ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಸಾರ್ವಜನಿಕ ಶಾಲೆಯನ್ನು ಆರಂಭಿಸುವ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ದುಸ್ಸಾಹಸಕ್ಕೆ ರಾಜ್ಯ ಸರ್ಕಾರ ಕೈ ಹಾಕಬಾರದು. 2016, 2017ರ ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ ವರದಿ ಬಗ್ಗೆ ಚರ್ಚಿಸಿ, ಅದರ ಅಂಶಗಳ ಬಗ್ಗೆ ಚರ್ಚಿಸಿ, ಅನುಷ್ಠಾನಗೊಳಿಸುವ ಕೆಲಸವನ್ನು ಸರ್ಕಾರ ಮಾಡಲಿ ಎಂದರು.
ರಾಜ್ಯ ಶಿಕ್ಷಣ ನೀತಿ ಆಯೋಗ ರೂಪಿಸಿದ ರಾಜ್ಯ ಶಿಕ್ಷಣ ನೀತಿಯನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ, ಜಾರಿಗೊಳಿಸಬೇಕು. ಶಿಕ್ಷಣ ಹಕ್ಕು ಕಾಯ್ದೆ-2009ನ್ನು ಪೂರ್ಣ ಮತ್ತು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕ್ರಿಯಾ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದರು.ಭಾಷೆಯನ್ನು ಪರಿಣಾಮಕಾರಿಯಾಗಿ ಕಲಿಸಲು ಅಗತ್ಯ ಸಂಪನ್ಮೂಲಕ ಮತ್ತು ತರಬೇತಿಯನ್ನು ಶಿಕ್ಷಕರಿಗೆ ನೀಡಬೇಕು. ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರ ಜಾರಿಗೊಳಿಸಲಿ. ಕನ್ನಡ ಆಡಳಿತ ಭಾಷೆಯಾಗಿ, ಪರಿಣಾಮಕಾರಿಯಾಗಿ ಜಾರಿಗೆ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ ಮೀಸಲಿಡಬೇಕು ಎಂದು ಹೇಳಿದರು.
ಡಿಎಸ್ಸೆಸ್ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ ಮಾತನಾಡಿ, ಯುಡೈಸ್, ಸ್ಯಾಟ್ ಮೂಲಕ ಸಂಗ್ರಹಿಸುವ ಶಾಲಾ ಸಂಪನ್ಮೂಲಗಳ ಮಾಹಿತಿ, ಮೂಲ ಸೌಕರ್ಯ, ವಿದ್ಯಾರ್ಥಿ, ಶಿಕ್ಷಕರ ಇತ್ಯಾದಿ ಮಾಹಿತಿ ಮುಖ್ಯ ಶಿಕ್ಷಕರಿಗೆ ಲಭ್ಯವಿದ್ದು, ಈ ಎಲ್ಲಾ ಮಾಹಿತಿ ಎಸ್ಡಿಎಂಸಿ ಸದಸ್ಯರು, ಒಂದು ಪೋಷಕರು ಹಾಗೂ ಸಾರ್ವಜನಿಕರಿಗೆ ಲಭ್ಯವಾಗುವಂತೆ ಅಭಿವೃದ್ಧಿಪಡಿಸಿ, ಒದಗಿಸಬೇಕು ಎಂದು ಒತ್ತಾಯಿಸಿದರು.
ಅಗತ್ಯವಿರುವಲ್ಲಿ ಹೊಸ ಶಾಲೆ ಆರಂಭಿಸಬೇಕು. ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಎಲ್ಲಾ ಸುತ್ತೋಲೆ ಹಾಗೂ ಇತರೆ ಮಾಹಿತಿಯನ್ನು ಶಾಲೆ ಮುಖ್ಯ ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರ ವಾಟ್ಸಾಪ್ ಗ್ರೂಪ್ಗೆ ಹಂಚಿಕೆ ಮಾಡಬೇಕು. ಆಯಾ ಶಾಕೆ ಮುಖ್ಯ ಶಿಕ್ಷಕರು ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಪಾಲಕರನ್ನು ಒಳಗೊಂಡ ವಾಟ್ಸಪ್ ಗ್ರೂಪ್ನಲ್ಲಿ ಹಂಚಿಕೆ ಮಾಡುವಂತೆ ಸೂಚಿಸಬೇಕು.