ಬಳ್ಳಾರಿ ವಿವಿಯಲ್ಲಿ ‘ಕುವೆಂಪು ಸಾಹಿತ್ಯದಲ್ಲಿ ವೈಚಾರಿಕತೆ’ ಕುರಿತು ಉಪನ್ಯಾಸ ಕಾರ್ಯಕ್ರಮ
ವಿಜ್ಞಾನ ಮತ್ತು ಧರ್ಮವು ಕುವೆಂಪು ಅವರ ಸಾಹಿತ್ಯದ ವೈಚಾರಿಕತೆಯಾಗಿದೆ. ಮನುಜ ಮತ-ವಿಶ್ವ ಪಥ, ಸರ್ವೋದಯ, ಪೂರ್ಣ ದೃಷ್ಟಿ, ಸಮನ್ವಯತೆಯನ್ನು ಕುವೆಂಪು ಅವರ ಸಾಹಿತ್ಯದ ಮೂಲಕ ಕೊಟ್ಟ ನಿದರ್ಶನಗಳಾಗಿವೆ. ಇವುಗಳನ್ನು ಅರಗಿಸಿಕೊಂಡು ಬೆಳೆದಷ್ಟೂ ಕನ್ನಡ ಸಾಹಿತ್ಯವು ಇನ್ನು ಹೆಚ್ಚು ಶ್ರೀಮಂತವಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಿ. ಕೊಟ್ರೇಶ ತಿಳಿಸಿದರು.
ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾ ಘಟಕ ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಕನ್ನಡ ಅಧ್ಯಯನ ವಿಭಾಗದ ಸಂಯುಕ್ತಾಶ್ರಯದಲ್ಲಿ ‘ದಿ.ಕೆ.ವಿ. ತಿರುಪಾಲಪ್ಪ ಸ್ಮಾರಕ ದತ್ತಿ ಕಾರ್ಯಕ್ರಮ’ದಡಿ ಏರ್ಪಡಿಸಿದ್ದ ‘ಕುವೆಂಪು ಸಾಹಿತ್ಯದಲ್ಲಿ ವೈಚಾರಿಕತೆ’ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಕುವೆಂಪು ರಚಿಸಿದ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಸರ್ವೋದಯ ತತ್ವವಿದೆ. ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯುವುದರ ಮೂಲಕ ಸಮನ್ವಯ ಮತ್ತು ಪೂರ್ಣದೃಷ್ಠಿಯ ಹರಿಕಾರರಾಗಿದ್ದಾರೆ. ಅವರ ವೈಚಾರಿಕತೆ ಮತ್ತು ವೈಜ್ಞಾನಿಕ ದೃಷ್ಠಿಕೋನವನ್ನು ಎಲ್ಲರೂ ಅನುಸರಿಸಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ಮಾತನಾಡಿದರು. ವಿವಿಯ ಅಕಾಡೆಮಿಕ್ ಕೌನ್ಸಿಲ್ನ ಮಾಜಿ ಸದಸ್ಯ ವೆಂಕಟೇಶ ಹೆಗಡೆ, ವಿವಿಯ ಸಿಂಡಿಕೇಟ್ ಮಾಜಿ ಸದಸ್ಯ ಜಯಪ್ರಕಾಶ್ ಗೌಡ, ಕಲಾ ನಿಕಾಯದ ಡೀನ್ ಪ್ರೊ. ಎನ್ .ಶಾಂತಾನಾಯ್ಕ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಪ್ರೊ. ರಾಬರ್ಟ ಜೋಷ್, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಜಿ.ಕೆ. ಸಂತೋಷ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ವಿವಿಯ ಕನ್ನಡ ಅಧ್ಯಯನ ವಿಭಾಗದ ಉಪನ್ಯಾಸಕ ಡಾ. ಕೆ.ಎಸ್. ಶಿವಪ್ರಕಾಶ ಹಾಗೂ ಡಾ. ರಂಗನಾಥ ಎನ್. ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.