತರು, ನಮಗೆ ಯೋಜನೆ ಬೇಕು. ಅದನ್ನು ವಿರೋಧ ಮಾಡಲು ನೀವ್ಯಾರು. ಹೊರಗಡೆಯಿಂದ ಬಂದು ಗೊಂದಲ ಸೃಷ್ಟಿ ಮಾಡುತ್ತಿದ್ದೀರಾ. ನೀವೆಲ್ಲರು ಪೇಮೆಂಟ್ ಗಿರಾಕಿಗಳು, ಎಷ್ಟು ಪೇಮೆಂಟ್ ಪಡೆದು ಬಂದಿದ್ದೀರಾ ಎಂದು ಕಿಡಿಕಾರಿದರು. ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರ ಮನವೊಲಿಸಿ ಕಾರನ್ನು ಮುಂದಕ್ಕೆ ಕಳುಹಿಸಿಕೊಟ್ಟರು.
ಮಾಜಿ ಶಾಸಕ ಎ.ಮಂಜುನಾಥ್ , ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್ )ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರು ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗುತ್ತಾ ಯೋಜನೆ ವಿರುದ್ಧದ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.
ಬೆಂಗಳೂರು ಪಕ್ಕದಲ್ಲಿಯೇ ಇದ್ದರೂ ಬಿಡದಿ ಅಭಿವೃದ್ಧಿ ಆಗಿಲ್ಲ. ಈ ಭಾಗದಲ್ಲಿ ನೀರಿನ ಕೊರತೆ ಇದ್ದು, ಕೃಷಿ ಮಾಡಲು ಸಾಧ್ಯವಾಗುತ್ತಿಲ್ಲ. ನಮ್ಮ ಮಕ್ಕಳೂ ಇದೇ ಭೂಮಿ ನಂಬಿ ಕೂರಲು ಆಗುವುದಿಲ್ಲ. ಹಾಗಾಗಿ ನಮಗೆ ಅಭಿವೃದ್ಧಿ ಬೇಕು. ಈ ಯೋಜನೆಗೆ ಭೂಮಿ ಕೊಟ್ಟೇ ಕೊಡುತ್ತೇವೆ. ಕುಮಾರಸ್ವಾಮಿರವರು ರಾಜಕೀಯ ಕಾರಣಕ್ಕಾಗಿ ಯೋಜನೆ ವಿರೋಧ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
26ಕೆಆರ್ ಎಂಎನ್ 2,3.ಜೆಪಿಜಿ
3.ಬಿಡದಿ ಟೌನ್ ಶಿಪ್ ಯೋಜನೆ ಪರವಾಗಿ ರೈತರು ಪ್ರತಿಭಟನೆ ನಡೆಸುತ್ತಿರುವುದು.