ಮನುಷ್ಯ ಯಾವಾಗಲೂ ವಿಶ್ವ ಮಾನವನಾಗಿಯೇ ಬದುಕಿ ನಮ್ಮ ದೇಶಕ್ಕೆ ಮಹಾನ್ ನಾಯಕನಾಗಿ ಇಡೀ ದೇಶಕ್ಕೆ ಮಾದರಿಯಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಹೇಳಿದರು.
ಹಾವೇರಿ: ಮನುಷ್ಯ ಯಾವಾಗಲೂ ವಿಶ್ವ ಮಾನವನಾಗಿಯೇ ಬದುಕಿ ನಮ್ಮ ದೇಶಕ್ಕೆ ಮಹಾನ್ ನಾಯಕನಾಗಿ ಇಡೀ ದೇಶಕ್ಕೆ ಮಾದರಿಯಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್ ಹೇಳಿದರು.
ನಗರದ ಗಾಂಧಿ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಟಿ.ಎಂ.ಎ.ಇ ಬಿ.ಇಡಿ. ಕಾಲೇಜು ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನದ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕುವೆಂಪು ವಿಶ್ವ ಮಾನವ ಸಂದೇಶ ಸಾರಿದ ಪ್ರಥಮ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು. ಸಾಹಿತ್ಯಕ್ಕೆ ಇವರ ಕೊಡುಗೆಯು ಅಪಾರವಾಗಿದೆ. ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿ ಹುಟ್ಟುತ್ತಾನೆ, ಸಾಯುವಾಗ ಅಲ್ಪ ಮಾನವನಾಗಿ ಸಾಯುತ್ತಾನೆ. ಇದು ಹೀಗಾಗಬಾರದು ಮನುಷ್ಯನಾದವನ್ನು ಯಾವಾಗಲೂ ದೇಶಕ್ಕೆ, ನಾಡಿಗೆ ಉತ್ತಮ ಪ್ರಜೆಯಾಗಿ, ಸಾಧಕನಾಗಿ, ದೇಶಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.
ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಹಿರೇಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕುವೆಂಪು ಶ್ರೀ ರಾಮಾಯಣ ದರ್ಶನಂ ಎಂಬ ಕೃತಿಯ ಮೂಲಕ ಕರ್ನಾಟಕಕ್ಕೆ ಜ್ಞಾನಪೀಠ ಪ್ರಶಸ್ತಿ ತಂದರು. ಕುವೆಂಪು ಅವರ ಜೀವನ ಚರಿತ್ರೆಯನ್ನು ನಾವು, ನೀವೆಲ್ಲರೂ ತಿಳಿದುಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ ಉಪಪ್ರಾಚಾರ್ಯ ಜೀವರಾಜ ಛತ್ರದ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಂ.ಎಂ.ಮೈದೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎಚ್.ವೈ. ಮೀಸಿ, ಟಿ.ಎಂ.ಎ.ಇ.ಎಸ್. ಬಿ.ಇಡಿ., ಕಾಲೇಜಿನ ಪ್ರಾಂಶುಪಾಲ ಅರವಿ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.