ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಸಿ. ಭೀಮಸೇನರಾವ್ ಕಾನೂನು ಮಹಾವಿದ್ಯಾಲಯದ ವತಿಯಿಂದ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ, ನೂತನ ನ್ಯಾಯಾಧೀಶರಾಗಿ ನೇಮಕಗೊಂಡಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿ, ಸೋಲಿನಿಂದ ಹೊಸ ಅನುಭವಗಳನ್ನು ಕಲಿಯುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಸೋಲಿನ ರುಚಿಯಿಂದ ಯಶಸ್ಸಿನ ಸಿಹಿ ಮತ್ತಷ್ಟು ದುಪ್ಪಟ್ಟಾಗುತ್ತದೆ. ಎಲ್ಲರನ್ನೂ ಸಂತೈಸುತ್ತೇನೆ ಎಂಬ ಭ್ರಮೆಯಲ್ಲಿ ಇರಬಾರದು. ಬದುಕಿನ ದುರ್ಗಮ ಹಾದಿಯಲ್ಲಿ ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ. ಎಂಎಸ್ಸಿ ಪದವಿ ಪಡೆದಿದ್ದ ನನಗೆ, ಕಾನೂನು ಕಾಲೇಜಿನ ಉಪನ್ಯಾಸಕರು ನೀಡಿದ ಬೋಧನೆ ಸಮಾಜದ ಬಗ್ಗೆ ಹೊಸ ಕುತೂಹಲ ಮೂಡಿಸಿತು ಎಂದು ಸ್ಮರಿಸಿದರು.
ಅಭಿನಂದನೆ ಸ್ವೀಕರಿಸಿದ ಮತ್ತೋರ್ವ ನ್ಯಾಯಾಧೀಶರಾಶ ಕೆ.ಎಸ್. ರಕ್ಷಿತಾ ಮಾತನಾಡಿ, ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಜೀವನ ಮೌಲ್ಯಗಳನ್ನೂ ನಮ್ಮ ಉಪನ್ಯಾಸಕ ವೃಂದ ಕಲಿಸಿಕೊಟ್ಟಿದೆ. ಗ್ರಾಮೀಣ ಪ್ರದೇಶದಿಂದ ಬಂದ ನಮಗೆ ಯಾವುದೇ ನ್ಯಾಯಾಂಗ ಹಿನ್ನೆಲೆ ಇರಲಿಲ್ಲ. ದೊಡ್ಡ ಕನಸುಗಳನ್ನು ಕಾಣಲು ಪ್ರಯತ್ನಿಸಿ. ಸಣ್ಣ ಅವಕಾಶವನ್ನೂ ದೊಡ್ಡ ಸಾಧನೆಗೆ ದಾರಿಯನ್ನಾಗಿ ಮಾಡಿಕೊಳ್ಳಬೇಕು. ಯಶಸ್ಸಿಗೆ ಜ್ಞಾನದ ಜೊತೆಗೆ ಕೌಶಲ್ಯ, ಆತ್ಮವಿಶ್ವಾಸ ಮತ್ತು ನಿರಂತರ ಪರಿಶ್ರಮವೂ ಅಗತ್ಯ ಎಂದು ತಿಳಿಸಿದರು.ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಮಾತನಾಡಿ, ಪ್ರಜಾಪ್ರಭುತ್ವದ ಉಳಿವು ಮತ್ತು ರಕ್ಷಣೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ಅವಲಂಬಿತವಾಗಿದೆ. ಆಳುವವರ ಅಜ್ಞಾನದಿಂದ ನ್ಯಾಯಾಂಗದ ಮೇಲೆ ಹೆಚ್ಚಿನ ಹೊರೆ ಉಂಟಾಗುತ್ತಿದೆ. ಸಂಪತ್ತು ಮತ್ತು ಸರಳತೆಯ ನಡುವೆ, ಸರಳತೆಗೆ ಎಂದಿಗೂ ಬೆಲೆ ಕಟ್ಟಲಾಗದು. ನಾವು ಅಲಂಕರಿಸುವ ಉನ್ನತ ಹುದ್ದೆಗಳು ನಮ್ಮ ಸೌಜನ್ಯತೆಯನ್ನು ಕಳೆದುಕೊಳ್ಳುವಂತೆ ಮಾಡಬಾರದು ಎಂದು ಅಭಿಪ್ರಾಯಪಟ್ಟರು.
ನ್ಯಾಯಾಧೀಶರ ತೀರ್ಪುಗಳು ಸಮಾಜದ ಮೇಲೆ ದೀರ್ಘಕಾಲದ ಪ್ರಭಾವ ಬೀರುತ್ತವೆ. ಆದ್ದರಿಂದ ಅವರ ವ್ಯಕ್ತಿತ್ವ, ಪ್ರಾಮಾಣಿಕತೆ ಮತ್ತು ಸಂಸ್ಕಾರಗಳು ಅತ್ಯಂತ ಮಹತ್ವ ಪಡೆಯುತ್ತವೆ. ನ್ಯಾಯಾಂಗ ವ್ಯವಸ್ಥೆಯ ಸೌಲಭ್ಯಗಳು ಸಾಮಾನ್ಯ ಜನರಿಗೂ ತಲುಪುವಂತೆ ನೂತನ ನ್ಯಾಯಾಧೀಶರು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.