ಹಾವೇರಿ: ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧವಾಗಿದ್ದರೂ ಜಿಲ್ಲೆಯ ಹಾನಗಲ್ಲ ತಾಲೂಕಿನ ಕೂಸನೂರು ಗ್ರಾಮದಲ್ಲಿ ಇಬ್ಬರು ಬಡ ಕಾರ್ಮಿಕರು ಮಲದ ಗುಂಡಿಗೆ ಇಳಿದು ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಕೂಸನೂರ ಗ್ರಾಮದ ಸುರೇಶ ಪೂಜಾರ ಹಾಗೂ ಬಸವರಾಜ ಪೂಜಾರ ಅವರ ಶೌಚಾಲಯವನ್ನು ಯಾವುದೇ ಪರಿಕರ, ಯಂತ್ರೋಪಕರಣವಿಲ್ಲದೇ ಇಬ್ಬರು ಕಾರ್ಮಿಕರು ಗುಂಡಿಯಿಂದ ಮಲವನ್ನು ಎತ್ತಿ ಸ್ವಚ್ಛಗೊಳಿಸುತ್ತಿರುವುದನ್ನು ಕಂಡ ಯಾರೋ ವಿದ್ಯಾವಂತ ನಾಗರಿಕರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಅದು ಭಾರೀ ವೈರಲ್ ಆಗುವ ಜತೆಗೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಈ ಘಟನೆಗೆ ಕಾರಣರಾದ ಆರೋಪಿಗಳ ಮೇಲೆ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಕ್ಷಾ ಕವಚಗಳು ಅಥವಾ ಯಂತ್ರಗಳಿಲ್ಲದೆ ಈ ಕೆಲಸವನ್ನು ನಿರ್ವಹಿಸುವುದು ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ಕಾಯ್ದೆ-2013ರ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಕಾಯ್ದೆ ಉಲ್ಲಂಘಿಸುವುದು ಶಿಕ್ಷಾರ್ಹ ಅಪರಾಧ ಎನಿಸಿದೆ. ಈ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುತ್ತಿದ್ದರೂ ಜಿಲ್ಲೆಯಲ್ಲಿ ಅನಿಷ್ಟ ಪದ್ಧತಿ ನಡೆಯುತ್ತಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.ಘಟನೆ ನಡೆದಿರುವುದು ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಮಲದ ಗುಂಡಿ ಸ್ವಚ್ಛಗೊಳಿಸಿದ ಕಾರ್ಮಿಕರಿಗೆ ಆಡೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆರೋಪಿಗಳ ಮೇಲೆ ಪ್ರಕರಣ ದಾಖಲು ಮಾಡುವಂತೆ ಸೂಚಿಸಿದ್ದೇನೆ ಎಂದು ತಹಸೀಲ್ದಾರ್ ರೇಣುಕಾ ಎಸ್. ಹೇಳಿದರು.