ಕನ್ನಡಪ್ರಭ ವಾರ್ತೆ ಹಾಸನ
ರಾಷ್ಟ್ರಧ್ವಜ ಅಂಗೀಕಾರ ದಿನಾಚರಣೆಯ ಅಂಗವಾಗಿ ನಗರದ ಆರ್. ಸಿ. ರಸ್ತೆಯಲ್ಲಿರುವ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆ ಕುರಿತ ಮಾಹಿತಿ ಕಾರ್ಯಗಾರದಲ್ಲಿ ಅವರು ಮಾತನಾಡಿ, ಧ್ವಜ ನೀತಿ ಸಂಹಿತೆಯ ಪ್ರಕಾರ ರಾಷ್ಟ್ರಧ್ವಜವನ್ನು ಹಾರಿಸುವ ವಿಧಾನ, ವಂದನೆ ಸಲ್ಲಿಸುವ ಕ್ರಮ, ಧ್ವಜದ ಅವರೋಹಣ ವಿಧಾನ ಹಾಗೂ ರಾಷ್ಟ್ರಧ್ವಜ ಬಳಕೆಗೆ ಸಂಬಂಧಿಸಿದ ನಿಯಮಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು. ರಾಷ್ಟ್ರಧ್ವಜವನ್ನು ಯಾವ ಸಂದರ್ಭಗಳಲ್ಲಿ ಬಳಸಬೇಕು, ಯಾವ ಸಂದರ್ಭಗಳಲ್ಲಿ ಬಳಸಬಾರದು ಎಂಬುದನ್ನು ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ತಿಳಿಸಿದರು. ರಾಷ್ಟ್ರಧ್ವಜದ ಪ್ರತಿಯೊಂದು ಬಣ್ಣ ಮತ್ತು ಅಶೋಕ ಚಕ್ರದ ಮಹತ್ವವನ್ನು ವಿವರಿಸಿದ ಅವರು, ರಾಷ್ಟ್ರಗೀತೆ ಹಾಡುವಾಗ ಪಾಲಿಸಬೇಕಾದ ಶಿಸ್ತು, ಗೌರವ ಮತ್ತು ನಾಗರಿಕರ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಭಾರತ ಸೇವಾದಳದ ಇತಿಹಾಸ, ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಸಂಸ್ಥೆಯ ಪಾತ್ರ ಹಾಗೂ ಯುವಜನರಲ್ಲಿ ಸೇವಾ ಮನೋಭಾವ, ಶಿಸ್ತು, ಸಾಮಾಜಿಕ ಜವಾಬ್ದಾರಿ ಮತ್ತು ರಾಷ್ಟ್ರೀಯ ಏಕತೆಯನ್ನು ಬೆಳೆಸಲು ಸೇವಾದಳ ನಡೆಸುತ್ತಿರುವ ವಿವಿಧ ಚಟುವಟಿಕೆಗಳ ಕುರಿತು ರಾಣಿ ವಿ.ಎಸ್. ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ತಿಮ್ಮೇಗೌಡ ಅವರು ಮಾತನಾಡಿ, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಸರಿಯಾದ ಅರಿವು ಮೂಡಿಸುವುದು ಶಿಕ್ಷಣ ಸಂಸ್ಥೆಗಳ ಪ್ರಮುಖ ಹೊಣೆಗಾರಿಕೆಯಾಗಿದೆ. ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸಂವಿಧಾನದ ಮೇಲಿನ ಗೌರವ ಹಾಗೂ ಜವಾಬ್ದಾರಿಯುತ ನಾಗರಿಕತೆಯ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರು, ಬೋಧಕ ಸಿಬ್ಬಂದಿ ಹಾಗೂ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಗೆ ಸಂಬಂಧಿಸಿದ ಮಾಹಿತಿಯನ್ನು ಆಸಕ್ತಿಯಿಂದ ಆಲಿಸಿದರು. ಕಾರ್ಯಾಗಾರವು ವಿದ್ಯಾರ್ಥಿಗಳಲ್ಲಿ ರಾಷ್ಟ್ರಧ್ವಜದ ಘನತೆ ಮತ್ತು ರಾಷ್ಟ್ರೀಯ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.