ರಂಗಭೂಮಿಗೆ ಸಮಾಜದ ಪ್ರೋತ್ಸಾಹ ಅಗತ್ಯ: ಕೊಟ್ರಯ್ಯ ಸ್ವಾಮಿ ಹಿರೇಮಠ

KannadaprabhaNewsNetwork | Updated : Oct 05 2024, 01:36 AM IST

ಕೊಪ್ಪಳ ಜಿಲ್ಲೆ ಮುನಿರಾಬಾದ್‌ನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ದಸರಾ ಹಬ್ಬದ ಪ್ರಯುಕ್ತ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಿರಿಯ ರಂಗಭೂಮಿ ಕಲಾವಿದ ಕೊಟ್ರಯ್ಯ ಸ್ವಾಮಿ ಹಿರೇಮಠ ಉದ್ಘಾಟಿಸಿದರು.

ಮುನಿರಾಬಾದ್‌: ರಂಗಭೂಮಿ ಕಲಾವಿದರಿಗೆ ಸಮಾಜದ ಪ್ರೋತ್ಸಾಹ ಅತ್ಯಗತ್ಯ ಎಂದು ಹಿರಿಯ ರಂಗಭೂಮಿ ಕಲಾವಿದ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕಲಾವಿದ ಕೊಟ್ರಯ್ಯ ಸ್ವಾಮಿ ಹಿರೇಮಠ ನುಡಿದರು.

ಅವರು ಗುರುವಾರ ರಾತ್ರಿ ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ದಸರಾ ಹಬ್ಬದ ಪ್ರಯುಕ್ತ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ಆನಂತರ ಈ ಮೇಲಿನ ಮಾತುಗಳನ್ನು ಆಡಿದರು. ಟಿವಿ ಹಾಗೂ ಮೊಬೈಲ್ ಹಾವಳಿಯಿಂದ ರಂಗಭೂಮಿ ಅಕ್ಷರ ಅಕ್ಷರ ತತ್ತರಿಸಿಹೋಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹುಲಿಗಿ ಗ್ರಾಮ ಇತರ ಗ್ರಾಮಗಳಿಗೆ ಮಾದರಿಯಾಗಿದೆ. ತಾವು 5 ದಶಕಗಳ ಕೆಳಗೆ ಅಂದರೆ 1970ರಲ್ಲಿ ರಂಗಭೂಮಿ ಪ್ರವೇಶಿಸಿದಾಗ, ಗ್ರಾಮದ ಅಂದಿನ ಹಿರಿಯರು ರಂಗಭೂಮಿ ಕಲಾವಿದರಿಗೆ ಭಾರಿ ಪ್ರೋತ್ಸಾಹ ನೀಡಿದರು. ಈಗ 2ನೇ ತಲೆಮಾರಿನವರು ಸಹ ಈ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ ಎಂದು ಕೊಟ್ರಯ್ಯಸ್ವಾಮಿ ನುಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರಾಜಶೇಖರ ಹಿಟ್ನಾಳ ಮಾತನಾಡಿ, ಜು. 1ರಿಂದ ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಂಬರುವ ದಿನಗಳಲ್ಲಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ಮೂಲಭೂತ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಪ್ರಾಧಿಕಾರ ಕೆಲಸ ನಿರ್ವಹಿಸಲಿದೆ. ಭಕ್ತರಿಗೆ ಡಾರ್ಮಿಟರಿ, ಉತ್ತಮ ರಸ್ತೆಗಳು, ಕ್ಯಾಂಟೀನ್ ವ್ಯವಸ್ಥೆ, 10 ನೂತನ ಶೌಚಾಲಯಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಕಾಮಗಾರಿಗಳು 2 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.

ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶರಾವ್ ಸ್ವಾಗತಿಸಿದರು. ಆಕಾಶವಾಣಿ ಕಲಾವಿದ ಪ್ರಸಾದ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಹುಲಿಗಿ ಗ್ರಾಪಂ ಅಧ್ಯಕ್ಷೆ ನೀಲಮ್ಮ ಗುಂಗಾಡಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ, ತಾಪಂ ಮಾಜಿ ಅಧ್ಯಕ್ಷ ಪ್ರಭುರಾಜ ಪಾಟೀಲ್, ಜಿಪಂ ಮಾಜಿ ಅಧ್ಯಕ್ಷ ಟಿ. ಜನಾರ್ದನ, ಗ್ರಾಮದ ಹಿರಿಯರಾದ ಪಾಲಕ್ಷಪ್ಪ ಗುಂಗಾಡಿ, ವೀರೇಶ, ಕಪಾತಪ್ಪ, ಈರಣ್ಣ ಹಾಗೂ ಇತರರು ಉಪಸ್ಥಿತರಿದ್ದರು.