ಕನ್ನಡಪ್ರಭ ವಾರ್ತೆ ಮಂಗಳೂರು
ಪದವಿ ಪೂರ್ವ ಹಂತದಲ್ಲಿ ವಿದ್ಯಾರ್ಥಿಗಳ ಬಗ್ಗೆ ವಿಶೇಷವಾದ ಕಾಳಜಿಯನ್ನು ವಹಿಸಿಕೊಳ್ಳುವ ಮೂಲಕ ಹೆತ್ತವರು ತಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತಾರೆ ಎಂದು ಎಕ್ಸ್ಪರ್ಟ್ ಶಿಕ್ಷಣ ಮತ್ತು ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್ ಹೇಳಿದರು.ಅವರು ನಗರದ ಶ್ರೀ ಭಗವತಿ ಕ್ಷೇತ್ರದ ಕೂಟಕ್ಕಳ ಸಭಾಂಗಣದಲ್ಲಿ ನಡೆದ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮತ್ತು ಅವರ ಹೆತ್ತವರಿಗೆ ಆಯೋಜಿಸಿದ ‘ಓರಿಯೆಂಟೇಶನ್-೨೦೨೫’ ಶೈಕ್ಷಣಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ವಿದ್ಯಾಭ್ಯಾಸದಲ್ಲಿ ಸಮಯವು ಅತ್ಯಮೂಲ್ಯವಾದದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಒಂದು ಗುರಿಯನ್ನು ಹೊಂದಿರಬೇಕು ಹಾಗೂ ಗುರಿ ಸಾಧಿಸುವಲ್ಲಿ ನಿರಂತರ ಪ್ರಯತ್ನ ಇರಬೇಕು. ಕಠಿಣ ಪರಿಶ್ರಮ, ಸಮಯದ ಸದುಪಯೋಗ ಮತ್ತು ಶಿಸ್ತಿನಿಂದ ಯಶಸ್ಸು ಸಾಧ್ಯ ಎಂದು ಹೇಳಿದರು.ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್ ನಾಯಕ್ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಜನೆಯಲ್ಲಿ ಸಮರ್ಪಣಾ ಮನೋಭಾವ, ಶಿಸ್ತು ಹಾಗೂ ಸಮಯವನ್ನು ಗೌರವಿಸಿದರೆ ಉನ್ನತ ಸಾಧನೆಯನ್ನು ಮಾಡಬಹುದು. ಕಠಿಣ ಪರಿಶ್ರಮ ಮತ್ತು ಗುರಿ ಮುಟ್ಟುವ ಛಲದೊಂದಿಗೆ ಮುನ್ನಡೆದರೆ ಸಾಧನೆಯ ಪಥ ಮುಟ್ಟಲು ಸಾಧ್ಯ ಎಂದರು.೨೦೨೪-೨೫ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ೬೦೦ ರಲ್ಲಿ ೫೯೯ ಅಂಕವನ್ನು ಗಳಿಸಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ಹಾಗೂ ಅವಳ ಪೋಷಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಶಕರಾದ ಅಂಕುಶ್. ಎನ್. ನಾಯಕ್ ಮಾತನಾಡುತ್ತಾ, ಶೈಕ್ಷಣಿಕ ಹಂತದಲ್ಲಿ ತಂತ್ರಜ್ಞಾನವನ್ನು ಸಮರ್ಪಕ ಬಳಕೆ ಮಾಡಬೇಕು. ವಿದ್ಯಾರ್ಥಿಗಳು ಇತ್ತೀಚೆಗೆ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಸಮಯವನ್ನು ವ್ಯರ್ಥ ಮಾಡುವುದರ ಬದಲು ಶೈಕ್ಷಣಿಕವಾಗಿ ಭವಿಷ್ಯಕ್ಕೆ ಪೂರಕವಾಗುವಂತೆ ಮಾಹಿತಿ-ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಮಚಂದ್ರ ಭಟ್ ಸ್ವಾಗತಿಸಿದರು. ಎ.ಐ.ಸಿ.ಇ. ವಿಭಾಗದ ಸಂಯೋಜಕ ಪ್ರೊ.ಶ್ಯಾಮ್ಪ್ರಸಾದ್ ಅವರು ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಬಗ್ಗೆ ಮಾತನಾಡಿದರು.ವಾಸ್ತುಶಿಲ್ಪ ತಜ್ಞೆ ದೀಪಿಕಾ.ಎ.ನಾಯಕ್, ಶೈಕ್ಷಣಿಕ ಸಮಿತಿಯ ಸದಸ್ಯ ಪ್ರೊ. ಬಿ. ವಿನಯ್ ಕುಮಾರ್, ಕಾರ್ಯಕ್ರಮದ ಸಂಯೋಜಕಿ ರಾಧಿಕಾ ಭಟ್ ಇದ್ದರು.
ಜೀವಶಾಸ್ತ್ರವಿಭಾಗದ ಉಪನ್ಯಾಸಕಿ ಉಜ್ವಲ್ ಪ್ರದೀಪ್ ನಿರೂಪಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಝೀಟಾ ಡಿಸೋಜಾ ವಂದಿಸಿದರು.