ರಾಜ್ಯದಲ್ಲಿರುವುದು ಸಿದ್ದರಾಮಯ್ಯ, ಡಿಕೆಶಿಯವರ ಸಮ್ಮಿಶ್ರ ಸರ್ಕಾರ

KannadaprabhaNewsNetwork |  
Published : Nov 07, 2023, 01:31 AM IST
ಹೂವಿನಹಡಗಲಿ ತಾಲೂಕಿನ ಹೊಳಗುಂದಿ ಗ್ರಾಮದ ಹೊರವಲದಲ್ಲಿರುವ ರೈತರ ಜಮೀನಿನಲ್ಲಿ ಬೆಳೆ ಹಾನಿ ವೀಕ್ಷಣೆ ಮಾಡುತ್ತಿರುವ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ.  | Kannada Prabha

ಸಾರಾಂಶ

ಕಾಂಗ್ರೆಸ್‌ನವರು ಬಣಗಳ ಹಾಗೂ ತಂಡಗಳನ್ನು ಮಾಡಿಕೊಂಡು ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಹೂವಿನಹಡಗಲಿ

ರಾಜ್ಯದಲ್ಲಿ ಎಲ್ಲರೂ ಕಾಂಗ್ರೆಸ್‌ ಸರ್ಕಾರ ಆಡಳಿತದಲ್ಲಿದೆ ಎಂದು ನಂಬಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಬಣಗಳ ಹಾಗೂ ತಂಡಗಳನ್ನು ಮಾಡಿಕೊಂಡು ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆ. ರಾಜ್ಯದ ಜನ ಇವರಿಗೆ ಸಂಪೂರ್ಣ ಬಹುಮತದ ಅಧಿಕಾರ ನೀಡಿದ್ದಾರೆ. ಸುಭದ್ರ ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆ. ಬರಗಾಲದಲ್ಲಿ ರೈತರ ನೆರವಿಗೆ ಬಾರದ ಈ ಸರ್ಕಾರದ ಎಲ್ಲ ಮಂತ್ರಿಗಳು ಹಾಗೂ ಶಾಸಕರು ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ರೈತರ ಕಷ್ಟ ಆಲಿಸದೇ ಕೇವಲ ಅಧಿಕಾರಕ್ಕಾಗಿ ಹಂಬಲಿಸುತ್ತಿದ್ದಾರೆ ಎಂದರು.

ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಸಿಎಂ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದ ಮೂರು ಗುಂಪುಗಳಾಗಿದ್ದು, ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ದಲಿತರ ಗುಂಪು, ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಗೌಡರ ಗುಂಪು, ಹಿಂದುಳಿದ ವರ್ಗಗಳ ಹೆಸರಿನಲ್ಲಿ ಸಿದ್ದರಾಮಯ್ಯ ಅವರ ಗುಂಪು ಹೀಗೆ 3 ಮೂರು ಗುಂಪುಗಳಾಗಿವೆ ಎಂದು ವ್ಯಂಗ್ಯವಾಡಿದರು.

ಉತ್ತರ ಕರ್ನಾಟಕ ಭಾಗದ ನಾಯಕರಾದ ಸಚಿವ ಎಚ್‌.ಕೆ. ಪಾಟೀಲ್‌ ಅವರನ್ನು ಡಿನ್ನರ್‌ ಪಾರ್ಟ್‌ಗೆ ಕರೆದಿಲ್ಲ. ರಾಜ್ಯದಲ್ಲಿ ವೀರಶೈವ ಲಿಂಗಾಯತರನ್ನು 2ನೇ ದರ್ಜೆಯವರಂತೆ ಕಾಣಲಾಗುತ್ತಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ 38 ಜನ ಲಿಂಗಾಯತ ಜನ ಶಾಸಕರಿದ್ದು, 7 ಜನ ಮಂತ್ರಿಗಳಿದ್ದಾರೆ. ಆದರೂ ಹಿರಿಯ ನಾಯಕ ಶಾಮನೂರು ಶಿವಶಂಕ್ರಪ್ಪ ತಮ್ಮ ನೋವು ತೋಡಿತೊಂಡಿದ್ದಾರೆ.

7 ಬಾರಿ ಸಂಸದರಾಗಿದ್ದ ಕೆ.ಎಚ್‌. ಮುನಿಯಪ್ಪ ಅವರಿಗೆ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ ಇದೆ. ಆದರೆ ಅವರಿಗೆ ಕೆಲಸಕ್ಕೆ ಬಾರದ ಆಹಾರ ಖಾತೆ ನೀಡಿದ್ದಾರೆ. ಇದರಿಂದ ಕಾಂಗ್ರೆಸ್‌ ಸರ್ಕಾರ ದಲಿತರಿಗೆ ದೊಡ್ಡ ಅವಮಾನ ಹಾಗೂ ಅನ್ಯಾಯ ಮಾಡಿದ್ದಾರೆ. ಕೆ.ಎಚ್‌. ಮುನಿಯಪ್ಪ ಅವರಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತೆ ಕಾಂಗ್ರೆಸ್‌ನಲ್ಲಿ ನಡೆಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ಬಳಿಕ ತಾಲೂಕಿನ ಹೊಳಗುಂದಿ ಗ್ರಾಮ ಹತ್ತಿರದಲ್ಲಿರುವ ಆನಂದಹಳ್ಳಿ ರವೀಶ ಅವರ ಸೂರ್ಯಕಾಂತಿ ಬಿತ್ತನೆ ಮಾಡಿರುವ ಜಮೀನಿಗೆ ಭೇಟಿ ನೀಡಿದ ಕಾರಜೋಳ ಹಾಗೂ ಅವರ ತಂಡವು ರೈತರಿಂದ ಬಿತ್ತನೆ ಸೇರಿದಂತೆ ಇನ್ನಿತರ ಖರ್ಚು ವೆಚ್ಚಗಳ ಕುರಿತು ಮಾಹಿತಿ ಹಾಗ ಬೆಳೆಹಾನಿ ಕುರಿತು ಮಾಹಿತಿ ಪಡೆದರು.

ಬರದ ಕುರಿತು ತಜ್ಞರು ಮುನ್ಸೂಚನೆ ನೀಡಿದ್ದಾರೆ. ಆದರೆ ಸರ್ಕಾರ ಅವರ ಮನ್ಸೂಚನೆಯನ್ನು ನಿರ್ಲಕ್ಷ್ಯ ಮಾಡಿದ್ದರಿಂದ ರೈತರು ವಿದ್ಯುತ್‌ ಸೇರಿದಂತೆ ಇನ್ನಿತರ ಮೂಲ ಸೌಲಭ್ಯಕ್ಕಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಬರದಿಂದ ಕೃಷಿ ಕೂಲಿ ಕಾರ್ಮಿಕರು ಕೆಲಸ ಅರಸಿ ಗುಳೆ ಹೋಗುತ್ತಿದ್ದಾರೆ. ಜಾನುವಾರುಗಳನ್ನು ರಕ್ಷಣೆ ಮಾಡುವ ಗೋಜಿಗೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂದರು. ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಬ್ಯಾಂಕ್‌ ಹಾಗೂ ಗೋಶಾಲೆ ತೆರೆಯುವ ಚಿಂತನೆ ಮಾಡುತ್ತಿಲ್ಲ. ಒಟ್ಟಾರೆ ಕಾಂಗ್ರೆಸ್‌ ಸರ್ಕಾರ ಜನರ ಕಷ್ಟಗಳಿಗೆ ಸ್ಪಂದಿಸದೇ ರಾಜ್ಯವನ್ನು ಲೂಟಿ ಮಾಡಲು ನಿಂತಿದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ಶಾಸಕ ಮಹೇಶ ಟೆಂಗಿನಕಾಯಿ, ಹೂವಿನಹಡಗಲಿ ಶಾಸಕ ಕೃಷ್ಣನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಪಾಟೀಲ್‌, ತಾಲೂಕು ಬಿಜೆಪಿ ಅಧ್ಯಕ್ಷ ಸಂಜೀವರೆಡ್ಡಿ, ಈಟಿ ಲಿಂಗರಾಜ, ಎಚ್‌. ಪೂಜೆಪ್ಪ, ಎಚ್‌. ಹನುಮಂತಪ್ಪ, ಓದೋ ಗಂಗಪ್ಪ, ತೋಟಾನಾಯ್ಕ, ಸುಭಾಷ ಕರೆಂಗಿ, ಷಣ್ಮುಖ ಗುರಿಕಾರ, ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಪರಶುರಾಮ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಔಷಧಿ ಪೂರೈಸದಷ್ಟು ಸರ್ಕಾರ ದಿವಾಳಿಯೇ ? ಸಿಟಿ ರವಿ ಪ್ರಶ್ನೆ
ಮಾದಕ ವಸ್ತುಗಳ ಸೇವನೆ ಬದುಕಿನ ವಿನಾಶಕ್ಕೆ ಮುನ್ನುಡಿ: ಡಾ.ಸುಹಾಸ್