ನಗರದ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದು : ತಮ್ಮಯ್ಯ

KannadaprabhaNewsNetwork | Published : Nov 8, 2024 12:40 AM

ಸಾರಾಂಶ

ಚಿಕ್ಕಮಗಳೂರು, ನಗರದ ಆರೋಗ್ಯ ರಕ್ಷಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವವಾದುದು. ತಮ್ಮ ಕಾಯಕ ನಿಷ್ಠೆಯಿಂದ ಸ್ವಚ್ಛ ಪರಿಸರ ನಿರ್ಮಿಸುತ್ತಿರುವ ಪೌರ ಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ನಗರಸಭೆ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುನಗರದ ಆರೋಗ್ಯ ರಕ್ಷಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವವಾದುದು. ತಮ್ಮ ಕಾಯಕ ನಿಷ್ಠೆಯಿಂದ ಸ್ವಚ್ಛ ಪರಿಸರ ನಿರ್ಮಿಸುತ್ತಿರುವ ಪೌರ ಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ನಗರಸಭೆ ಹಾಗೂ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದಿಂದ ಬುಧವಾರ ನಗರಸಭೆ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ನಮ್ಮ ಸುತ್ತಮುತ್ತಲಿನ ಪರಿಸರ ಹಾಗೂ ಮನೆ ವಾತಾವರಣ ಸ್ವಚ್ಚವಾಗಿರಿಸಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ಕೆಲಸಗಳಲ್ಲಿ ಮೇಲು, ಕೀಳು ಇಲ್ಲ. ಶ್ರದ್ಧೆ ನಿಷ್ಠೆಯಿಂದ ಮಾಡಿದ ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಕಾಣಬಹುದು. ಸಮಾಜ ಸುಧಾರಕರು, ವಚನಕಾರರು ಕಾಯಕದ ಕುರಿತು ಹಲವಾರು ವಚನಗಳಲ್ಲಿ ವರ್ಣಿಸಿದ್ದಾರೆ. ಸೈನಿಕರು ದೇಶದ ಜನರ ಜೀವ ರಕ್ಷಿಸಲು ಶತ್ರುಗಳೆದುರು ಹೋರಾಡಿದರೆ, ಪೌರ ಕಾರ್ಮಿಕರು ಸಾರ್ವಜನಿಕರ ಆರೋಗ್ಯ ರಕ್ಷಿಸಲು ಶ್ರಮ ವಹಿಸುತ್ತಾರೆ ಎಂದು ಹೇಳಿದರು.

ಸರ್ಕಾರ ವಿವಿಧ ಯೋಜನೆಗಳ ಮೂಲಕ ಪೌರ ಕಾರ್ಮಿಕರ ಆರೋಗ್ಯ ರಕ್ಷಿಸಲು ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸೆ ಜೊತೆಗೆ ಜೀವ ವಿಮೆ ನೀಡುತ್ತದೆ. ಉಚಿತ ಆರೋಗ್ಯ ತಪಾಸಣೆ ಸಂದರ್ಭದಲ್ಲಿ ವೈದ್ಯರು ನೀಡುವ ಸಲಹೆಗಳನ್ನು ಪಾಲಿಸಿ ತಮ್ಮ ಆರೋಗ್ಯವನ್ನು ಸುಸ್ಥಿತಿ ಯಲ್ಲಿರಿಸಿ ಕೊಳ್ಳಬೇಕು ಎಂದ ಅವರು, ಪೌರ ಕಾರ್ಮಿಕರಿಗೆ ನಿರ್ಮಿಸುತ್ತಿರುವ ಮನೆಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಮಾತನಾಡಿ, ಪೌರ ಕಾರ್ಮಿಕರು ನಗರದ ಪೋಷಕರಿದ್ದಂತೆ, ನಗರ ಸುಂದರ ಹಾಗೂ ಸ್ವಚ್ಛವಾಗಿರಲು ಪೌರ ಕಾರ್ಮಿಕರ ಶ್ರಮ ಕಾರಣ. ನಗರದ ಸ್ವಾಸ್ಥ್ಯ ಕಾಪಾಡುವ ಅವರ ಸಮಸ್ಯೆ ಆಲಿಸಿ ಬಗೆಹರಿಸುವುದು ನಮ್ಮ ಕರ್ತವ್ಯ. ಪೌರ ಕಾರ್ಮಿಕರಿಗೆ ವಿಶೇಷ ಭತ್ಯೆ, ಪ್ರತಿ ವರ್ಷ ಸಂಕಷ್ಟ ಭತ್ಯೆ, ಬೆಳಗಿನ ಉಪಹಾರ ಭತ್ಯೆ, ಜೀವ ವಿಮೆಯಂತಹ ಹಲವಾರು ಯೋಜನೆ ನೀಡಲಾಗುತ್ತಿದೆ. ಇವುಗಳನ್ನು ಸದುಪಯೋಗ ಪಡಿಸಿಕೊಳ್ಳುವ ಜೊತೆಗೆ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ ಅವರ ಉತ್ತಮ ಭವಿಷ್ಯಕ್ಕೆ ಸಹಕರಿಸಿ ಎಂದರು.

ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪ್ರತಿಯೊಬ್ಬ ಪೌರ ಕಾರ್ಮಿಕರಿಗೆ ವಿಶೇಷ ಭತ್ಯೆ ನೀಡಲಾಗುತ್ತಿದೆ. ಪ್ರತಿ ವರ್ಷ ತಲಾ ₹2 ಸಾವಿರ ಸಂಕಷ್ಟ ಭತ್ಯೆ, 10 ಲಕ್ಷಕ್ಕೂ ಮೇಲ್ಪಟ್ಟ ಜೀವ ವಿಮೆ, ಪ್ರತಿ ದಿನ ₹30 ಗಳಂತೆ ಉಪಹಾರ ಭತ್ಯೆ, ಉಚಿತ ಆರೋಗ್ಯ ತಪಾಸಣೆ, ಸ್ವಂತ ನಿವೇಶನ ಹೊಂದಿದ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಅಡಿ ಸ್ವಂತ ಮನೆ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ನೀಡಿ ಅವರ ಸಮಸ್ಯೆ ಪರಿಹರಿಸಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ನಗರದ ತಾಲೂಕು ಕಚೇರಿಯಿಂದ ನಗರಸಭೆ ಆವರಣದ ವರೆಗೆ ಮೆರವಣಿಗೆ ಮಾಡಲಾಯಿತು. ಪೌರ ಕಾರ್ಮಿಕರಿಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು.ನಗರಸಭೆ ಉಪಾಧ್ಯಕ್ಷೆ ಅನು ಮಧುಕರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್, ಪೌರ ಕಾರ್ಮಿಕರ ಸಂಘದ ಅಣ್ಣಯ್ಯ, ಪೌರ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಸಿ.ಬಿ. ನಾಗರಾಜ್. ಪೌರ ಕಾರ್ಮಿಕರ ಸಂಘದ ಶಾಖಾ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ನಗರಸಭೆ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.6 ಕೆಸಿಕೆಎಂ 5ಚಿಕ್ಕಮಗಳೂರು ನಗರಸಭೆ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಎಚ್‌.ಡಿ. ತಮ್ಮಯ್ಯ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್‌, ಉಪಾಧ್ಯಕ್ಷೆ ಅನು ಮಧುಕರ್‌, ಪೌರಾಯುಕ್ತ ಬಸವರಾಜ್‌ ಹಾಗೂ ಪೌರ ಸೇವಾ ನೌಕರರ ಸಂಘದ ಪದಾಧಿಕಾರಿಗಳು ಇದ್ದರು.

Share this article