ಕೇಂದ್ರದ ಅಭಿವೃದ್ಧಿ ಯೋಜನೆ ಮನೆಮನೆಗೆ ತಿಳಿಸುವ ಕಾರ್ಯ

KannadaprabhaNewsNetwork |  
Published : Jan 01, 2024, 01:15 AM IST
ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು. | Kannada Prabha

ಸಾರಾಂಶ

ಭಾರತವನ್ನು 2047ರೊಳಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ, ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯುಳ್ಳ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಮನ್ ಕೀ ಬಾತ್ ನೇರ ಪ್ರಸಾರ ಕಾರ್ಯಕ್ರಮವನ್ನು ಸಚಿವರು ಸ್ಥಳೀಯರೊಂದಿಗೆ ವೀಕ್ಷಿಸಿದರು.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಕಳೆದ ಒಂಬತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಜನಪರ, ಅಭಿವೃದ್ಧಿ ಯೋಜನೆಗಳನ್ನು ಮನೆಮನೆಗೆ ತಲುಪಿಸುವುದೇ ಈ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಅವರು ಭಾನುವಾರ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಭಾರತ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಗ್ರಾಮೀಣ ಮತ್ತು ನಗರ ಪ್ರದಶಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗ್ರಾಮೀಣ ಹಾಗೂ ನಗರದ ಜನರಿಗೆ ಹಲವಾರು ಯೋಜನೆ ಜಾರಿಗೆ ತಂದಿದ್ದು, ಮುಖ್ಯವಾಗಿ ಈ ಯಾತ್ರೆಯಲ್ಲಿ ಉಜ್ವಲ ಯೋಜನೆ, ಆಯುಷ್ಮಾನ ಭಾರತ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ, ಆಧಾರ ಕಾರ್ಡ್, ಪ್ರಧಾನ ಮಂತ್ರಿ ಸ್ವನಿಧಿ, ಬ್ಯಾಂಕಿನಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಮತ್ತು ಜೀವನ ಬಿಮಾ ಯೋಜನೆ, ಮುದ್ರಾ, ವಿಶ್ವಕರ್ಮ ಯೋಜನೆ ಮತ್ತು ಇನ್ನಿತರ ಯೋಜನೆಗಳು ಜಾರಿಯಲ್ಲಿದ್ದು ಜನರು ಇವೆಲ್ಲ ಯೋಜನೆಗಳ ಲಾಭ ಸ್ಥಳದಲ್ಲೇ ಮಾಹಿತಿ ಪಡೆದು ಅರ್ಜಿ ಸಲ್ಲಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.

ಯೋಜನೆಗಳ ಸಮರ್ಪಕ ಮಾಹಿತಿ ನೀಡುವ ಉದ್ದೇಶದಿಂದ ಇಡಿ ದೇಶದಲ್ಲಿ ಈ ವಿಕಸಿತ ಭಾರತ ಸಂಕಲ್ಪ ಯಾತ್ರೆ ಪ್ರಾರಂಭಿಸಲಾಗಿದೆ. ಯೋಜನೆಗಳ ಲಾಭ ಪಡೆದು ತಮ್ಮ ಸ್ವಂತ ಅಭಿವೃದ್ಧಿಯ ಜತೆಗೆ ದೇಶದ ಅಭಿವೃದ್ಧಿಗೆ ಎಲ್ಲರೂ ಮುಂದಾಗಬೇಕು ಎಂದರು.

ಭಾರತವನ್ನು 2047ರೊಳಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ, ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯುಳ್ಳ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಮನ್ ಕೀ ಬಾತ್ ನೇರ ಪ್ರಸಾರ ಕಾರ್ಯಕ್ರಮವನ್ನು ಸಚಿವರು ಸ್ಥಳೀಯರೊಂದಿಗೆ ವೀಕ್ಷಿಸಿದರು.

ಪ್ರಧಾನ ಮಂತ್ರಿಯವರ ಉಜ್ವಲಾ ಯೋಜನೆ, ಸ್ವ ಸಹಾಯ ಗುಂಪುಗಳಿಗೆ ಸಾಲ ಮಂಜೂರಾತಿ, ಆಯುಷ್ಮಾನ್ ಭಾರತ, ಮುದ್ರಾ, ಸ್ವನಿಧಿ, ಪ್ರಧಾನ ಮಂತ್ರಿಯವರ ಆವಾಸ ಯೋಜನೆ ಸೇರಿದಂತೆ ಹಲವಾರು ಜನಪರ ಯೋಜನೆಗಳ ಕುರಿತು ಸಂಬಂಧಿಸಿದ ಇಲಾಖೆಗಳು ಮಳಿಗೆಯನ್ನು ತೆರೆದು ಅಧಿಕಾರಿಗಳು ಫಲಾನುಭವಿಗಳಿಗೆ ಮತ್ತು ನೆರೆದಿದ್ದ ಸಾರ್ವಜನಿಕರಿಗೆ ಯೋಜನೆಗಳ ಸಂಪೂರ್ಣ ಮಾಹಿತಿ ನೀಡಿದರು.

ಗ್ರಾಪಂ ಅಧ್ಯಕ್ಷೆ ಮಹಾದೇವಿ ಹಂಗರಕಿ, ಉಪಾಧ್ಯಕ್ಷರು ಹಾಗೂ ಸದಸ್ಯರು, ಕೆನರಾ ಬ್ಯಾಂಕ್ ಮಹಾ ಪ್ರಬಂಧಕ ಎಂ. ವಿಜಯಕುಮಾರ, ವ್ಯವಸ್ಥಾಪಕ ಗಂಗಾಧರ ನೀಲಣ್ಣವರ, ಪ್ರಭುದೇವ ಸೇರಿದಂತೆ ಹಲವು ಗಣ್ಯರು, ವಿವಿಧ ಬ್ಯಾಂಕುಗಳ ಅಧಿಕಾರಿಗಳು, ಜನಪ್ರನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳೆವಿಮೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಉಮೇಶ ಮರ್ಚಪ್ಪನವರ
ಕೆಡಿಸಿಸಿ ಎಲ್ಲ ನಿರ್ದೇಶಕ ಮತ ಎಣಿಕೆ ಪೂರ್ಣ: 16ಕ್ಕೆ ನೂತನ ಆಡಳಿತ ಮಂಡಳಿ ರಚನೆ ಸಾಧ್ಯತೆ