ಗಣರಾಜ್ಯೋತ್ಸವದಲ್ಲಿ ನಿವೃತ್ತ ಯೋಧರಿಗೆ ವಿವಿಯಿಂದ ಸನ್ಮಾನ
ಗಣರಾಜ್ಯೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಬೃಹದಾಕಾರದ ಅಸಮಾನತೆಯನ್ನು ತೊಡೆದು ಹಾಕಬೇಕಾದ ತುರ್ತು ನಮ್ಮ ಮುಂದಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.
ಜ್ಞಾನಸಹ್ಯಾದ್ರಿಯ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ 76ನೇ ಗಣರಾಜ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಶೇಕಡ 3ರಷ್ಟು ಮಂದಿ ಶ್ರೀಮಂತರ ಬಳಿ ಶೇ. 50ಕ್ಕೂ ಹೆಚ್ಚು ಸಂಪತ್ತು ಕ್ರೋಢೀಕೃತವಾಗಿದ್ದು, ಬಡವರು ಮತ್ತಷ್ಟು ಸಂಕಷ್ಟಗಳನ್ನು ಅನುಭವಿಸುಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಂತ ಎಂದು ವಿಷಾದಿಸಿದರು.ಭಾರತ ಇಂದು ಆಹಾರ ಸ್ವಾವಲಂಬಿಯಾಗಿದ್ದರೂ ದೇಶದ ಒಟ್ಟಾರೆ ಜನಸಂಖ್ಯೆಯ ಶೇ. 13.7ರಷ್ಟು ಜನ ಹಸಿವು ಮತ್ತು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. 2024ರ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಒಟ್ಟು 127 ದೇಶಗಳ ಪೈಕಿ ಭಾರತ 105ನೇ ಶ್ರೇಣಿಯಲ್ಲಿದ್ದು, ‘ಗಂಭೀರ’ವಾದ ಗುಂಪಿಗೆ ಸೇರ್ಪಡೆಯಾಗಿ ಎಂದು ಕಳವಳ ವ್ಯಕ್ತಪಡಿಸಿದರು.
ಬಳಿಕ ದೈಹಿಕ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಪರೇಡ್ ಮತ್ತು ಸಾಹಸಮಯ ಡ್ರಿಲ್ನ ಪ್ರದರ್ಶನ ನೀಡಿ ಗಮನ ಸೆಳೆದರು. ಕುಲಸಚಿವ ಎ. ಎಲ್. ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್, ಹಣಕಾಸು ಅಧಿಕಾರಿ ಪ್ರೊ. ಎಚ್. ಎನ್. ರಮೇಶ್, ಡಾ. ಎನ್. ಡಿ. ವಿರೂಪಾಕ್ಷ, ಡಾ. ಗಜಾನನ ಪ್ರಭು, ಡಾ. ರವೀಂದ್ರ ಗೌಡ, ವಿವಿಧ ವಿಭಾಗಗಳ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.