ರಾಮನಗರ: ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಲಾದ ಅಮೃತ ಸರೋವರಗಳ ದಂಡೆಯ ಮೇಲೆ ಸಂವಿಧಾನ ಪೀಠಿಕೆ ಓದುವ ಮೂಲಕ ಆಚರಣೆ ಮಾಡಲಾಯಿತು.
ರಾಮನಗರ: ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಲಾದ ಅಮೃತ ಸರೋವರಗಳ ದಂಡೆಯ ಮೇಲೆ ಸಂವಿಧಾನ ಪೀಠಿಕೆ ಓದುವ ಮೂಲಕ ಆಚರಣೆ ಮಾಡಲಾಯಿತು.
ತಾಲೂಕಿನ ವಿಭೂತಿಕೆರೆ ಗ್ರಾಮ ಪಂಚಾಯಿತಿಯ ಜಾನಪದ ಲೋಕದಲ್ಲಿ ನಿರ್ಮಿಸಲಾಗಿರುವ ಅಮೃತ ಸರೋವರದ ಬಳಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಮಂಜುನಾಥಸ್ವಾಮಿ ಮಾತನಾಡಿ, ಭಾರತದ ಸಂವಿಧಾನದ ಅಂಗೀಕಾರವಾದ ದಿನವನ್ನು ಗುರುತಿಸಲು ಪ್ರತಿ ವರ್ಷ ನವೆಂಬರ್ 26ರಂದು ದೇಶದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. ದೇಶದ ಸಂವಿಧಾನವನ್ನು ಪ್ರತಿಯೊಬ್ಬರು ಗೌರವಿಸಬೇಕು ಮತ್ತು ಅಧ್ಯಯನ ಮಾಡಬೇಕು. ಅಂಬೇಡ್ಕರ್ ಅವರು ವಿಶ್ವದ ಅನೇಕ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ದೇಶಕ್ಕೆಮ ಅತ್ಯುತ್ತಮ ಸಂವಿಧಾನವನ್ನು ರಚನೆ ಮಾಡಿದ್ದಾರೆ. ಪ್ರತಿಯೊಬ್ಬ ಪ್ರಜೆಯೂ ಈ ಸಂವಿಧಾನವನ್ನು ಅರಿತು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಭಾರತ ಸಂವಿಧಾನ ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವಿನ ಅಧಿಕಾರದ ಪ್ರತ್ಯೇಕತೆ ನಮ್ಮ ಮೂಲಭೂತ ಕರ್ತವ್ಯ ಮತ್ತು ಹಕ್ಕುಗಳನ್ನು ಪರಿಣಾಮಕಾರಿಯಾಗಿ ಚಲಾಯಿಸಲು ಅನುವು ಮಾಡಿಕೊಟ್ಟಿದೆ. ನಮ್ಮ ಸಂವಿಧಾನದಿಂದಾಗಿ ನಮ್ಮ ದೇಶ ವಿಶಿಷ್ಟವಾಗಿದೆ. ಬಡವರು, ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗದಂತೆ, ಸರ್ವರಿಗೂ ಸಂವಿಧಾನದಲ್ಲಿ ಸಮಾನ ಹಕ್ಕು ಕಲ್ಪಿಸುವುದು ಉದ್ದೇಶವಾಗಿದೆ ಎಂದು ಹೇಳಿದರು.
ಗೌರವಯುತವಾಗಿ ಮತ್ತು ಮೌಲ್ಯಯುತವಾಗಿ ಬದುಕಲು ಸಂವಿಧಾನ ನಮಗೆ ಅವಕಾಶ ಕಲ್ಪಿಸಿಕೊಟ್ಟಿದೆ. ಸಂವಿಧಾನವೂ ನಮಗೆ ವಿವಿಧತೆಯಲ್ಲಿ ಏಕತೆಯನ್ನು ಕಲಿಸಿದೆ. ಸಂವಿಧಾನ ಆಶಯಗಳನ್ನು ಈಡೇರಿಸುವ ಮೂಲಕ ಸಂವಿಧಾನವನ್ನು ಗೌರವಿಸಬೇಕು ಎಂದು ಮಂಜುನಾಥಸ್ವಾಮಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನ ಸಮುದಾಯಕ್ಕೆ ಜಲ ಮೂಲಗಳ ರಕ್ಷಣೆ, ಪರಿಸರ ರಕ್ಷಣೆ ಬಗ್ಗೆ ಮಾಹಿತಿ ನೀಡಲಾಯಿತು. ಈ ಮಹತ್ವದ ದಿನದ ಸ್ಮರಣಾರ್ಥ, ಅಮೃತ ಸರೋವರ ಬಳಕೆದಾರರ ಗುಂಪುಗಳು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಸಮುದಾಯದ ಜನರು, ಶಾಲಾ ಮಕ್ಕಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿಭೂತಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುನೀತಾ ನಾಗರಾಜ್ ಸಿಂಗ್, ಎಡಿಪಿಸಿ ಜಗದೀಪ್ ಹಾಗೂ ಜಿಲ್ಲಾ ಸಂಯೋಜಕರು ಅರುಣ್ ಕುಮಾರ್, ತಾಲೂಕು ಮಟ್ಟದ ಐಇಸಿ ಸಂಯೋಜಕರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
26ಕೆಆರ್ ಎಂಎನ್ 6.ಜೆಪಿಜಿ
ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮ ಪಂಚಾಯಿತಿಯ ಜಾನಪದ ಲೋಕದಲ್ಲಿ ನಿರ್ಮಿಸಿರುವ ಅಮೃತ ಸರೋವರದ ಬಳಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಯೋಜನಾ ನಿರ್ದೇಶಕ ಮಂಜುನಾಥಸ್ವಾಮಿ ಹಾಗೂ ವಿಭೂತಿಕೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಸುನೀತಾ ನಾಗರಾಜ್ ಸಿಂಗ್ ಅವರು ಸಂವಿಧಾನದ ಪೀಠಿಕೆ ಓದಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.