ತನಿಖೆ ಬಳಿಕವಷ್ಟೇ ಚಂದ್ರಶೇಖರನ್‌ ಆತ್ಮಹತ್ಯೆ ಸತ್ಯ ಬಯಲು: ಡಾ.ಪರಮೇಶ್ವರ್

KannadaprabhaNewsNetwork | Updated : May 31 2024, 04:42 AM IST

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಶಿವಮೊಗ್ಗದ ವಿನೋಬನಗರದಲ್ಲಿರುವ ಅವರ ನಿವಾಸಕ್ಕೆ ಗೃಹ ಸಚಿವ ಡಾ.ಪರಮೇಶ್ವರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

 ಶಿವಮೊಗ್ಗ :  ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರ ಹೆಸರು ಉಲ್ಲೇಖವಿಲ್ಲ. ಹೀಗಾಗಿ ಅವರ ರಾಜೀನಾಮೆ ಪಡೆಯಲು ಸಾಧ್ಯವಿಲ್ಲ. ಹಾಗಾಗಿ ಈ ಪ್ರಕರಣವನ್ನು ಈಶ್ವರಪ್ಪನವರ ಪ್ರಕರಣದ ಜೊತೆ ಹೊಂದಾಣಿಕೆ ಮಾಡಲು ಆಗಲ್ಲ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಹೇಳಿದರು.

ಶಿವಮೊಗ್ಗದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿಯ ಅವ್ಯವಹಾರದ ಬಗ್ಗೆ ತನಿಖೆ ನಡೆದಿದೆ. ಡೆತ್‌ನೋಟ್ ನಲ್ಲಿ ಸಚಿವರ ಮೌಖಿಕ ಆದೇಶ ಎಂದು ಬರೆದಿದ್ದಾರೆ. ತನಿಖೆಯಲ್ಲಿ ಬರುವ ತನಕ ಏನೂ ಹೇಳಲು ಆಗೊಲ್ಲ. ಸಚಿವರ ಹೆಸರು ಉಲ್ಲೇಖವಿಲ್ಲದ ಕಾರಣ ರಾಜೀನಾಮೆ ಪಡೆಯಲು ಸಾಧ್ಯವಿಲ್ಲ. ಈಶ್ವರಪ್ಪನವರ ಪ್ರಕರಣದಲ್ಲಿ ಅವರ ಹೆಸರಿತ್ತು. ಹೀಗಾಗಿ ಅವರು ರಾಜೀನಾಮೆ ಕೊಡಬೇಕಾಯಿತು. ಪ್ರಕರಣ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದೆ. ಅವರಿಗೆ ಕೆಲಸ ಮಾಡುವಾಗ ಒತ್ತಡವಿತ್ತಾ, ಅದೇ ಕಾರಣಕ್ಕೆ ಆತ್ಮಹತ್ಯೆ ನಡೆದಿದೆಯಾ? ಎಂಬುದಕ್ಕೆ ತನಿಖೆ ಬಳಿಕವೇ ಉತ್ತರ ಸಿಗಬೇಕಿದೆ ಎಂದು ತಿಳಿಸಿದರು.

ಸ್ವಾಯತ್ತ ಸಂಸ್ಥೆಗಳು ದುರುಪಯೋಗ ಆಗುವ ಸಾಧ್ಯತೆ ಇದೆ ಎಂಬ ಆರೋಪ ಸತ್ಯ. ಹಾಗಾಗಿ ಸದ್ಯಕ್ಕೆ ಸಿಐಡಿಗೆ ನೀಡಲಾಗಿದೆ. ಬಿಜೆಪಿ ಹೇಳಿದಂತೆ ನಡೆದುಕೊಳ್ಳಲು ಸಾಧ್ಯವಿಲ್ಲ. ಸತ್ಯಾಸತ್ಯತೆ‌ ಹೊರ ಬರುವ ತನಕ ಸರ್ಕಾರಕ್ಕೆ ಮುಜುಗರ ಆಗುತ್ತೆ. ಆದರೆ, ಕಾನೂನು ಸುವ್ಯವಸ್ಥೆ ಹಾಳಾಗಿಲ್ಲ. ಈ ವಿಚಾರದಲ್ಲಿ ಬಿಜೆಪಿಯವರು ಅಪಪ್ರಚಾರ ಮಾಡುವುದು ಬೇಡ ಎಂದು ಕುಟುಕಿದರು.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಹಲ್ಲೆ, ಹತ್ಯೆಗಳು ಹೆಚ್ಚಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ. ಅವರು ಅಧಿಕಾರದಲ್ಲಿ ಇದ್ದಾಗ ಎಷ್ಟು ಕೊಲೆಗಳು ಆಗಿವೆ. ಗಣಪತಿ ಹಬ್ಬಕ್ಕೆ ರಂಜಾನ್ ಹಬ್ಬಕ್ಕೆ ಗಲಾಟೆ ಆಗ್ತಾ‌ ಇದೆಯಾ? ಬಿಜೆಪಿ ಕಾಲದಲ್ಲಿ ಮರ್ಡರ್ ಎಷ್ಟಾಗಿದೆ‌? ಲೆಕ್ಕ ಕೊಡಬಲ್ಲೆ ಎಂದು ಕಿಡಿಕಾರಿದರು.

ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ್ ದಗ್ಗಲ್, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಕಲೀಂ ಪಾಶ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್‌, ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಚ್.ಸಿ. ಯೋಗೀಶ್ ಮತ್ತಿತರರು ಇದ್ದರು.

ನಾಯಕರ ಭೇಟಿ, ಸಾಂತ್ವನ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ಪ್ರಕರಣ ಬೆನ್ನಲ್ಲೆ ಮೃತ ಅಧಿಕಾರಿಯ ಕುಟುಂಬಕ್ಕೆ ಸಾಂತ್ವನ‌ ಹೇಳಲು ಬಿಜೆಪಿ, ಕಾಂಗ್ರೆಸ್‌ ಪಕ್ಷದ ನಾಯಕರು ದೌಡಾಯಿಸುತ್ತಿದ್ದಾರೆ. ಶಿವಮೊಗ್ಗದ ವಿನೋಬನಗರದಲ್ಲಿರುವ ಮೃತ ಚಂದ್ರಶೇಖರನ್ ಅವರ ನಿವಾಸಕ್ಕೆ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ‌ ಹೇಳಿದ್ದರು.

ಸಂಜೆ ಗೃಹ ಸಚಿವ ಡಾ.ಪರಮೇಶ್ವರ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಇದಕ್ಕೂ ಮೊದಲು ಬುಧವಾರ ವಿಪಕ್ಷಗಳ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಮಧು ಬಂಗಾರಪ್ಪ ಸೇರಿದಂತೆ ಅನೇಕ ನಾಯಕರು ಭೇಟಿ ನೀಡಿ ಸಾಂತ್ವನ ಹೇಳಿದ್ದರು.

ಚನ್ನಗಿರಿ ಪ್ರಕರಣದಲ್ಲಿ 25 ಆರೋಪಿಗಳ ಸೆರೆ: ಚನ್ನಗಿರಿಯಲ್ಲಿ ನಡೆದಿರುವ ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿರುವವನ್ನು ರಕ್ಷಿಸಲು ಸಾಧ್ಯವಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 25 ಜನರನ್ನು ಬಂಧಿಸ ಲಾಗಿದೆ. ಶಿವಮೊಗ್ಗದಲ್ಲಿ ಪೊಲೀಸ್ ಆಯುಕ್ತರ ಕಚೇರಿ ಆರಂಭಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಅಗತ್ಯ ಬಿದ್ದರೆ ಕಚೇರಿಯನ್ನು ಆರಂಭಿಸಲಾಗುತ್ತದೆ. ಪ್ರಜ್ವಲ್ ರೇವಣ್ಣ ವಿಮಾನದಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ. ಈಗ ಟೇಕ್ ಆಫ್ ಆದರೆ ಬೆಂಗಳೂರಿಗೆ ಬರಲು 9 ಗಂಟೆ ಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Share this article