ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಪ್ರಜಾಪ್ರಭುತ್ವ ಯಶಸ್ವಿಗೆ ಪತ್ರಕರ್ತರ ಸೇವೆ ಅಮೂಲ್ಯವಾದದು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ.ಡಿಸಿಲ್ವಾ ಹೇಳಿದರು.ಸೋಮವಾರಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸಮಾಜಮುಖಿಯಾಗಿ ಕೆಲಸ ಮಾಡುವ ಪತ್ರಕರ್ತರು ಸೈನಿಕರಿಗೆ ಸಮ. ಇವತ್ತಿಗೂ ಪತ್ರಕರ್ತರ ಸಮಾಜದ ಉಳಿತಿಗಾಗಿಯೇ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಗ್ರಾಮೀಣ ಪತ್ರಕರ್ತರ ಸೇವೆಯೂ ಇದೆ. ಶಾಲೆಗಳ ಸಮಸ್ಯೆಗಳ ಬಗ್ಗೆ ಆಗಾಗ್ಗೆ ಲೇಖನಗಳ ಮೂಲಕ ಸರ್ಕಾರ ಕಣ್ಣು ತೆರಸುವ ಕೆಲಸ ಮಾಡುತ್ತಾರೆ. ಇದರಿಂದ ಸರ್ಕಾರದ ಸೌಲಭ್ಯಗಳು ಸಿಗುತ್ತವೆ ಎಂದು ಹೇಳಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದಿದವರು ಯಾವುದರಲ್ಲೂ ಹಿಂದೆ ಉಳಿದಿಲ್ಲ. ಸಾಧಕರ ಪಟ್ಟಿಯಲ್ಲಿ ಸರ್ಕಾರಿ ಶಾಲೆಯ ಕಲಿತವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಶಿಕ್ಷಕರು ಹೇಳಿಕೊಟ್ಟ ಪಾಠವನ್ನು ಕೇಳಿ ಮನನ ಮಾಡಿಕೊಳ್ಳಬೇಕು. ಅರ್ಥವಾಗದ ವಿಷಯಗಳನ್ನು ಕೇಳಿ ತಿಳಿದುಕೊಂಡರೆ, ಪರೀಕ್ಷೆಯಲ್ಲಿ ಅತೀಹೆಚ್ಚಿನ ಅಂಕ ಪಡೆದುಕೊಳ್ಳಬಹುದು ಎಂದು ಹೇಳಿದರು.ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಸಾಮಾನ್ಯ ಜ್ಞಾನದ ಅಗತ್ಯತೆ ಹೆಚ್ಚಿದೆ. ಪ್ರಜಾಪ್ರಭುತ್ವದಲ್ಲಿ ಪತ್ರಕರ್ತರ ಸೇವೆ ಅಮೂಲ್ಯವಾದದು ಎಂದು ಹೇಳಿದರು.ಜಿಲ್ಲಾ ಪ್ರಶಸ್ತಿ ವಿಜೇತರಾದ ಹಿರಿಕರ ರವಿ, ದಿನೇಶ್ ಮಾಲಂಬಿ ಹಾಗು ಪತ್ರಿಕಾ ವಿತರಕ ಲೋಕೇಶ್ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಜಾಪ್ರುಭುತ್ವದಲ್ಲಿ ಪತ್ರಿಕೆಗಳ ಪಾತ್ರ ಎಂಬ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ನಿರೀಕ್ಷಾ, ದ್ವಿತೀಯ ಸ್ಥಾನ ಪಡೆದ ಆಶ್ವಿನಿ, ತೃತೀಯ ಸ್ಥಾನ ಪಡೆದ ರಂಜಿತಾ ಅವರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಜಯ್ ಹಾನಗಲ್, ಶಾಲಾ ಮುಖ್ಯೋಪಾಧ್ಯಾಯರಾದ ರಾಜೇಶ್ವರಿ, ಎಸ್ಡಿಎಂಸಿ ಅಧ್ಯಕ್ಷ ರವಿಕುಮಾರ್ ಇದ್ದರು. ಶಿಕ್ಷಕಿ ತೇಜಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ರತ್ನ ಕುಮಾರ್ ಸ್ವಾಗತಿಸಿ, ಪತ್ರಕರ್ತ ಬಿ.ಎ.ಭಾಸ್ಕರ್ ವಂದಿಸಿದರು.