ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಇದು ಯಾವುದೇ ಉಗ್ರ ದಾಳಿಯ ವಿವರಣೆಯಲ್ಲ, ಬದಲಾಗಿ ಯುದ್ಧದಂತಹ ಸನ್ನಿವೇಶ ಹಾಗೂ ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಭವನ ಆವರಣದಲ್ಲಿ ಸೋಮವಾರ ನಾಗರಿಕ ಸುರಕ್ಷತಾ ಅಣಕು ಕಾರ್ಯಾಚರಣೆ ವೇಳೆ ಕಂಡು ದೃಶ್ಯಗಳು. ಉಗ್ರ ದಾಳಿಯ ಈ ಅಣಕು ಪ್ರಾತ್ಯಕ್ಷಿಕೆ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ತುರ್ತು ಪರಿಸ್ಥಿತಿಯಲ್ಲಿ ಸೈರನ್ಗಳು ಮೊಳಗಿಸುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಸೈರನ್ ಮೊಳಗಿದಾಗ ನಾಗರಿಕರು ಹೇಗೆ ಪ್ರತಿಕ್ರಿಯಿಸಬೇಕು. ಬಾಂಬ್ ಸ್ಫೋಟವಾದರೆ ಏನು ಮಾಡಬೇಕು. ಅವಶೇಷಗಳಡಿ ಸಿಲುಕಿರುವವರನ್ನು ಹೇಗೆ ರಕ್ಷಿಸಬೇಕು. ವೈದ್ಯಕೀಯ ತುರ್ತು ಸೇವೆ ಒದಗಿಸುವುದು ಹೇಗೆ ಎಂಬುದನ್ನು ಅಣಕು ಪ್ರದರ್ಶನದ ಮೂಲಕ ತಿಳಿಸಿಕೊಡಲಾಯಿತು. ಜಿಲ್ಲಾಡಳಿತ ಭವನದಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿಯೇ ಅಣಕು ಪ್ರದರ್ಶನ ನಡೆದು ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕರೆದುಕೊಂಡು ಹೋಗುವ ದೃಶ್ಯವನ್ನು ಜನರು ಕುತೂಹಲದಿಂದ ವೀಕ್ಷಿಸಿದರು.ಅಣಕು ಪ್ರದರ್ಶನದಲ್ಲಿ ಪೊಲೀಸ್, ಗೃಹರಕ್ಷಕ ದಳ, ಅಗ್ನಿಶಾಮಕ ದಳ, ಬಾಂಬ್ ನಿಷ್ಕ್ರೀಯ ದಳ, ಸ್ವಾನ ತಂಡ, ಸಂಚಾರಿ ಪೊಲೀಸ್, ಎನ್.ಸಿ.ಸಿ ಕಮಾಂಡರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿ 300ಕ್ಕೂ ಅಧಿಕ ಜನ ಪಾಲ್ಗೊಂಡಿದ್ದರು.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿ.ಪಂ ಸಿಇಒ ಶಶಿಧರ ಕುರೇರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಮಹಾಂತೇಶ್ವರ ಜಿದ್ದಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.