ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73 ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ಕಾಮಗಾರಿಯ ಪ್ರಧಾನ ಗುತ್ತಿಗೆ ವಹಿಸಿಕೊಂಡ ನಾಗಪುರದ ಡಿ.ಪಿ. ಜೈನ್ ಕಂಪನಿಯು ಸ್ಥಳೀಯ ಕಚ್ಚಾವಸ್ತು ಪೂರೈಕೆದಾರರು ಸೇರಿದಂತೆ ಇತರರಿಗೆ ಸುಮಾರು 11.50 ಕೋಟಿ ರು. ನೀಡಲು ಒಪ್ಪಿಗೆ ಸೂಚಿಸಿದ್ದು ನಾಗಪುರದಲ್ಲಿ ನಡೆಯುತ್ತಿದ್ದ ಹೋರಾಟವನ್ನು ಹಿಂತೆಗೆದುಕೊಳ್ಳಲಾಗಿದೆ.
ವಿವಿಧ ಸಂಸ್ಥೆಗಳಿಂದ ಮರಳು ಜಲ್ಲಿ ಕಲ್ಲು, ದಿನಸಿ ಉತ್ಪನ್ನ, ಪೆಟ್ರೋಲ್ ಹಾಗೂ ಡೀಸೆಲ್, ಮುದ್ರಣ, ಫರ್ನಿಚರ್ ಸೇರಿದಂತೆ ನಾನಾ ವಸ್ತುಗಳನ್ನು ಖರೀದಿಸಿದ್ದರು. ಸುಮಾರು 384 ಕೋಟಿ ರು. ಅನುದಾನದ ಕಾಮಗಾರಿ ಇದಾಗಿದ್ದು, ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಈವರೆಗಿನ ಕಾಮಗಾರಿಗೆ ಸುಮಾರು 102 ಕೋಟಿ ಪಾವತಿ ಮಾಡಲಾಗಿತ್ತು. ಆದರೆ ಕಂಪನಿ ಮಾತ್ರ ಸ್ಥಳೀಯ ಕಚ್ಚಾವಸ್ತು ಪೂರೈಕೆ ದಾರರು ಸೇರಿದಂತೆ ಯಾರಿಗೂ ಹಣ ಪಾವತಿಸದೆ ಸತಾಯಿಸಿತ್ತು.
ಗುತ್ತಿಗೆ ವಹಿಸಿಕೊಂಡ ಕಂಪನಿ ವಿರುದ್ಧ ರಾಜ್ಯ ಕ್ರಷರ್ ಮಾಲಕರ ಸಂಘದ ಅಧ್ಯಕ್ಷ ಡಾ.ರವೀಂದ್ರ ಶೆಟ್ಟಿ ನೇತೃತ್ವದಲ್ಲಿ 45ಕ್ಕೂ ಅಧಿಕ ಮಂದಿ ಮಹಾರಾಷ್ಟ್ರದ ನಾಗಪುರಕ್ಕೆ ತೆರಳಿ ಕಂಪನಿ ಕಚೇರಿ ಎದುರು ಆ.26 ರಿಂದ ಪ್ರತಿಭಟನೆ ಆರಂಭಿಸಿದ್ದರು. ಇದು ನಾಗುರದಲ್ಲಿ ಬಾರಿ ಸಂಚಲನಕೆ ಕಾರಣವಾಗಿತ್ತು. ಪ್ರತಿಭಟನೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ನಾನಾ ಜಿಲ್ಲೆಗಳಿಂದ ಹೋರಾಟಗಾರರು ಹೋಗಿದ್ದರು. ಆ.26 ರಂದು ಬೆಳಗ್ಗೆ ಕಂಪನಿ ಸಿಬ್ಬಂದಿ ನಾನಾ ನೆಪ ಹೇಳಿ ಹೋರಾಟಗಾರರನ್ನು ಸಮಾಧಾನ ಪಡಿಸಲು ಯತ್ನಿಸಿದರು. ಆದರೆ ಪಟ್ಟು ಬಿಡದ ಹೋರಾಟಗಾರರು ನಮಗೆ ಹಣ ಪಾವತಿಯಾಗದೆ ಸ್ಥಳದಿಂದ ಕದಲುವುದಿಲ್ಲ ಎಂದು ಹಠಕ್ಕೆ ಬಿದ್ದು, ಧರಣಿ ಕುಳಿತರು.ವಿಷಯ ತಿಳಿಯುತ್ತಿದ್ದಂತೆ ನಾಗಪುರದ ಶಾಸಕ ಮೋಹನ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಜೊತೆಗೆ ಮಾತನಾಡಿದರೂ ಇದು ಕೈಗೂಡದಿದ್ದಾಗ ಕರ್ನಾಟಕದ ಬಿಜೆಪಿ ಶಾಸಕರ ಸಂಪರ್ಕ ಸಾಧಿಸಿದ ಮೋಹನ್ ಮತೆ ವಾಸ್ತವ ತೆರೆದಿಟ್ಟು 15 ದಿನದೊಳಗೆ ಕಂಪನಿ ಹಣ ಪಾವತಿಸುವ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಇದಕ್ಕೆ ಕಂಪನಿ ಸಹಮತ ವ್ಯಕ್ತಪಡಿಸಿ ಆ.29ರಂದು ಶೇ.50 ಹಾಗೂ ಸೆ.4ರೊಳಗೆ ಉಳಿದ ಶೇ.50ನ್ನು ಪಾವತಿಸುವುದಾಗಿ ಭರವಸೆ ನೀಡಿದೆ. ಶಾಸಕರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಕಂಪನಿ ಭರವಸೆ ನೀಡಿದ ಕಾರಣ ಧರಣಿ ಹಿಂತೆಗೆದು ಕೊಳ್ಳಲಾಯಿತು. ಪ್ರತಿಭಟನೆಗೆ ತೆರಳಿದವರು ಸಂಪೂರ್ಣ ಹಣ ಪಾವತಿಯಾಗದೆ ನಾವು ಊರಿಗೆ ತೆರಳುವುದಿಲ್ಲ ಎಂದು ನಿರ್ಧರಿಸಿ ನಾಗಪುರದಲ್ಲೇ ವಾಸ್ತವ್ಯ ಹೂಡಿದ್ದಾರೆ ಎಂದು ವರದಿಯಾಗಿದೆ.