
ದಾವಣಗೆರೆ: ಮೈಸೂರಿನ ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ್ ಅವರಿಗೆ ಇ.ಡಿ. ನೀಡಿದ್ದ ನೋಟಿಸ್ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಇದು ಬಿಜೆಪಿ ಷಡ್ಯಂತ್ರಕ್ಕೆ ಸಿಕ್ಕ ಪ್ರತಿಫಲ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಲು ಸಾಕಷ್ಟು ತಂತ್ರಗಾರಿಕೆ ನಡೆದಿತ್ತು. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಜನಪ್ರಿಯ ಆಡಳಿತ ನೀಡುತ್ತಿದ್ದಾರೆ. ಜನರ ಮನದಲ್ಲಿಯೂ ಉಳಿದಿದ್ದಾರೆ. ಇದನ್ನು ಸಹಿಸದ ಬಿಜೆಪಿಯು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸಿದ್ದರಾಮಯ್ಯ, ಸಚಿವ ಬೈರತಿ ಸುರೇಶ್ ಅವರನ್ನು ಸಿಲುಕಿಸಲು ಇನ್ನಿಲ್ಲದ ಕಸರತ್ತು ನಡೆಸಿತ್ತು. ಈಗ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ ಇಡಿ ತರಾಟೆಗೆ ತೆಗೆದುಕೊಂಡಿದೆ. ರಾಜಕೀಯವಾಗಿ ಮಾಡುವ ಹೋರಾಟಕ್ಕೆ ನೀವೇಕೆ ಬೆಂಬಲ ನೀಡುತ್ತೀರಾ? ಮತದಾರರ ಬಳಿ ಹೋಗಿ ರಾಜಕಾರಣ ಮಾಡಲು ಹೇಳಿದೆ. ಈ ಮೂಲಕ ಬಿಜೆಪಿಯ ಷಡ್ಯಂತ್ರ ಬಟಾಬಯಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ನೇತೃತ್ವದ ಸರ್ಕಾರಗಳು, ಸಚಿವರು, ಶಾಸಕರು, ಸಂಸದರ ಮೇಲೆ ಇ.ಡಿ. ದಾಳಿ ಹೊಸದೇನಲ್ಲ. ಕೇಂದ್ರ ಸರ್ಕಾರ ವಿಪಕ್ಷಗಳನ್ನು ಸ್ವಾಯತ್ತ ಸಂಸ್ಥೆಗಳಾದ ಇ.ಡಿ., ಸಿಬಿಐ, ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ದಾಳಿ ನಡೆಸುವುದನ್ನು ಇನ್ನು ಮುಂದಾದರೂ ಬಿಡಬೇಕು. ವಾಮಮಾರ್ಗದಲ್ಲಿ ಕಾಂಗ್ರೆಸ್ ನಾಯಕರನ್ನು ಹೆದರಿಸುವ ತಂತ್ರ ಫಲಿಸದು ಎಂದು ಹೇಳಿದ್ದಾರೆ.- - -
-21ಕೆಡಿವಿಜಿ32: ಸೈಯದ್ ಖಾಲಿದ್ ಅಹ್ಮದ್