ಶಿವಮೊಗ್ಗ: ಭಾರತದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ಕೇವಲ ಶೇ.28ರಷ್ಟು ಮಾತ್ರ. ಇಂಥಹಾ ಶೈಕ್ಷಣಿಕ ವಾತಾವರಣದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶಿಸಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಹು ದೊಡ್ಡ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ ಎಂದು ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕಿ ಡಾ.ಕೆ.ವಿದ್ಯಾಕುಮಾರಿ ಅಭಿಪ್ರಾಯಪಟ್ಟರು.
ದೇಶದ ಯುವಪೀಳಿಗೆ ಇಂದು ಸಾಮಾಜಿಕ ಮಾಧ್ಯಮದ ಜಾಲತಾಣಗಳು, ಯೋಜಿತ ಪ್ರಚಾರದ ಮಾಹಿತಿಯ ಮಹಾಪೂರದ ಪ್ರಭಾವಕ್ಕೆ ಒಳಗಾಗಿ ತಮ್ಮತನವನ್ನು ಕಳೆದುಕೊಳ್ಳುತ್ತಿದೆ. ಮಾದಕ ವ್ಯಸನದಂತಹ ದುಷ್ಚಟಗಳಿಗೆ ಒಳಗಾಗಿ ಒಟ್ಟಾರೆ ಸಮಾಜ ದಾರಿ ತಪ್ಪುತ್ತಿದೆ. ಇಂಥಹಾ ಸಂಕೀರ್ಣತೆಯನ್ನು ಮೀರಿದ ಜಾತ್ಯತೀತ, ಮತ್ತು ಸಮ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಪೂರಕವಾದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕಿದೆ ಎಂದರು.
ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಪಡೆದುಕೊಳ್ಳುವ ಪದವಿಗಳಿಗೆ ಅರ್ಥ ಬರಬೇಕಾದರೆ ವಿಮರ್ಶಾತ್ಮಕ ಚಿಂತನೆ, ವೈಚಾರಿಕತೆ, ಮತ್ತು ವೈಜ್ಞಾನಿಕ ದೃಷ್ಟಿಕೋನ ಅತ್ಯವಶ್ಯಕ. ಅಂಥಹಾ ವೈಚಾರಿಕ ವಾತಾವರಣವನ್ನು ನಿರ್ಮಿಸುವುದರತ್ತ ವಿಶ್ವವಿದ್ಯಾಲಯ ಗಮನಹರಿಸಲಿದೆ ಎಂದರು.ಕುಲಸಚಿವ ಎ. ಎಲ್. ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ತಿಮ್ಮರಾಯಪ್ಪ, ಹಣಕಾಸು ಅಧಿಕಾರಿ ಪ್ರೊ. ಎಚ್. ಎನ್. ರಮೇಶ್, ಪಠ್ಯೇತರ ಚಟುವಟಿಕೆ ವಿಭಾಗದ ಸಂಚಾಲಕ ಡಾ. ತಳವಾರ ವೆಂಕಟೇಶ್, ವಿವಿಧ ವಿಭಾಗಗಳ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಭರತ್ ಐಪಿಎಸ್ಗೆ ಸನ್ಮಾನ: ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಎಸ್.ಚಂದ್ರಶೇಖರ್ ಅವರ ಪುತ್ರ, ಪ್ರಸ್ತುತ ಸಿಕ್ಕಿಂ ಕೇಡರ್ನಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಿ.ಭರತ್ ಅವರನ್ನು ಸನ್ಮಾನಿಲಾಯಿತು.