ದೊಡ್ಡಬಳ್ಳಾಪುರ, ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜು, ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ
ಭಾರತೀಯ ಬಾಹ್ಯಾಕಾಶ ಸಂಸ್ಥೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಹೊಸ ಇತಿಹಾಸ ನಿರ್ಮಾಣಮಾಡಿದ್ದು, ಭಾರತ ದೇಶದ ಚಂದ್ರಯಾನ-3 ರ ಯಶಸ್ಸಿಗಾಗಿ ಆಗಸ್ಟ್ 23 ರಂದು ಮೊದಲ ಬಾರಿಗೆ ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲಾಗುತ್ತಿದೆ ಎಂದು ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪಿ.ರವೀಂದ್ರಬಾಬು ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ಯೂಥ್ ರೆಡ್ ಕ್ರಾಸ್ ಕಮಿಟಿ ವತಿಯಿಂದ ನಡೆದ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಚಂದ್ರಯಾನ-3ರ ಯಶಸ್ಸಿನೊಂದಿಗೆ ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತದ ಕೀರ್ತಿ ಹೆಚ್ಚಿದೆ. ಇಸ್ರೋ ಸಾಧನೆಯೂ ಭಾರತೀಯರಲ್ಲಿ ಅಪಾರ ಅಭಿಮಾನ ಮೂಡಿಸಿದೆ. ಈ ಯಶಸ್ಸು ಭಾರತ ದೇಶವು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಸುದರ್ಶನ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಕಡೆಗೆ ಮೊದಲ ಆದ್ಯತೆ ನೀಡಬೇಕು. ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕ ಪ್ರಜ್ಞೆಯ ಪ್ರವೃತ್ತಿಗಳಿಂದ ವಿದ್ಯಾರ್ಥಿಗಳಲ್ಲಿ ಆಲೋಚಿಸುವ ದೃಷ್ಟಿಕೋನ ವಿಭಿನ್ನವಾಗುತ್ತದೆ. ವೈಜ್ಞಾನಿಕ ಮನೋಭಾವದ ಜೊತೆಗೆ ಸೃಜನಶೀಲತೆ, ಕೌಶಲ್ಯ ಹಾಗೂ ಕ್ರಿಯಾಶೀಲತೆಯನ್ನು ರೂಢಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಯೂಥ್ ರೆಡ್ ಕ್ರಾಸ್ ಕಮಿಟಿ ಸಂಚಾಲಕ ಡಾ.ಎಚ್.ನಂಜಪ್ಪ, ಐಕ್ಯೂಎಸಿ ಸಂಯೋಜಕರಾದ ಪ್ರೊ.ಎಸ್.ವಿ.ದಿವ್ಯಶ್ರೀ, ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.------------ಫೋಟೋ-
25ಕೆಡಿಬಿಪಿ5- ದೊಡ್ಡಬಳ್ಳಾಪುರದ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ನಡೆಯಿತು.