ಜಾಗೃತಿ ವಿಷಯದಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು

KannadaprabhaNewsNetwork |  
Published : Jun 11, 2026, 03:30 AM IST
ಮಹಿಳಾ ವಿವಿಯಲ್ಲಿ ಮಕ್ಕಳ ವಿಷಯಗಳ ಕುರಿತು ಕರ್ನಾಟಕ ರಾಜ್ಯದ ಪತ್ರಕರ್ತರಿಗೆ ಪರಿಚಯ ಕಾರ್ಯಕ್ರಮ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಹದಿಹರೆಯದ ಮಕ್ಕಳ ಆರೋಗ್ಯ, ಮಕ್ಕಳ ಹಕ್ಕುಗಳು, ರಸ್ತೆ ಸುರಕ್ಷತೆ ಕುರಿತು ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಹದಿಹರೆಯದ ಮಕ್ಕಳ ಆರೋಗ್ಯ, ಮಕ್ಕಳ ಹಕ್ಕುಗಳು, ರಸ್ತೆ ಸುರಕ್ಷತೆ ಕುರಿತು ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಹೈದರಾಬಾದ್‌ನ ಯುನಿಸೆಫ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ವಿಷಯಗಳ ಕುರಿತು ಕರ್ನಾಟಕ ರಾಜ್ಯದ ಪತ್ರಕರ್ತರಿಗೆ ಪರಿಚಯ ವಿಷಯದಡಿ ಕಿಶೋರರ ಆರೋಗ್ಯ ಮತ್ತು ಪೌಷ್ಟಿಕತೆ, ಸಾಂಕ್ರಾಮಿಕವಲ್ಲದ ರೋಗಗಳು, ಆರೋಗ್ಯಕರ ಆಹಾರ ಪದ್ಧತಿ ಹಾಗೂ ರಸ್ತೆ ಸುರಕ್ಷತೆ ಕುರಿತು ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಹಕ್ಕುಗಳು, ಆರೋಗ್ಯ ಸಮಸ್ಯೆಗಳು, ಹೆಚ್ಚುತ್ತಿರುವ ನಾನ್-ಕಮ್ಯುನಿಕೇಬಲ್ ರೋಗಗಳು, ಪೌಷ್ಟಿಕ ಆಹಾರ ಹಾಗೂ ರಸ್ತೆ ಸುರಕ್ಷತೆ ಕುರಿತಂತೆ ಈ ಕಾರ್ಯಾಗಾರದಲ್ಲಿ ಚರ್ಚೆ ನಡೆಯುತ್ತಿರುವುದು ಅತ್ಯಂತ ಮಹತ್ವದ್ದಾಗಿದೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಮತ್ತು ಸಾಮಾಜಿಕ ಮಾಧ್ಯಮಗಳು ಮಕ್ಕಳ ಜೀವನದ ಮೇಲೆ ಸಾಕಷ್ಟು ಪ್ರಭಾವ ಬೀರುತ್ತಿದ್ದು, ಪತ್ರಕರ್ತರು ಹಾಗೂ ಮಾಧ್ಯಮಗಳು ಸುದ್ದಿಗಳನ್ನು ಅತ್ಯಂತ ಸಂವೇದನಾಶೀಲವಾಗಿ ಜನರಿಗೆ ತಲುಪಿಸಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುನಿಸೆಫ್, ಹೈದರಾಬಾದ್‌ನ ಪ್ರೊಸೂನ್ ಸೇನ್ ಮಾತನಾಡಿ, ಕಿಶೋರ ವಯಸ್ಸಿನ ಮಕ್ಕಳಲ್ಲಿ ಅಸಂಕ್ರಾಮಿಕ ರೋಗಗಳ ಪ್ರಮಾಣ ಹೆಚ್ಚುತ್ತಿವೆ. 11 ರಿಂದ 19 ವರ್ಷ ವಯಸ್ಸಿನಲ್ಲಿಯೇ ಮಾನಸಿಕ ಆರೋಗ್ಯ ಸಮಸ್ಯೆ, ಮಧುಮೇಹ, ಕ್ಯಾನ್ಸರ್ ಹಾಗೂ ಹೃದಯ ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತಿವೆ. ಜಂಕ್ ಫುಡ್ ಸೇವನೆ ಹಾಗೂ ದೈಹಿಕ ಚಟುವಟಿಕೆಗಳ ಕೊರತೆ ಪ್ರಮುಖ ಕಾರಣಗಳಾಗಿವೆ ಎಂದರು.

ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, ಮಕ್ಕಳ ಸಮಸ್ಯೆಗಳು, ಗ್ರಾಮೀಣ ಅಭಿವೃದ್ಧಿ ಹಾಗೂ ಸಾಮಾಜಿಕ ವಿಷಯಗಳಿಗೆ ಪತ್ರಕರ್ತರು ಹೆಚ್ಚಿನ ಆದ್ಯತೆ ನೀಡಬೇಕು. ಪರಿಣಾಮಕಾರಿ ಮತ್ತು ತುರ್ತುಭಾವ ಮೂಡಿಸುವ ಬರವಣಿಗೆಯಿಂದ ಸಮಾಜದ ಸಮಸ್ಯೆಗಳನ್ನು ಜನರ ಗಮನಕ್ಕೆ ತರಬೇಕು. ಅಷ್ಟೇ ಅಲ್ಲದೇ ಈ ಕಾರ್ಯಾಗಾರ ಪತ್ರಕರ್ತರ ನಡುವೆ ಅನುಭವ ವಿನಿಮಯ ಹಾಗೂ ಹೊಸ ಚಿಂತನೆಗಳಿಗೆ ಉತ್ತಮ ವೇದಿಕೆಯಾಯಿತು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ.ಸಪ್ನಾ.ಎಮ್.ಎಸ್, ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದ ಹಲವು ಕಡೆಗಳಲ್ಲಿ ಇಂಥ ಕಾರ್ಯಾಗಾರಗಳನ್ನು ಸಂಘಟಿಸುವ ಮೂಲಕ ಪತ್ರಕರ್ತರಲ್ಲಿ ಕಿಶೋರರ ಆರೋಗ್ಯ ಮತ್ತು ಪೌಷ್ಟಿಕತೆ, ಸಾಂಕ್ರಾಮಿಕವಲ್ಲದ ರೋಗಗಳು, ಆರೋಗ್ಯಕರ ಆಹಾರ ಪದ್ಧತಿ ಹಾಗೂ ರಸ್ತೆ ಸುರಕ್ಷತೆ ಕುರಿತ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ.ರಾಕೇಶ ಮತ್ತು ರಾಜ್ಯದ ವಿವಿಧ ಜಿಲ್ಲೆಗಳ ಪತ್ರಕರ್ತರು ಮತ್ತಿತರು ಭಾಗವಹಿಸಿದ್ದರು. ಮಂಜುನಾಥ ನಿರೂಪಿಸಿದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ.ಸ್ವಪ್ನಾ.ಎಮ್.ಎಸ್ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಜೆಪಿ ಯುವ ಮೋರ್ಚಾದಿಂದ ಸ್ವಚ್ಛತಾ ಕಾರ್ಯ
ಕೊಟ್ಟ ಮಾತನ್ನು ಕೈ ನಾಯಕರು ಉಳಿಸಿಕೊಳ್ಳಲಿ