ಕನ್ನಡಪ್ರಭ ವಾರ್ತೆ ಬಾಗಲಕೋಟೆ
ರಾಜ್ಯ ಸರ್ಕಾರ ಬರವನ್ನು ಸಮರ್ಪಕವಾಗಿ ಎದುರಿಸುವಲ್ಲಿ ವಿಫಲವಾಗಿದೆ ವಿಪ ಸದಸ್ಯ ಎಸ್.ವಿ.ಸಂಕನೂರ ಆರೋಪಿಸಿದರು.ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಜತೆಗೆ ಗ್ಯಾರಂಟಿ ಸಂಪೂರ್ಣವಾಗಿ ಜಾರಿಗೆ ತರುವಲ್ಲಿ ಹಿಂದೆ ಬಿದ್ದಿರುವುದರಿಂದ ಜನರು ಈ ಸ್ಕಾರದ ಆಡಳಿತದಿಂದ ಬೇಸರಗೊಂಡಿದ್ದಾರೆ ಎಂದರು.
ರಾಜ್ಯದಲ್ಲಿ ತೀವ್ರ ಬರಗಾಲದಿಂದ ಅಂದಾಜು 800ಕ್ಕೂ ಹೆಚ್ಚಿನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸಕ್ಕೂ ಬರ ಬಿದ್ದಿರುವುದರಿಂದ ಹಳ್ಳಿಯ ಜನರು ಗ್ರಾಮಗಳನ್ನು ತೊರೆದು ನಗರ ಪ್ರದೇಶಗಳತ್ತ ಗುಳೆ ಹೋಗುತ್ತಿದ್ದಾರೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಜತೆಗೆ ಬರದಿಂದ ಪಡೆದ ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಕಾರಣ, ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು. ಕೇಂದ್ರ ಸಮ್ಮಾನ ಯೋಜನೆಗೆ ಕೇಂದ್ರದಿಂದ ₹6 ಸಾವಿರ ಹಾಗೂ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸಿಎಂ ಇದ್ದಾಗ ನೀಡುತ್ತಿದ್ದ ₹4 ಸಾವಿರ ನೀಡಲಾಗುತ್ತಿತ್ತು. ಅದನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸುವ ಮೂಲಕ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.2004 ರಿಂದ 2014ರವರೆಗೆ ದೇಶದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ರಾಜ್ಯದ ತೆರಿಗೆ ಪಾಲಿನಲ್ಲಿ ₹81 ಸಾವಿರ ಕೋಟಿ ತೆರಿಗೆ ಹಂಚಿಕೆ ಮಾಡಿತ್ತು. ಅದೇ ಬಿಜೆಪಿ ಸರ್ಕಾರ 2014 ರಿಂದ ಇಲ್ಲಿಯವರೆಗೆ ಒಟ್ಟು ₹2,82,000 ಕೋಟಿ ತೆರಿಗೆಯನ್ನು ರಾಜ್ಯಕ್ಕೆ ನೀಡಿದೆ. ಇಷ್ಟಾದರೂ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ನಮ್ಮ ತೆರಿಗೆಯ ಪಾಲು ಬಂದಿಲ್ಲ ಎಂದು ಸುಳ್ಳು ಹೇಳುತ್ತಿರುವುದು ಸರಿಯಲ್ಲ. ಅಷ್ಟಾಗಿಯೂ ತೆರಿಗೆ ಹಣವನ್ನು ಕೇಂದ್ರ ಸರ್ಕಾರ ಹಂಚುವುದಿಲ್ಲ, ಅದನ್ನು ಹಣಕಾಸು ಆಯೋಗ ಹಂಚಿಕೆ ಮಾಡುತ್ತದೆ ಎಂಬುವುದನ್ನು ರಾಜ್ಯ ಸರ್ಕಾರದ ಮುಖಂಡರು ತಿಳಿದುಕೊಳ್ಳಬೇಕು ಎಂದು ಹೇಳಿದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪಿಎಂ ಆವಾಸ್ ಯೋಜನೆ ಮೂಲಕ ರಾಜ್ಯದಲ್ಲಿ 4.48 ಲಕ್ಷ ಮನೆಗಳನ್ನು ನಿರ್ಮಿಸಿದೆ. ಜೆಜೆಎಂ ಯೋಜನೆ ಮೂಲಕ ರಾಜ್ಯದ 1.17 ಕೋಟಿ ಮನೆಗಳ ಮುಂದೆ ನಲ್ಲಿ ಕೂಡಿಸಿದೆ. ಸ್ವಚ್ಛ ಭಾರತ್ ಮಿಷನ್ ಮೂಲಕ 48 ಲಕ್ಷ ಶೌಚಾಲಯಗಳನ್ನು ನಿರ್ಮಿಸಿದೆ. ಗರೀಬಿ ಕಲ್ಯಾಣ ಯೋಜನೆ ಮೂಲಕ ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿ ನೀಡಲಾಗುತ್ತಿದ್ದು, ಅದನ್ನು ತಾವು ನೀಡಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳುವ ಮೂಲಕ ಕೊಟ್ಟ ಮಾತಿಗೆ ತಪ್ಪಿದೆ ಎಂದು ಗುಡುಗಿದರು.ಈ ವೇಳೆ ಮಾಜಿ ಶಾಸಕ ವೀರಣ್ಣ ಚರಂತಿಮಠ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್, ವಕ್ತಾರ ಸತ್ಯನಾರಾಯಣ ಹೇಮಾದ್ರಿ ಇತರರಿದ್ದರು.